ಕುಡಿಯುವ ನೀರಿನ ಸಮಸ್ಯೆ| 3 ಗ್ರಾಮಗಳಿಗೆ ಟ್ಯಾಂಕರ್ ನೀರು: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಎ.24: ಉಡುಪಿ ಜಿಲ್ಲೆಯ ಸದ್ಯ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿಲ್ಲ. ಬ್ರಹ್ಮಾವರ ತಾಲೂಕಿನ ಮೂರು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸಂಬಂಧ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಕೆ. ತಿಳಿಸಿದ್ದಾರೆ.
ಕೊಕ್ಕರ್ಣೆ, ಕಳತ್ತೂರು, ಕರ್ಜೆ ಗ್ರಾಪಂ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ನೀರಿನ ಕೊರತೆ ಎದುರಾಗಿದ್ದು, ಅಲ್ಲಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗಿದೆ. ಅದೇ ರೀತಿ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಪಂ ವ್ಯಾಪ್ತಿಯ ಮನೆಗಳ ಬಾವಿಗಳಲ್ಲಿ ಉಪ್ಪು ನೀರಿನ ಸಮಸ್ಯೆ ಇದ್ದು, ಅಲ್ಲಿಗೂ ಟ್ಯಾಂಕರ್ ವ್ಯವಸ್ಥೆ ಮಾಡಬೇಕಾಗುತ್ತಿದೆ ಎಂದರು.
ಕೆಲ ದಿನಗಳ ಹಿಂದೆ ಜಿಲ್ಲೆಯಲ್ಲಿ 62 ಮೀ.ಮೀಟರ್ ಮಳೆಯಾಗಿದೆ. ಉಡುಪಿ ನಗರಕ್ಕೆ ನೀರು ಉಣಿಸುವ ಬಜೆ ಡ್ಯಾಂನಲ್ಲಿ ಸದ್ಯ ನೀರಿನ ಸಂಗ್ರಹ ಇದ್ದು, ಇದು ಮೇ 10ರವರೆಗೆ ಸಾಕಾಗಬಹುದು ಎಂದು ಅಂದಾಜಿಸಲಾಗಿದೆ ಎಂದು ಅವರು ಹೇಳಿದರು.
Next Story