ಹೊರಜಿಲ್ಲೆಗಳ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯವಾಗದಂತೆ ಎಚ್ಚರ ವಹಿಸಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ: ಜಿಲ್ಲೆಗೆ ಉದ್ಯೋಗ ಅರಸಿ ಹೊರ ಜಿಲ್ಲೆಗಳಿಂದ ಬರುವ ವಲಸೆ ಕಾರ್ಮಿಕರುಗಳ ಮೇಲೆ ದೌರ್ಜನ್ಯಗಳಾಗದಂತೆ ಎಚ್ಚರವಹಿಸಲು ಸೂಕ್ತಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಅಧಿಕಾರಿಗಳಿಗೆ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆ ಹಾಗೂ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಹೊರ ಜಿಲ್ಲೆಗಳಿಂದ ಸಾಮಾನ್ಯವಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕಾರ್ಮಿಕರೇ ಹೆಚ್ಚಾಗಿ ಉದ್ಯೋಗ ಅರಸಿ ಜಿಲ್ಲೆಗೆ ಬರುತ್ತಿದ್ದಾರೆ. ಅವರುಗಳಿಗೆ ಉದ್ಯೋಗ ನೀಡುವ ಗುತ್ತಿಗೆದಾರರು, ಮಾಲಕರು, ಕಾರ್ಮಿಕ ಕಾಯ್ದೆಯಡಿ ಘೋಷಿಸಿರುವ ಕನಿಷ್ಠ ವೇತನ, ಭವಿಷ್ಯ ನಿಧಿ, ಇ.ಎಸ್.ಐ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ನೋಡಿ ಕೊಳ್ಳಬೇಕು ಎಂದು ಸೂಚನೆ ನೀಡಿದರು.
ಅವರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಗಳಿಗೆ ಕರೆದೊಯ್ಯುವಾಗ ಗೂಡ್ಸ್ ವಾಹನಗಳನ್ನು ಬಳಸಬಾರದು. ಕಾರ್ಮಿಕರಿಗೆ ತಂಗಲು ಅವಕಾಶ ನೀಡಿದ ಸ್ಥಳದಲ್ಲಿ ಅವರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮತ್ತಿತರ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವುದರೊಂದಿಗೆ ಅವರುಗಳ ಆರೋಗ್ಯ ಸುರಕ್ಷತೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಕ್ರಮವಹಿಸಬೇಕು. ಈ ಬಗ್ಗೆ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ನುಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಮೇಲೆ ದೌರ್ಜನ್ಯ ಪ್ರಕರಣಗಳು ಜನಸಾಮಾನ್ಯರು ನಡೆಸ ದಂತೆ ಅರಿವು ಮೂಡಿಸು ವುದರ ಜೊತೆಗೆ, ದೌರ್ಜನ್ಯ ಎಸಗಿದ್ದಲ್ಲಿ ಕಾನೂನಿನ ಅಡಿಯಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತವೆ ಎಂಬುದನ್ನು ಸಹ ತಿಳಿಸಬೇಕು ಎಂದರು.
ಜಿಲ್ಲೆಯಲ್ಲಿ 9 ದೌರ್ಜನ್ಯ ಪ್ರಕರಣ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 9 ದೌರ್ಜನ್ಯ ಪ್ರಕರಣಗಳಾಗಿದ್ದು, ಈಗಾಗಲೇ 2 ಪ್ರಕರಣಗಳಿಗೆ ಪರಿಹಾರ ನೀಡಲಾಗಿದೆ. 5 ಪ್ರಕರಣಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಜಾರಿ ಯಲ್ಲಿದ್ದು, ಒಂದು ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಗೂ ಇನ್ನೊಂದು ಪ್ರಕರಣವನ್ನು ಎಸ್ಸಿ.ಎಸ್ಟಿ ಕಾಯ್ದೆಯಡಿ ಕೈಬಿಡಲಾಗಿದೆ ಎಂದರು.
ಜಿಲ್ಲೆಯಲ್ಲಿ ಪೌರಕಾರ್ಮಿಕರಾಗಿ ನೇಮಕಗೊಂಡು ಸಿಂಧುತ್ವವನ್ನು ನೀಡಲಾದ 104 ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ನಡೆಯದಂತೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತಿ ಗಳು ಅಗತ್ಯ ಕ್ರಮ ವಹಿಸಬೇಕು. ಇಂತಹ ಪ್ರಕರಣಗಳು ಅಕ್ಷಮ್ಯ ಅಪರಾಧವಾಗಿರುತ್ತದೆ. ಅಧಿಕಾರಿಗಳು ಈ ಬಗ್ಗೆ ಪುನರ್ ಪರಿಶೀಲನೆ ನಡೆಸಬೇಕು ಎಂದರು.
ಸಫಾಯಿ ಕರ್ಮಚಾರಿ ನಿಗಮದಿಂದ ನೀಡುವ ವಿವಿಧ ಯೋಜನೆಗಳ ಸೌಲಭ್ಯವನ್ನು ಎಲ್ಲಾ ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಪಡೆಯುವಂತಾಗಲು ಅವರಿಗೆ ಈ ಬಗ್ಗೆ ಸೂಕ್ತ ಮಾಹಿತಿಗಳನ್ನು ನೀಡಿ, ಯೋಜನೆಯ ಲಾಭ ಪಡೆಯುವಂತೆ ಕ್ರಮವಹಿಸಬೇಕು ಎಂದರು.
ಪರಿಸರ ಅಭಿಯಂತರರು ಪ್ರತಿದಿನ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯ ಚಟುವಟಿಕೆ ನಡೆಸುವ ಕುರಿತು ಸ್ಥಳ ಪರಿಶೀಲನೆ ಮಾಡಬೇಕು. ಪೌರ ಕಾರ್ಮಿಕರಿಗೆ ಸಾಮಾನ್ಯ ಆರೋಗ್ಯ ತಪಾಸಣೆಯನ್ನು ಆಗಾಗ ಮಾಡಿಸಬೇಕು. ಅವರಿಗೆ ಪ್ರತಿದಿನ ಉತ್ತಮ ಗುಣಮಟ್ಟದ ಬೆಳಗ್ಗಿನ ಉಪಾಹಾರದೊಂದಿಗೆ ಮೊಟ್ಟೆಯನ್ನು ಸಹ ನೀಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಸರಕಾರಿ ಅಭಿಯೋಜಕ ಜಯರಾಮ್ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಪೌರಾಯುಕ್ತ ರಾಯಪ್ಪ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರಾದ ವಾಸುದೇವ ಹೆಚ್.ಎಸ್, ಉದಯ ಪಂಬದ, ಗೌರಿ ಕೆಂಜೂರು, ಬಾಲಗಂಗಾಧರ ಬಿ ಗೌಡ ಮತ್ತಿತರರು ಉಪಸ್ಥಿತರಿದ್ದರು.
ನ.7 ಪ್ರತಿಭಾ ಪುರಸ್ಕಾರ ದಿನ
ನವೆಂಬರ್ 7 ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಶಾಲೆಗೆ ಸೇರಿದ ದಿನವಾಗಿದ್ದು, ಈ ದಿನವನ್ನು ಪ್ರತಿಭಾ ಪುರಸ್ಕಾರ ದಿನವೆಂದು ಆಚರಿಸಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಎಸೆಸೆಲ್ಸಿ, ಪಿಯುಸಿ, ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದವರಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.







