ಉಪಲೋಕಾಯುಕ್ತರಿಂದ ವಿಚಾರಣೆ: 18 ಬಾಕಿ ಪ್ರಕರಣಗಳ ಇತ್ಯರ್ಥ

ಉಡುಪಿ, ಫೆ.5: ಉಡುಪಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ಬಾಕಿ ಉಳಿದಿರುವ ಪ್ರಕರಣಗಳ ವಿಚಾರಣೆಯನ್ನು ಕರ್ನಾಟಕ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆಯಿತು.
ಉಪ ಲೋಕಾಯುಕ್ತರು ವಿಚಾರಣೆ ಹಾಗೂ ತನಿಖೆ ಬಾಕಿ ಇರುವ ಪ್ರಕರಣ ಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ವಿಚಾರಣೆ ನಡೆಸಿದರು. ಜಿಲ್ಲೆಯಲ್ಲಿ ದಾಖಲಾಗಿರುವ ಒಟ್ಟು 43 ಪ್ರಕರಣಗಳ ಪೈಕಿ 10 ಪ್ರಕರಣಗಳು ದೂರುದಾರರು ವಿಚಾರಣೆಗೆ ಗೈರು ಹಾಜರಾಗಿದ್ದರು.
ಉಳಿದಂತೆ 33 ಪ್ರಕರಣಗಳ ಪೈಕಿ 18 ಪ್ರಕರಣಗಳನ್ನು ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಉಪ ಲೋಕಾಯುಕ್ತರು ಇತ್ಯರ್ಥ ಪಡಿಸಿದರು. ಇದರಲ್ಲಿ ಸರಕಾರಿ ಯೋಜನೆಗಳ ಅನುಷ್ಠಾನ ವಿಳಂಬ, ಅಧಿಕಾರಿಗಳ ಕರ್ತವ್ಯ ಲೋಪ ಸೇರಿದಂತೆ ವಿವಿಧ ದೂರುಗಳಿದ್ದವು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ರಾಜ್ಯ ಲೋಕಾಯುಕ್ತ ವಿಚಾರಣೆ ಉಪನಿಬಂಧಕ ರಂಗೇಗೌಡ, ಲೋಕಾಯುಕ್ತ ಮಂಗಳೂರು ವಿಭಾಗದ ಅಧೀಕ್ಷಕ ಸಿ.ಎ.ಸೈಮನ್ ಉಪಸ್ಥಿತರಿದ್ದರು.
ಅದೇ ರೀತಿ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಹಾಕಲಾದ ಮೂರು ಕೌಂಟರ್ಗಳಲ್ಲಿ ಸಾರ್ವಜನಿಕರಿಂದ ವಿವಿಧ ಅಹವಾಲು, ಅರ್ಜಿ, ದೂರುಗಳನ್ನು ಲೋಕಾಯುಕ್ತ ಅಧಿಕಾರಿಗಳು ಸ್ವೀಕರಿಸಿದರು.







