ಉಡುಪಿ ಜಿಲ್ಲಾಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬ

ಉಡುಪಿ, ನ.22: ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಉಡುಪಿ ಜಿಲ್ಲಾಸ್ಪತ್ರೆಯ ಕಾಮಗಾರಿ ಇನ್ನೂ ಕೂಡ ಪೂರ್ಣಗೊಂಡಿಲ್ಲ. ಈ ಮಧ್ಯೆ ಸಿವಿಲ್ ಕಾಮಗಾರಿ ಪೂರ್ಣಗೊಳಿಸಲು ಟೆಂಡರ್ ಕರೆಯಲಾಗಿದ್ದು, ಸಲಕರಣೆ ಹಾಗೂ ಫನಿರ್ಚರ್ ಗಾಗಿ 33 ಕೋಟಿ ರೂ. ಮೊತ್ತದ ಪ್ರಸ್ತಾಪವನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದೆ.
2022ರಲ್ಲಿ ಕಾಮಗಾರಿ ಆರಂಭಗೊಂಡಿದ್ದು, ಬಹುತೇಕ ಸಿವಿಲ್ ಕಾಮಗಾರಿ ಪೂರ್ಣಗೊಂಡಿದೆ. ಇನ್ನು ರಸ್ತೆ, ಪಾರ್ಕಿಂಗ್ ವ್ಯವಸ್ಥೆ, ಹೆಚ್ಚು ಸಾಮರ್ಥ್ಯದ ಜನರೇಟರ್, ಎಸ್ಟಿಪಿ ಸೇರಿದಂತೆ ಇತರ ಕಾಮಗಾರಿ ಬಾಕಿ ಇದ್ದು, ಇದಕ್ಕಾಗಿ 4ಕೋಟಿ ರೂ. ಮೊತ್ತದ ಟೆಂಡರ್ ಕರೆಯಲಾಗಿದೆ. ಈ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ಆರೋಗ್ಯ ಇಲಾಖೆಯ ಇಂಜಿನಿಯರ್ ಗುರುಪ್ರಸಾದ್ ತಿಳಿಸಿದ್ದಾರೆ.
ಆಸ್ಪತ್ರೆಯ ಬೆಡ್ ಸೇರಿದಂತೆ ವಿವಿಧ ಸಲಕರಣೆಗಳಿಗೆ 17ಕೋಟಿ ರೂ. ಹಾಗೂ ಫನಿರ್ಚರ್ ಗಳಿಗೆ 16 ಕೋಟಿ ರೂ. ಸೇರಿದಂತೆ ಒಟ್ಟು 33ಕೋಟಿ ರೂ. ಅನುದಾನಕ್ಕಾಗಿ ಪ್ರಸ್ತಾಪವನ್ನು ಕಳುಹಿಸಲಾಗಿದೆ. ಅದೇ ರೀತಿ ತಜ್ಞ ವೈದ್ಯರು, ನರ್ಸ್, ಸಿಬ್ಬಂದಿಗಳ ನೇಮಕಕ್ಕೂ ಪ್ರಸ್ತಾಪ ಸಲ್ಲಿಸಲಾಗಿದೆ ಎಂದು ಉಡುಪಿ ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾರ್ ತಿಳಿಸಿದ್ದಾರೆ.
ಶಾಸಕರಿಂದ ಪರಿಶೀಲನೆ :
ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಪರಿಶೀಲನೆ ನಡೆಸಿ ಕಾಮಗಾರಿಯ ಪ್ರಗತಿ ಹಾಗೂ ಬಾಕಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು.
ಜಿಲ್ಲಾಸ್ಪತ್ರೆ ಕಾಮಗಾರಿಗೆ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಿ ಜ.15ರೊಳಗೆ ಜಿಲ್ಲೆಯ ಜನತೆಯ ಆರೋಗ್ಯ ಸೇವೆಗೆ ಲೋಕಾರ್ಪಣೆ ಮಾಡಬೇಕು. ಈಗಾಗಲೇ ಹಲವು ಬಾರಿ ಜಿಲ್ಲಾಸ್ಪತ್ರೆ ಪೂರ್ಣಗೊಳಿಸುವ ಬಗ್ಗೆ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಮುಖ್ಯಮಂತ್ರಿಗಳು ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದರೂ, ಈವರೆಗೆ ಸಚಿವರು ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ. ಜ.15ರೊಳಗೆ ನೂತನ ಜಿಲ್ಲಾಸ್ಪತ್ರೆ ಸೇವೆಗೆ ಲಭ್ಯವಾಗದಿದ್ದಲ್ಲಿ ರಾಜ್ಯ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಬೇಕು ಎಂದು ಅವರು ಎಚ್ಚರಿಕೆ ನೀಡಿದರು.
