ಎರ್ಮಾಳು | ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಚಾಲಕ ಮೃತ್ಯು

ಪಡುಬಿದ್ರಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ತೋಟಕ್ಕೆ ಉರುಳಿ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ ಸೇತುವೆ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಂಗಳೂರಿನ ಗೌಜಿ ಇವೆಂಟ್ಸ್ ಮಾಲಿಕ ಅಭಿಷೇಕ್ ಎಂದು ಗುರುತಿಸಲಾಗಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರನ್ನು ಅವರೇ ಚಲಾಯಿಸುತ್ತಿದ್ದು, ಸಹಪ್ರಯಾಣಿಕರು ಯಾರೂ ಇರಲಿಲ್ಲ. ಹಿಂದಿನ ವಾಹನಗಳಲ್ಲಿ ಅವರ ಗೆಳೆಯರು ಇದ್ದರು ಎಂದು ತಿಳಿದು ಬಂದಿದೆ.
ಢಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಈ ವೇಳೆ ವಿದ್ಯುತ್ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಗಾಯಗೊಂಡಿದ್ದ ಅಭಿಷೇಕ್ ಅವರನ್ನು ಸ್ಥಳೀಯರ ಸಹಕಾರದಿಂದ ಆತನ ಸ್ನೇಹಿತರು ಮುಕ್ಕದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟದ್ದಾರೆಂದು ತಿಳಿದು ಬಂದಿದೆ.
ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





