ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಡಲ ಕೊರೆತ ತುರ್ತು ಕಾಮಗಾರಿಗೆ ತಲಾ 5 ಕೋಟಿ ರೂ. ಬಿಡುಗಡೆ: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಉಡುಪಿ, ಜೂ.12: ಮಳೆಗಾಲ ಪ್ರಾರಂಭಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಕಂಡುಬರುವ ಕಡಲ ಕೊರೆತದ ತುರ್ತು ಕಾಮಗಾರಿಗಳಿಗಾಗಿ ತಲಾ ಐದು ಕೋಟಿ ರೂ. ಅನುದಾನವನ್ನು ರಾಜ್ಯ ಸರಕಾರ ಬಿಡುಗಡೆ ಮಾಡಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಣಿಪಾಲದಲ್ಲಿರುವ ಉಡುಪಿ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ ಈ ವಿಷಯ ತಿಳಿಸಿದರು.
ಕಡಲು ಕೊರೆತ ವಿಷಯದ ಕುರಿತು ವಿಧಾನಸಭೆಯಲ್ಲಿ ನಡೆಸಿದ ಸಭೆಯಲ್ಲಿ ಮುಖ್ಯಮಂತ್ರಿಗಳು ಕಡಲಕೊರೆತಕ್ಕೆ ತಾತ್ಕಾಲಿಕ ಪರಿಹಾರವಾಗಿ ಪ್ರತಿ ಜಿಲ್ಲೆಗೆ ತಲಾ ಐದು ಕೋಟಿ ರೂ.ಬಿಡುಗಡೆಗೊಳಿಸುವುದಾಗಿ ತಿಳಿಸಿದ್ದಾರೆ ಎಂದರು.
ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ನ್ನು ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಮನ್ವಯದಿಂದ ಕೆಲಸ ಮಾಡಬೇಕಾಗಿದೆ. ಇದಕ್ಕಾಗಿ ಕರಾವಳಿಯ ಮೂರು ಜಿಲ್ಲೆಗಳ ಉಸ್ತುವಾರಿಗಳಾದ ದಿನೇಶ್ ಗುಂಡೂರಾವ್, ಮಂಕಾಳಿ ವೈದ್ಯ ಹಾಗೂ ತಾನೂ ಇರುವ ನಿಯೋಗವೊಂದು ಶೀಘ್ರವೇ ದಿಲ್ಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿಯಾಗಲಿದ್ದೇವೆ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದರು.
ಕಾನೂನು ಸುವ್ಯವಸ್ಥೆ ಸುಭದ್ರ: ಸಣ್ಣಪುಟ್ಟ ಘಟನೆಗಳನ್ನು ಹೊರತು ಪಡಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸುಭದ್ರ ವಾಗಿದೆ ಎಂದು ಸಮರ್ಥಿಸಿಕೊಂಡ ಸಚಿವರು, ಹನೆಹಳ್ಳಿಯ ದಲಿತ ಯುವಕ ಕೃಷ್ಣ ಅವರ ಕೊಲೆಗೆ ಸಂಬಂಧಿಸಿದಂತೆ ತನಗೆ ಹೆಚ್ಚಿನ ಮಾಹಿತಿ ಇಲ್ಲ. ಪೊಲೀಸರೊಂದಿಗೆ ಚರ್ಚಿಸಿ ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಡ ಹೇರುವುದಾಗಿ ತಿಳಿಸಿದರಲ್ಲದೇ, ಇಲ್ಲಿ ನಡೆದ ಗ್ಯಾಂಗ್ವಾರ್ ಬಗ್ಗೆ ಪೊಲೀಸರು ಶೀಘ್ರವೇ ಕ್ರಮಕೈಗೊಂಡಿದ್ದಾರೆ ಎಂದರು.
