ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪರೀಕ್ಷೆ ನಡೆಸಿ: ಉಡುಪಿ ಡಿಸಿ ಸ್ವರೂಪಾ ಸೂಚನೆ

ಉಡುಪಿ, ಎ.1: ಜಿಲ್ಲಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಡ್ರಗ್ ಟೆಸ್ಟ್ ಕಿಟ್’ಗಳನ್ನು ಕಡ್ಡಾಯ ವಾಗಿ ದಾಸ್ತಾನು ಇರಿಸಿಕೊಳ್ಳಬೇಕು. ಅದೇ ರೀತಿ ವಸತಿ ನಿಲಯಗಳ ವಿದ್ಯಾರ್ಥಿಗಳಿಗೂ ಮಾದಕದ್ರವ್ಯ ಪರೀಕ್ಷಾ ಕಿಟ್ಗಳ ಮೂಲಕ ಪರೀಕ್ಷೆ ನಡೆಸುವಂತೆ ಹಾಗೂ ಮಾದಕ ವಸ್ತುಗಳ ಬಳಕೆಯ ಪ್ರಕರಣ ಗಳು ಪತ್ತೆ ಯಾದಲ್ಲಿ ಸಂಬಂಧಪಟ್ಟ ಹಾಸ್ಟೆಲ್ ವಾರ್ಡನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದ್ದಾರೆ.
ಬುಧವಾರ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ನಾಲ್ಕನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಯುವಜನತೆಯಲ್ಲಿ ಮಾದಕದ್ರವ್ಯ ಸೇವನೆಯಿಂದ ಭವಿಷ್ಯದಲ್ಲಿ ಆಗಬಹುದಾದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಅವರು ಅವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಬೇಕು ಎಂದೂ ಜಿಲ್ಲಾದಿಕಾರಿ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ಮಾದಕ ದ್ರವ್ಯಗಳ ಸೇವೆನೆಯಿಂದ ಮನುಷ್ಯನಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ ಹಾಗೂ ಆರ್ಥಿಕ ನಷ್ಟ ಉಂಟಾಗುವುದಲ್ಲದೇ ಹಲವಾರು ರೀತಿಯ ಗಂಭೀರ ಕಾಯಿಲೆಗಳಿಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಜೊತೆಗೆ ಅಂಥವರ ಶಾರೀರಿಕ ಆರೋಗ್ಯದ ಜೊತೆಗೆ ಮಾನಸಿಕ ಅಸಮತೋಲನ ಉಂಟಾಗಿ ಆರೋಗ್ಯ ಹದಗೆಡುತ್ತದೆ. ಮಾದಕ ವ್ಯಸನಗಳಿಂದ ಉಂಟಾಗುವ ದುಷ್ಪರಿಣಾಮದ ಬಗ್ಗೆ ಯುವಜನತೆಯಲ್ಲಿ ಅರಿವು ಮೂಡಿಸಬೇಕು. ಶಾಲಾ ಮತ್ತು ಕಾಲೇಜುಗಳಲ್ಲಿ ಮಾದಕ ದ್ರವ್ಯ ಮುಕ್ತ ವಾತಾವರಣವನ್ನು ಕಲ್ಪಿಸಲು ಆದ್ಯತೆ ನೀಡಬೇಕು ಎಂದರು.
ಮೆಡಿಕಲ್ ಸ್ಟೋರ್ಗಳಿಗೆ ಸೂಚನೆ: ಜಿಲ್ಲೆಯ ಪ್ರತಿಯೊಂದು ಔಷಧ ಅಂಗಡಿಗಳಲ್ಲಿ ವೈದ್ಯರು ಶಿಫಾರಸ್ಸು ಮಾಡುವ ಔಷಧಿಗಳನ್ನು ಮಾತ್ರ ರೋಗಿಗಳಿಗೆ ನೀಡಬೇಕು. ‘ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ’ ಎಂಬ ಫಲಕವನ್ನು ಕಡ್ಡಾಯವಾಗಿ ಔಷಧ ಅಂಗಡಿಗಳಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್ಗಳಲ್ಲಿ ಸಿಸಿಟಿವಿಯನ್ನು ಕಡ್ಡಾಯವಾಗಿ ಆಳವಡಿಸಿರುವ ಬಗ್ಗೆ ಅಧಿಕಾರಿಗಳಿಂದ ನಿಯಮಿತವಾಗಿ ಪರಿಶೀಲನೆ ನಡೆಯಬೇಕು ಎಂದರು.
