ಸೆ.15ಕ್ಕೆ ಇಂದ್ರಾಳಿ ರೈಲ್ವೆ ಮೇಲ್ಸೇತುವೆಯನ್ನು ಸಂಚಾರಕ್ಕೆ ಮುಕ್ತಗೊಳಿಸಿ: ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಆ.16: ಸುದೀರ್ಘ ಕಾಲದಿಂದ ನೆನೆಗುದಿಗೆ ಬಿದ್ದಿರುವ ಹಾಗೂ ಹಲವು ಸಂಚಾರಿ ಸಮಸ್ಯೆಗಳಿಗೆ ಕಾರಣವಾಗಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯ ಕಾಂಕ್ರೀಟಿಕರಣ ಇದೀಗ ಮುಕ್ತಾಯ ಗೊಂಡಿದ್ದು, ಎರಡೂ ಬದಿಯ ಇಟ್ಮೆಂಟ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಸೆಪ್ಟಂಬರ್ 15ಕ್ಕೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಹೆದ್ದಾರಿ 169ಎಗೆ ಸಂಬಂಧಿಸಿದ ಹಾಗೂ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳ್ಳದೇ ಇರುವುದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆ, ಸಮಸ್ಯೆಗಳು ಉಂಟಾಗುತ್ತಿದೆ. ಅಧಿಕ ಮಳೆಯಿಂದಾಗಿ ರಸ್ತೆಗಳು ಹೊಂಡ-ಗುಂಡಿಗಳಿಂದ ಕೂಡಿದ್ದು, ಇವುಗಳ ದುರಸ್ಥಿಗೆ ಹಾಗೂ ನಿರ್ವಹಣೆಗೆ ಹೆಚ್ಚಿನ ಗಮನ ಕೊಡಬೇಕು ಎಂದವರು ಒತ್ತಾಯಿಸಿದರು.
ರಾಷ್ಟ್ರೀಯ ಹೆದ್ದಾರಿ 169ಎ ಕರಾವಳಿ ಜಂಕ್ಷನ್ನಿಂದ ಮಲ್ಪೆವರೆಗಿನ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದ ಪರಿಹಾರದ ಹಣವನ್ನು ಕಾಲಮಿತಿಯಲ್ಲಿ ನೀಡಬೇಕು ಎಂದ ಅವರು, ಸೆಪ್ಟಂಬರ್ ಮೊದಲ ವಾರದಿಂದ ರಸ್ತೆಯ ಕಾಂಕ್ರೀಟೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಕರಾವಳಿ ಜಂಕ್ಷನ್ನಲ್ಲಿ ಫ್ರೀ ಏರಿಯಾ ಅಳವಡಿಸುವ ಮೂಲಕ ಲಘು ವಾಹನಗಳಿಗೆ ಸಂಚರಿಸಲು ಅನುಕೂಲವಾಗು ವಂತೆ ಕಾಮಗಾರಿ ಮುಗಿಸ ಬೇಕು. ಶಾಶ್ವತ ಕಾಮಗಾರಿಗಳನ್ನು ಆರಂಭಿಸುವ ಮುನ್ನ ತಾತ್ಕಾಲಿಕ ರಸ್ತೆಗಳಲ್ಲಿರುವ ಹೊಂಡ-ಗುಂಡಿಗಳನ್ನು ತುರ್ತಾಗಿ ಮುಚ್ಚಿಸುವ ಕೆಲಸ ವಾಗಬೇಕು ಎಂದರು.
ಈಗಾಗಲೇ ಜಮೀನಿನ ದಾಖಲೆಗಳನ್ನು ನೀಡದಿರುವ 18 ಮಂದಿಗೆ ನ್ಯಾಯಾಲಯದ ಮೂಲಕ ಪರಿಹಾರ ನೀಡಲು ಸಾಧ್ಯವಾಗುವಂತೆ ಹಣವನ್ನು ಠೇವಣಿ ಇರಿಸಲು ಕ್ರಮಕೈಗೊಳ್ಳುವಂತೆ ಕೋಟ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಸಣ್ಣ ಪುಟ್ಟ ಕಾರಣಗಳಿಗಾಗಿ ಬಾಕಿ ಉಳಿದಿರುವ 90 ಭೂಸ್ವಾಧೀನ ಪ್ರಕರಣಗಳಿಗೆ 2 ದಿನಗಳ ಒಳಗೆ 3ಡಿ ಸಮರ್ಪಕಗೊಳಿಸಿ ಬೆಂಗಳೂರು ಆರ್ಓ ಕಚೇರಿಗೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಹೆಬ್ರಿಯಿಂದ ಚಾರದವರೆಗೆ ಮತ್ತು ಆಗುಂಬೆ ಘಾಟ್ನ ಹೆದ್ದಾರಿಯ ಯೋಜನಾ ವರದಿ (ಡಿ.ಪಿ.ಆರ್) ಸಿದ್ಧವಾಗಿದೆ. ಈ ಎರಡೂ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಗಳನ್ನು ತ್ವರಿತವಾಗಿ ಫೂರ್ಣಗೊಳಿಸಿ, ಕಾಮಗಾರಿಗಳನ್ನು ಕೂಡಲೇ ಪ್ರಾರಂಭಿಸಬೇಕು ಎಂದೂ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬಕ್ಕೆ ಆಸ್ಪದವಿಲ್ಲದಂತೆ ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದೂ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಹಾಗೂ ಇಂಜಿನಿಯರ್ಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಾಹನಗಳ ಬದಲಿ ಮಾರ್ಗ ವ್ಯವಸ್ಥೆಗೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಅಲ್ಲಿನ ರಸ್ತೆ ಕಾಮಗಾರಿಗಳನ್ನು ಕೂಡಲೇ ಕೈಗೊಳ್ಳಬೇಕು. ಜಿಲ್ಲೆಯ ಇತರೆ ಭಾಗಗಳಲ್ಲಿ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸಬೇಕು. ರಸ್ತೆ ಕಾಮಗಾರಿಗಳನ್ನು ಕೈಗೊಳ್ಳುವಾಗ ಸಾರ್ವಜನಿಕ ವಾಹನಗಳ ಚಾಲನೆಗೆ ಅಗತ್ಯವಿರುವ ಬದಲಿ ತಾತ್ಕಾಲಿಕ ರಸ್ತೆಗಳನ್ನು ಸಹ ಮಾಡಿಕೊಡಬೇಕು ಎಂದು ಅಭಿಯಂತರರಿಗೆ ಸೂಚನೆಗಳನ್ನು ನೀಡಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಘು ವಾಹನಗಳಿಗೆ ಸಂಚರಿಸಲು ಒಂದು ಬದಿಯಲ್ಲಿ ಅವಕಾಶ ಕಲ್ಪಿಸಿ, ಭಾರೀ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗ ದ ವ್ಯವಸ್ಥೆ ಮಾಡುವುದರೊಂದಿಗೆ ಕಾಮಗಾರಿ ಆರಂಭಿಸುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಡಿಎಫ್ಓ ಗಣಪತಿ, ಎಎಸ್ಪಿ ಸುಧಾಕರ್ ನಾಯಕ್, ಪೌರಾಯುಕ್ತ ಮಹಾಂತೇಶ ಹಂಗರಗಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಇಂಜಿನಿಯರ್ಗಳು ಉಪಸ್ಥಿತರಿದ್ದರು.







