ಬಿಪಿಎಲ್, ಅಂತ್ಯೋದಯ ಕಾರ್ಡ್ಗೆ ಇ-ಕೆವೈಸಿಗೆ ಸೆ.31 ಅಂತಿಮ ದಿನಾಂಕ

ಉಡುಪಿ, ಸೆ.12: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳಿಂದ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ(ಎಎ) ಪಡಿತರ ಚೀಟಿಯಲ್ಲಿರುವ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದ್ದು. ಈ ಪ್ರಕ್ರಿಯೆ ಪೂರ್ಣ ಗೊಳಿಸಲು ಸೆ.30 ಕೊನೆಯ ದಿನವಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಅರ್ಹ ಫಲಾನುಭವಿಗಳು ಕೂಡಲೇ ಸದ್ರಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಇ-ಕೆವೈಸಿ ಮಾಡಿಸಿ ಐದು ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆ ಮುಂದುವರಿಸುವ ಉದ್ದೇಶದಿಂದ, ಸರ್ಕಾರದಿಂದ ಇದೀಗ ಪುನಃ ಇ-ಕೆವೈಸಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿಯಿರುವ ಪಡಿತರ ಚೀಟಿದಾರರ ಪಟ್ಟಿಯನ್ನು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ನ್ಯಾಯಬೆಲೆ ಅಂಗಡಿ ಯವರಿಗೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇ-ಕೆವೈಸಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದ್ದು ಬಾಕಿ ಉಳಿದಿರುವ ಫಲಾನುಭವಿಗಳು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ ಇ-ಕೆವೈಸಿ ಮಾಡಿಸಲು ಸೂಚಿಸಲಾಗಿದೆ.
ವಿಶೇಷವಾಗಿ ಕಳೆದ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ ಸ್ಥಿತಿಯನ್ನು ನ್ಯಾಯಬೆಲೆ ಅಂಗಡಿಯಲ್ಲಿ ಪರಿಶೀಲಿಸಿಕೊಂಡು ಇ-ಕೆವೈಸಿ ಮಾಡಿಸಿಕೊಳ್ಳಬಹುದಾಗಿದೆ.
ಇ-ಕೆವೈಸಿಗೆ ಅಗತ್ಯ ದಾಖಲೆಗಳು: ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಎಲ್ಪಿಜಿ ಗ್ಯಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿಯನ್ನು ತೆಗೆದುಕೊಂಡು ಸಮೀಪದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಆಹಾರ, ನಾಗರಿಕ ಸರಬ ರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.






