ಏಕತೆ, ದೇಶಾಭಿಮಾನ ಮತ್ತಷ್ಟು ಬಲಗೊಳ್ಳಬೇಕಿದೆ: ಎಸಿ ರಶ್ಮಿ

ಕುಂದಾಪುರ: ಸ್ವಾತಂತ್ರ್ಯಕ್ಕಾಗಿ ದೇಶದ ಅನೇಕ ಮಂದಿ ತನು- ಮನವನ್ನು ಸಮರ್ಪಿಸಿದ್ದಾರೆ. ಅವರ ತ್ಯಾಗ, ಬಲಿದಾನವನ್ನು ನೆನೆಯುವ ದಿನವಿದು. ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನು ಇಂದಿಗೂ ಗಟ್ಟಿಯಾಗಿ ಕಾಪಾಡಿಕೊಂಡು ಬರುತ್ತಿರುವ ಸೈನಿಕರನ್ನು ಸ್ಮರಿಸಬೇಕು. ಸ್ವಾತಂತ್ರ್ಯ ಬರುವ ಸಮಯದಲ್ಲಿ ನಮ್ಮಲ್ಲಿರುವ ಏಕತೆ, ದೇಶಾಭಿಮಾನ ಇನ್ನೂ ಕೂಡ ಎಲ್ಲರಲ್ಲೂ ಮತ್ತಷ್ಟು ಬಲಗೊಳ್ಳಬೇಕಿದೆ ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್. ಹೇಳಿದ್ದಾರೆ.
ಕುಂದಾಪುರ ತಾಲೂಕು ಆಡಳಿತದ ನೇತೃತ್ವದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ಶುಕ್ರವಾರ ನಡೆದ 79ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ಪ್ರತಿಯೊಬ್ಬ ಭಾರತೀಯನಲ್ಲಿ ನನ್ನ ದೇಶ ಎಂಬ ದೇಶಾಭಿಮಾನ ಸೃಷ್ಟಿಯಾಗಬೇಕು. ಭಾರತವಿಂದು ವಿಶ್ವದ ಬಲಿಷ್ಠ ರಾಷ್ಟ್ರವಾಗಿ ಎಲ್ಲ ರಂಗದಲ್ಲೂ ಮುಂಚೂಣಿಯಲ್ಲಿದೆ. ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಿರ್ಮಾಣಕ್ಕೆ ಪ್ರಬಲ ಸಂವಿಧಾನವನ್ನು ನೀಡಿದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆಯನ್ನು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ವಹಿಸಿದ್ದರು. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಮುಖ್ಯಾಧಿಕಾರಿ ಆನಂದ್, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಕುಂದಾಪುರ ಡಿವೈಎಸ್ಪಿ ಎಚ್.ಡಿ.ಕುಲಕರ್ಣಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರೇಮಾನಂದ್ ಕೆ., ಫಿಜಿಶಿಯನ್ ಡಾ.ನಾಗೇಶ್, ಯುವಜನಾ ಸೇವಾ ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಕಿಟ್ಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಕುಂದಾಪುರ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶೋಭಾ ಶೆಟ್ಟಿ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ನಿರೂಪಿಸಿದರು.







