ವಾರಾಹಿ ಏತ ನೀರಾವರಿ ಯೋಜನೆ ಬಗ್ಗೆ ಸಿಎಂ, ಡಿಸಿಎಂ ಭೇಟಿ
ಕುಂದಾಪುರ, ಡಿ.30: ಸಿದ್ದಾಪುರ ಏತ ನೀರಾವರಿ ಯೋಜನೆಯ ಪ್ರಸ್ತುತ ಗೊಂದಲ ಬಗೆಹರಿಸಲು ಒತ್ತಾಯಿಸಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿ, ಮನವಿ ಸಲ್ಲಿಸಿದ್ದಾರೆ.
ಪ್ರಸ್ತುತ ನಡೆಸಲು ಉದ್ದೇಶಿಸಿರುವ ಸ್ಥಳದಲ್ಲಿ ಕಾಮಗಾರಿ ಮುಂದು ವರೆಸುವುದರಿಂದ ಭವಿಷ್ಯದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟ ಅವರು, ತಾಂತ್ರಿಕ ತಜ್ಞರ ಅಭಿಪ್ರಾಯ ಪಡೆದುಕೊಂಡು ಈಗಾಗಲೇ ಸೂಚಿತವಾಗಿರುವ ಪ್ರದೇಶಗಳಿಗೆ ನಿರೂಣಿಸಲು, ಆದ್ಯತೆಯ ನೆಲೆಯಲ್ಲಿ ಏತ ನೀರಾವರಿ ಯೋಜನೆಯನ್ನು ಪರಿಗಣಿಸುವಂತೆ ಮನವಿ ಮಾಡಿದರು.
ಮಾಜಿ ಶಾಸಕರ ಮನವಿಗೆ ಸಿಎಂ ಹಾಗೂ ಡಿಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಶೀಘ್ರದಲ್ಲೇ ವಾರಾಹಿ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಆಡಳಿತ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಹರೀಶ್ ತೋಳಾರ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.







