ಮೋದಿ ಸರಕಾರಕ್ಕೆ 12 ವರ್ಷ: ಜೂ.5ರಿಂದ 21ರವರೆಗೆ ಅಭಿಯಾನ

ಉಡುಪಿ, ಜೂ.2: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರ ಐತಿಹಾಸಿಕ ಸಾಧನೆಗಳೊಂದಿಗೆ ಜೂ.7ರಂದು ಯಶಸ್ವೀ 12 ವರ್ಷಗಳನ್ನು ಪೂರೈಸಲಿದೆ. ಈ ನಿಟ್ಟಿನಲ್ಲಿ ಜೂ.5ರಿಂದ 21ರ ವರೆಗೆ ಜಿಲ್ಲೆಯಾದ್ಯಂತ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂದು ನಡೆದ ಅಭಿಯಾನದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜೂ.5ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲಾ ರೈತ ಮೋರ್ಚಾದ ಸಹಯೋಗದೊಂದಿಗೆ ನೀಲಾವರದ ಗೋಶಾಲೆಯಲ್ಲಿ ಅಭಿಯಾನದ ಉದ್ಘಾಟನೆ ನಡೆಯಲಿದೆ ಎಂದರು.
17 ದಿನಗಳ ಅಭಿಯಾನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ, ಮಾಧ್ಯಮ ಸಂವಾದ, ವಿಶೇಷ ಸಂಪರ್ಕ ಅಭಿಯಾನ, ಸ್ವಚ್ಛತಾ ಅಭಿಯಾನ, ಪ್ರಗತಿ ಪಥ ಯಾತ್ರೆ, ವಿಕಸಿತ ಭಾರತ ಸಂಕಲ್ಪ ಸಮಾವೇಶ, ಸಭಾಂಗಣದ ಸಭೆಗಳು, ಕಲ್ಯಾಣ ಶಿಬಿರ, ಮೋದಿ ಸರಕಾರದ ಸಾಧನೆಗಳ ಪ್ರದರ್ಶಿನಿ, ಸಾವಯವ ಕೃಷಿ ಕಾರ್ಯಾಗಾರ ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮಗಳನ್ನು ಎಲ್ಲರು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಅಭಿಯಾನದ ಜಿಲ್ಲಾ ಸಹ ಸಂಚಾಲಕ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿ ದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್, ಅಭಿಯಾನದ ಜಿಲ್ಲಾ ಸಂಚಾಲಕ ಮಹಾವೀರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಅಭಿಯಾನದ ಜಿಲ್ಲಾ ಸಹ ಸಂಚಾಲಕ ಕಮಲಾಕ್ಷ ಹೆಬ್ಬಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್ ವಂದಿಸಿದರು.






