ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

ಉಡುಪಿ, ಅ.16: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.
ಉಡುಪಿ ಪತ್ರಿಕಾ ಭವನದಲ್ಲಿ ಬುಧವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 9ಗಂಟೆಗೆ ಸಂಘದ ಧ್ವಜಾರೋಹಣವನ್ನು ನೆರವೇರಿಸಲಿಸಲಾಗುವುದು. ಕ್ರೀಡಾಕೂಟಕ್ಕೆ ಉಡುಪಿ ಜಿಲ್ಲಾ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಚಾಲನೆ ನೀಡಲಿರುವರು. ಬೆಳಗ್ಗೆ 10.30ಕ್ಕೆ ಕ್ರೀಡಾ ಕೂಟವನ್ನು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಉದ್ಘಾಟಿಸಲಿರುವರು ಎಂದರು.
ಇದೇ ಸಂದರ್ಭದಲ್ಲಿ ವಿವಿಧ ತಾಲೂಕು ಸಂಘಗಳ ಸದಸ್ಯರಿಂದ ಪಥ ಸಂಚಲನ ನಡೆಯಲಿದ್ದು, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಶನ್ ಅಧ್ಯಕ್ಷ ಹರಿ ಪ್ರಸಾದ್ ರೈ ಕ್ರೀಡಾಜ್ಯೋತಿ ಹಸ್ತಾಂತರಿಸಲಿದ್ದಾರೆ. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಉದ್ಯಾವರ ಕುತ್ಪಾಡಿ ಯಶಸ್ವಿ ಫಿಶ್ಮಿಲ್ ನಿರ್ದೇಶಕ ಉದಯ ಕುಮಾರ್, ಉಡುಪಿ ನಗರಸಭೆ ಪೌರಾಯುಕ್ತ ರಾಯಪ್ಪ ಮುಖ್ಯ ಅತಿಥಿಗಳಾಗಿರುವರು.
ಓಟ, ಉದ್ದ ಜಿಗಿತ, ರಿಲೇ, ಹಗ್ಗಜಗ್ಗಾಟ, ಮಡಕೆ ಒಡೆಯುವ ಸ್ಪರ್ಧೆ, ಸ್ಪೋ ಬೈಕ್ ರೇಸ್, ಈಜು ಸೇರಿದಂತೆ ವಿವಿಧ ಮನರಂಜನಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. 40ವರ್ಷ ಕೆಳಗಿನ, 40ವರ್ಷ ಮೇಲ್ಪಟ್ಟ ಹಾಗೂ 50ವರ್ಷ ಮೇಲ್ಪಟ್ಟ ಒಟ್ಟು ಮೂರು ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ನವೆಂಬರ್ ತಿಂಗಳಲ್ಲಿ ನಡೆಯುವ ರಜತ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು.