ತಂಬಾಕು ಮುಕ್ತ: ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಗಳು ಜಂಟಿಯಾಗಿ ಪ್ರತೀ ಶಾಲಾ- ಕಾಲೇಜುಗಳಿಗೆ ಭೇಟಿ ನೀಡಿ, ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯ ಮಾನದಂಡಗಳಿಗೆ ಬದ್ದವಾಗಿ ರುವುದರ ಕುರಿತು ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿರುವ ಒಟ್ಟು 1058 ಶಾಲೆಗಳಲ್ಲಿ 17 ಶಾಲೆಗಳು ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಎಂದು ದೃಢೀಕರಿಸಿ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಲು ಬಾಕಿ ಇವೆ. ಇದು ಪೂರ್ಣಪ್ರಮಾಣದಲ್ಲಿ ನಡೆಯಬೇಕು ಎಂದರು.
ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್ಗಳ ಗ್ರಾಮಗಳನ್ನು ಈಗಾಗಲೇ ತಂಬಾಕು ಮುಕ್ತ ಗ್ರಾಮವನ್ನಾಗಿ ಘೋಷಿಸ ಲಾಗಿದೆ. ಉಳಿದ ಗ್ರಾಮಗಳನ್ನು ಸಹ ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಅಲ್ಲಿನ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತಿಯ ಜನಪ್ರತಿನಿಧಿಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರ ಪಡೆಯಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಂಗಡಿಗಳ ಮೇಲೆ 104ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಒಟ್ಟು 1249ಕ್ಕೂ ಅಧಿಕ ಪ್ರಕರಣಗಳನ್ನು ದಾಖಲಿಸಿಕೊಂಡು 2,18,050 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 173 ಪ್ರಕರಣಗಳಿಂದ 20,250 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎಎಸ್ಪಿ ಸುಧಾಕರ ನಾಯಕ್, ಡಿಹೆಚ್ಓ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಕುಟಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ನಾರಾಯಣ ಸ್ವಾಮಿ, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.
ಕೈಗಾರಿಕಾ ಘಟಕಗಳ ತಪಾಸಣೆ
ಕೆಲವು ಕೈಗಾರಿಕಾ ಘಟಕಗಳಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ತಯಾರಿಕೆ ನಡೆಯುವ ಸಾಧ್ಯತೆಗಳು ಇರುತ್ತವೆ. ಈ ಬಗ್ಗೆ ಕಾರ್ಮಿಕ ಇಲಾಖೆ, ಕೈಗಾರಿಕಾ ಇಲಾಖೆ ಅಧಿಕಾರಿಗಳು ಆಗಿಂದಾಗ್ಗೆ ಅವುಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸೂಚಿಸಿದರು.
ಮಾದಕ ದ್ರವ್ಯಗಳ ಸೇವನೆಗೆ ಒಳಗಾದಲ್ಲಿ ಅದರಿಂದ ಹೊರಬರುವುದು ಕಷ್ಟಸಾಧ್ಯ. ಈ ನಿಟ್ಟಿನಲ್ಲಿ ಮಾದಕ ವ್ಯಸನಗಳಿಂದ ದೂರ ಉಳಿಯುವಂತೆ ಮಾಡಲು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾದಕ ವ್ಯಸನದ ದುಷ್ಪರಿಣಾಮದ ಕುರಿತಂತೆ ಪ್ರಬಂಧ, ಭಾಷಣ ಸ್ಪರ್ಧೆಗಳು, ಚರ್ಚಾಕೂಟ, ಕಿರುನಾಟಕ ಸ್ಪರ್ಧೆಗಳನ್ನು ಪ್ರತೀ ತಿಂಗಳು ಆಯೋಜಿಸಬೇಕು ಎಂದು ಸಲಹೆ ನೀಡಿದರು.






