ಪ್ರಧಾನಿ ಮೋದಿ ಜಿಲ್ಲಾ ಭೇಟಿ ವೇಳೆ ಶಿಷ್ಟಾಚಾರ ಪಾಲಿಸಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಪ್ರಧಾನಮಂತ್ರಿ ಅವರು ನ.28ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಟಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೇಶದ ಪ್ರಧಾನಮಂತ್ರಿಯವರ ಉಡುಪಿ ಜಿಲ್ಲಾ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಶಿಷ್ಟಾಚಾರವನ್ನು ಪಾಲಿಸುವ ಸಲುವಾಗಿ ಆಯೋಜಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರಧಾನಮಂತ್ರಿಯವರು ನ.28ರ ಶುಕ್ರವಾರದಂದು ಆದಿಉಡುಪಿಯ ಹೆಲಿಪ್ಯಾಡ್ನಿಂದ ಕರಾವಳಿ ಬೈಪಾಸ್, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಶ್ರೀಕೃಷ್ಠನ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಕಾರ್ಯಕ್ರಮ- ಗೀತೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಭೇಟಿ ಸಂದರ್ಭದಲ್ಲಿ ಭದ್ರತೆಗೆ ಅಗತ್ಯವಿರುವ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭದ್ರತೆಗೆ ಅನುಕೂಲವಾಗುವಂತೆ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ, ರಸ್ತೆಯಲ್ಲಿ ಹಾಗೂ ಮತ್ತಿತರ ಕಡೆಗಳಲ್ಲಿ ಸಿ.ಸಿ.ಟಿ.ವಿ ಅಳವಡಿಸಬೇಕು. ