ಓದುವ ಹವ್ಯಾಸವನ್ನು ಬಾಲ್ಯದಲ್ಲೇ ರೂಢಿಸಿಕೊಳ್ಳಿ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

ಉಡುಪಿ, ಜು.19: ಪುಸ್ತಕಗಳಲ್ಲಿ ಆಗಾಧ ಮಾಹಿತಿ ಸಿಗುವುದರಿಂದ ಮಕ್ಕಳು ಬಾಲ್ಯದಿಂದಲೇ ಓದುವ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ. ವಿದ್ಯಾಕುಮಾರಿ ಕಿವಿಮಾತು ಹೇಳಿದ್ದಾರೆ.
ನಗರದ ಅಜ್ಜರಕಾಡು ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಮಂಗಳವಾರ ಓದುವ, ಡಿಜಿಟಲ್ ಓದುವ ದಿನ, ಓದುವ ತಿಂಗಳು ಆಚರಣೆ ಪ್ರಯುಕ್ತ ನಡೆದ ಪುಸ್ತಕ ಪ್ರದರ್ಶನ ಮತ್ತು ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಓದು ನಮ್ಮ ಹವ್ಯಾಸವಾದಾಗ ಮುಂದೆ ಓದುವ ಪ್ರವೃತ್ತಿ ಬೆಳೆಯುತ್ತದೆ. ಗ್ರಂಥಾಲಯಗಳು ವಿವಿಧ ತರಹದ ಸ್ಪರ್ಧೆಗಳನ್ನು ಏರ್ಪಡಿಸುವುದರ ಮೂಲಕ ಓದುವ ಪ್ರವೃತ್ತಿಯನ್ನು ಉತ್ತೇಜಿಸಬೇಕು. ಇದು ಹೈಟೆಕ್ ಗ್ರಂಥಾಲಯವಾಗಿದ್ದು, ಎಲ್ಲಾ ತರಹದ ಪುಸ್ತಕಗಳು ಲಭ್ಯವಿದೆ. ವಿದ್ಯಾರ್ಥಿ ಗಳು ಹಾಗೂ ಸಾರ್ವಜನಿಕರು ಗ್ರಂಥಾಲಯದ ಸದ್ಬಳಕೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ನಗರದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿಎಸ್.ದೇವೇಂದ್ರ ಪೆಜತ್ತಾಯ ಬರೆದಿರುವ 400ಕ್ಕೂ ಅಧಿಕ ಪುಸ್ತಕಗಳನ್ನು ಉಚಿತವಾಗಿ ಜಿಲ್ಲಾಧಿಕಾರಿಯವರ ಮುಖಾಂತರ ಗ್ರಂಥಾಲಯಕ್ಕೆ ಹಸ್ತಾಂತರ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ, ಸಾಹಿತಿ ಸಂಗೀತ ಜಾನ್ಸನ್ ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಗ್ರಂಥಪಾಲಕಿ ರಂಜಿತ ಸಿ ನಿರೂಪಿಸಿ, ಶಕುಂತಳಾ ಕುಂದರ್ ವಂದಿಸಿದರು.