ನೂತನ 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆಯ ಶೇ.80 ರಷ್ಟು ಸಿವಿಲ್ ಕಾಮಗಾರಿಗಳು ಪೂರ್ಣಗೊಂಡಿದ್ದು, ಈಗಾಗಲೇ ಪೂರ್ಣಗೊಂಡಿರುವ ಆಸ್ಪತ್ರೆ ಕಾಮಗಾರಿಗಳ ಬಗ್ಗೆ ಸರಕಾರದಿಂದ 25 ಕೋಟಿ ರೂ. ಹಾಗೂ ಉಳಿಕೆ ಕಾಮಗಾರಿಗಳಿಗಾಗಿ 5 ಕೋಟಿ ರೂ. ಅನುದಾನದ ಅಗತ್ಯವಿದ್ದು, ಒಟ್ಟು 30 ಕೋಟಿ ಅನುದಾನ ತಕ್ಷಣ ಮಂಜೂರಾಗಬೇಕಾಗಿದೆ ಎಂದರು.
ಒಟ್ಟು ಏಳು ಮಹಡಿಗಳನ್ನು ಒಳಗೊಂಡಿರುವ 3 ಲಕ್ಷ ಚದರ ಅಡಿಯ ನೂತನ ಜಿಲ್ಲಾ ಆಸ್ಪತ್ರೆಗೆ ಅಗತ್ಯ ಇರುವ ಬೆಡ್ ಗಳು, ವೈದ್ಯಕೀಯ ಸಲಕರಣೆಗಳು ಹಾಗೂ ಉಪಕರಣಗಳ ಖರೀದಿಗೆ ಅನುದಾನದ ಅಗತ್ಯವಿದೆ. ಕಿಡ್ನಿ, ಹೃದಯ, ನ್ಯೂರೋ ಸಂಬಂಧಿತ ಕಾಯಿಲೆಗಳ ಚಿಕಿತ್ಸೆಗಳನ್ನು ಒಳಗೊಂಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಗತ್ಯವಿದ್ದು, ಖಾಸಗಿ ಹಾಗೂ ನೆರೆಯ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆಯ ಮೇಲಿನ ಅವಲಂಬನೆಯನ್ನು ತಪ್ಪಿಸಿ, ಜಿಲ್ಲೆಯಲ್ಲಿ ಸೇವೆ ದೊರಕುವಂತಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಅಶೋಕ್, ಆರೋಗ್ಯ ಇಲಾಖೆಯ ಇಂಜಿನಿಯರ್ ಗುರುಪ್ರಸಾದ್, ಜಿಲ್ಲಾಸ್ಪತ್ರೆಯ ವಿವಿಧ ವಿಭಾಗದ ವೈದ್ಯರು, ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಸುಮಿತ್ರಾ ನಾಯಕ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್, ಪ್ರಮುಖರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಶೆಟ್ಟಿ, ನೀತಾ ಪ್ರಭು, ಶ್ರೀವತ್ಸ, ಮಾಯಾ ಕಾಮತ್, ದೀಪಾ, ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
‘ನೂತನ ಜಿಲ್ಲಾಸ್ಪತ್ರೆಯ ನಿರ್ವಹಣಾ ವೆಚ್ಚ ಹಾಗೂ ಕೂಸಮ್ಮ ಶಂಭು ಶೆಟ್ಟಿ ತಾಯಿ ಮಕ್ಕಳ ಆಸ್ಪತ್ರೆಯ ವಿವಿಧ ನಿರ್ವಹಣಾ ಸಮಸ್ಯೆಗಳಿಗೆ ಮತ್ತು ಅನುದಾನ ಕೊರತೆಗೆ ಪರಿಹಾರ ಕಂಡುಕೊಳ್ಳುವುದು ಹಾಗೂ ಬಾಕಿ ಉಳಿದಿರುವ 3.5 ಕೋಟಿ ಮೆಸ್ಕಾಂ ಬಿಲ್ ಪಾವತಿಯ ಬಗ್ಗೆ ಕ್ರಮ ವಹಿಸಬೇಕಾಗಿದೆ’.
-ಯಶ್ಪಾಲ್ ಸುವರ್ಣ, ಶಾಸಕರು, ಉಡುಪಿ







