ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ, ಸೆ.10: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಈ ಆದೇಶ ಹೊರಡಿಸಿದ್ದು, ಕರ್ನಾಟಕದ ಬಹುತೇಕ ಎಲ್ಲಾ ಜಿಲ್ಲಾಧ್ಯಕ್ಷರ ಹೆಸರುಗಳ ಪಟ್ಟಿಯನ್ನು ಹೊಸದಿಲ್ಲಿಯಲ್ಲಿ ಬಿಡುಗಡೆ ಗೊಳಿಸಿದ್ದಾರೆ. ಕಿಶನ್ ಹೆಗ್ಡೆ ಇದುವರೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಿಶನ್ ಹೆಗ್ಡೆ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರೂ ಬಳಿಕ ಅದನ್ನು ತಡೆಹಿಡಿಯಲಾಗಿತ್ತು. ಇತ್ತೀಚೆಗೆ ಎಐಸಿಸಿ ವೀಕ್ಷಕರನ್ನು ನೇಮಿಸಿ ಪ್ರತಿ ಜಿಲ್ಲೆಯಲ್ಲಿ ಸಂಘಟನ್ ಅಭಿಯಾನ್ ಕಾರ್ಯಕ್ರಮದ ಮೂಲಕ ಪ್ರತಿ ಜಿಲ್ಲೆಗಳ ನಾಯಕರು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆದು ಅಧ್ಯಕ್ಷರ ಹೆಸರುಗಳನ್ನು ಅಂತಿಮಗೊಳಿಸಲಾಗಿತ್ತು.
ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವೆ
ಜಿಲ್ಲೆಯ ನಾಯಕರ ಹಾಗೂ ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯ ಗಳನ್ನು ಪಡೆದು ಪಕ್ಷ ನನ್ನನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಹೀಗಾಗಿ ಯಾರಿಗೆ ಅಸಮಾಧಾನವಿದೆ, ಯಾರಿಗೆ ಸಮಾಧಾನ ವಿದೆ ಎಂಬುದೀಗ ಮುಖ್ಯವಲ್ಲ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿ ಸುವ ಸವಾಲು ನನ್ನ ಮುಂದಿದೆ’ ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಹೇಳಿದ್ದಾರೆ.
ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಘೋಷಿಸಿ ಬಳಿಕ ಹಿಂಪಡೆಯಲಾಗಿತ್ತು. ಅದೊಂದು ನಡೆಯಬಾರದ ಕಹಿ ಘಟನೆ. ಅದಕ್ಕೆ ಕಾರಣವೇನೆಂಬುದು ನನಗೆ ಗೊತ್ತಿಲ್ಲ. ಆದರೆ ಅದು ಪಕ್ಷದ ನಿರ್ಣಯವಾಗಿದ್ದು, ಅದನ್ನು ಗೌರವಿಸಿದ್ದೇನೆ. ಇಂದು ಮಾತ್ರವಲ್ಲ, ಮುಂದೆಯೂ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದರು.
ಅಧಿಕಾರಕ್ಕಾಗಿ ನಾನು ಎಲ್ಲೂ ಹೋಗಿಲ್ಲ, ವಾಮಮಾರ್ಗವನ್ನೂ ಹಿಡಿದಿಲ್ಲ. ತಾಳ್ಮೆಯಿಂದ ಕಾದರೆ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ಸಿಗುತ್ತದೆ ಎಂಬುದಕ್ಕೆ ನಾನೇ ಉದಾಹರಣೆ. ಕಾಂಗ್ರೆಸ್ ಕಚೇರಿ ನನಗೆ ದೇವಾಲಯ ವಿದ್ದಂತೆ. ಅದನ್ನು ಸದಾ ಪೂಜಿಸುತ್ತೇನೆ. ಪಕ್ಷಕ್ಕೆ ನನ್ನ ಸೇವೆ ಅಗತ್ಯವಿರುವವರೆಗೆ ಅಧ್ಯಕ್ಷನಾಗಿ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದು ಅವರು ಹೇಳಿದರು.
ಕಾಂಗ್ರೆಸ್ ಪಕ್ಷ ತನಗೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಬದ್ಧನಾಗಿದ್ದು, ಪಕ್ಷದ ಸಿದ್ಧಾಂತಗಳಿಗೆ ಸದಾ ಬದ್ಧನಾಗಿರುತ್ತೇನೆ ಎಂದ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಪಕ್ಷಕ್ಕೆ ಕೇವಲ ನಾಯಕರಲ್ಲ, ಕಟ್ಟಕಡೆಯ ಕಾರ್ಯಕರ್ತನ ಅಗತ್ಯವಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಗುರುತಿಸಿ, ಅವರ ಮೂಲಕ ಪಕ್ಷವನ್ನು ಮತ್ತೆ ಸಂಘಟಿಸಲಾಗುವುದು ಎಂದರು.
2028ರ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲೂ ಕಾಂಗ್ರೆಸ್ ಶಾಸಕರು ಇರುವಂತೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ನಾವು ಜನರಿಗೆ ಸಿಮೆಂಟ್ ಭಾಗ್ಯ, ಗೋಹತ್ಯಾ ಭಾಗ್ಯ ನೀಡುವುದಿಲ್ಲ. ಜನಪರ ಯೋಜನೆಗಳಾದ ಗೃಹಜ್ಯೋತಿ ಸೇರಿದಂತೆ ಹಲವು ಯೋಜನೆಗಳನ್ನು ನೀಡುತ್ತೇವೆ. ಯುವಜನರನ್ನು ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಯಾವತ್ತೂ ಮಾಡಿಲ್ಲ. ಅವರ ಕೈಗೆ ಖಡ್ಗ ನೀಡುವ ಬದಲು ಪುಸ್ತಕ ನೀಡಿ, ಅವರನ್ನು ಸರಿದಾರಿಗೆ ತರುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತದೆ ಎಂದು ಕಿಶನ್ ಹೆಗ್ಡೆ ಹೇಳಿದರು.
ಮಲಗಿರುವ ಕಾರ್ಯಕರ್ತರನ್ನು ಎಬ್ಬಿಸುವ ಕೆಲಸ ಮಾಡಬೇಕಿದೆ. ಕಾರ್ಯಕರ್ತರು ತಪ್ಪು ಮಾಡಿಲ್ಲ; ಅವರನ್ನು ಎಬ್ಬಿಸದೆ ಇರುವುದು ನಮ್ಮ ತಪ್ಪು. ಹೀಗಾಗಿ ಎಲ್ಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಕೆಲಸ ಮಾಡಲಾಗುವುದು ಎಂದು ಅವರು ತುಂಬು ಭರವಸೆಯೊಂದಿಗೆ ಹೇಳಿದರು.