ನಟ ದರ್ಶನ್ ಪ್ರಕರಣದ ಕುರಿತು ಪ್ರಶ್ನಿಸಿದಾಗ, ಅವರ ವಿರುದ್ಧ ಕಾನೂನು ವ್ಯಾಪ್ತಿಯಲ್ಲಿ ಕ್ರಮಕೈಗೊಳ್ಳಲಾಗುತ್ತಿದೆ. ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಅದು ರಾಷ್ಟ್ರಪತಿಯಾಗಲಿ, ತಾರೆಯರಾಗಲಿ, ಶ್ರೀಸಾಮಾನ್ಯನೇ ಆಗಿರಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ನಟ ದರ್ಶನ್ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ಗೋ ಬ್ಯಾಕ್ ಕೂಗಿನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವೆ, ಜಿಲ್ಲಾ ಕಾಂಗ್ರೆಸ್ ಸಂಪೂರ್ಣವಾಗಿ ತನ್ನ ಪರವಾಗಿದೆ ಎಂದರು. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನು ಸಚಿವ ಕೆ.ಜೆ.ಜಾರ್ಜ್ಗೆ ವಹಿಸಲಾಗಿತ್ತು. ತನಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಜವಾಬ್ದಾರಿ ನೀಡಲಾಗಿತ್ತು. ಹೀಗಾಗಿ ಕ್ಷೇತ್ರದ ಜವಾಬ್ದಾರಿಯೊಂದಿಗೆ ಮಗನನ್ನು ಗೆಲ್ಲಿಸುವ ಹೊಣೆಯೂ ತನ್ನ ಮೇಲಿತ್ತು ಎಂದರು.
ಜಿಲ್ಲೆಯಲ್ಲಿ ಎಪಿಎಲ್ ಹಾಗೂ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿಯನ್ನು ಸ್ವೀಕರಿಸುವಂತೆ ಜನರಿಂದ ಬಂದಿರುವ ಬೇಡಿಕೆಯ ಕುರಿತು ಗಮನ ಸೆಳೆದಾಗ, ಆರೋಗ್ಯ ಸಂಬಂಧಿ ಸಮಸ್ಯೆ ಇದ್ದವರಿಗೆ ಮೂರು ದಿನಗಳಲ್ಲೇ ಪಡಿತರ ಚೀಟಿ ನೀಡಲು ಸೂಚಿಸಲಾಗಿದೆ. ಉಳಿದವರ ಕುರಿತಂತೆ ಆಹಾರ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಳಿ ಯಾವ ವಿಷಯಕ್ಕಾಗಿ ಕ್ಷಮೆ ಕೋರಿದರು ಎಂದು ಪ್ರಶ್ನಿಸಿದಾಗ, ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಮುಖ್ಯಮಂತ್ರಿಗಳು ನಾಲ್ಕು ಬಾರಿ ಬೆಳಗಾವಿಗೆ ಆಗಮಿಸಿ ಪ್ರಚಾರ ನಡೆಸಿದ್ದರು. ಅಲ್ಲಿ ಮೃಣಾಲ್ ಹೆಬ್ಬಾಳ್ಕರ್ ಗೆಲುವಿನ ನಿರೀಕ್ಷೆ ಇಟ್ಟುಕೊಂಡಿದ್ದರು. ಫಲಿತಾಂಶ ಬಂದಾಗ ಬೇಸರ ವ್ಯಕ್ತಪಡಿಸಿದರು. ಹಾಗೆ ಕ್ಷಮೆ ಕೋರಿದರು ಎಂದರು.
ಮಗನ ಸೋಲಿಗೆ ಕಾರಣ ಕೇಳಿದಾಗ, ಗೆಲುವಿಗಾಗಿ ಎಲ್ಲಾ ಪ್ರಯತ್ನ ಮಾಡಿದ್ದೇವೆ. ಸೋಲಿಗೆ ಯಾರ ಮೇಲೂ ಅಪವಾದ ಹೊರಿಸುವುದಿಲ್ಲ. ನಾನು ಸಹ ಎರಡು ಬಾರಿ ಸೋತಿದ್ದೇನೆ. ಮಗನಿಗೆ ಇದೊಂದು ಒಳ್ಳೆಯ ಪಾಠ ಎಂದರು.