ವೋಟ್ ಚೋರ್ ಗದ್ದಿ ಚೋಡ್ ಅಭಿಯಾನ| ಉಡುಪಿ ಜಿಲ್ಲೆಯಿಂದ 1,11,100 ಸಹಿ ಸಂಗ್ರಹ: ಐವನ್ ಡಿಸೋಜ

ಉಡುಪಿ, ಸೆ.19: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದಾದ್ಯಂತ ಹಮ್ಮಿಕೊಂಡಿರುವ ವೋಟ್ ಚೋರ್ ಗದ್ದಿ ಚೋಡ್ ಅಭಿಯಾನಕ್ಕೆ ಬೆಂಬಲವಾಗಿ ಉಡುಪಿ ಜಿಲ್ಲೆಯ 1111 ಬೂತ್ಗಳಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಕರೆಯಲಾದ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ಅಭಿ ಯಾನ ಈಗಾಗಲೇ ಜಿಲ್ಲೆಯಲ್ಲಿ ಆರಂಭಗೊಂಡಿದ್ದು, ಮುಂದಿನ 15 ದಿನಗಳ ಕಾಲ ನಡೆಯಲಿದೆ. ಪ್ರತಿ ಬೂತ್ನಲ್ಲಿ ಕನಿಷ್ಠ 100 ಸಹಿ ಸಂಗ್ರಹ ಮಾಡಿ ಒಟ್ಟು 1,11,100 ಸಹಿ ಸಂಗ್ರಹಿಸಿ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾ ಗುವುದು ಎಂದರು.
ಮತ ಕಳ್ಳತನದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಜಾಗ ಖಾಲಿ ಮಾಡಬೇಕೆಂದು ರಾಹುಲ್ ಗಾಂಧಿ ವೋಟ್ ಚೋರ್ ಗದ್ದಿ ಚೋಡ್ ಅಭಿಯಾನವನ್ನು ದೇಶದಾದ್ಯಂತ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದಲ್ಲಿ ಆಗಿರುವ ಮತ ಗಳ್ಳತನವನ್ನು ಚುನಾವಣಾ ಆಯೋಗದ ಮುಂದೆ ಇಡುವ ಅಭಿಯಾನ ಇದಾಗಿದೆ. ರಾಹುಲ್ ಗಾಂಧಿ ಪುರಾವೆ ಸಮೇತ ಹಗರಣ ಬಿಚ್ಚಿಟ್ಟಿದ್ದಾರೆ. ಮತದಾನದ ಹಕ್ಕಿನ ಕಳ್ಳತನ ನಿರಂತರವಾಗಿ ಆಗುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದರು.
ಕೇಂದ್ರ ಸರಕಾರ ಹಾಗೂ ಚುನಾವಣಾ ಆಯೋಗ ವಿರೋಧ ಪಕ್ಷ ನೀಡುವ ಸಲಹೆಗಳನ್ನು ಧನಾತ್ಮಕವಾಗಿ ತೆಗೆದುಕೊಳ್ಳಬೇಕು. ಸಲಹೆ ಸೂಚನೆಗಳನ್ನು ಧನಾತ್ಮಕವಾಗಿ ತೆಗೆದುಕೊಳ್ಳುವ ಶಕ್ತಿ ಆಡಳಿತ ಪಕ್ಷಕ್ಕೆ ಬರುವು ದಿಲ್ಲವೋ ಅದು ಒಳ್ಳೆಯ ಪ್ರಜಾಪ್ರಭುತ್ವ ಅಲ್ಲ ಎಂದು ಅವರು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ಗೋಪಾಲ ಪೂಜಾರಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಪ್ರಸಾದ್ರಾಜ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಳೆಬೈಲು, ಎಂ.ಎ.ಗಫೂರ್ ಮೊದಲಾದವರು ಉಪಸ್ಥಿತರಿದ್ದರು.







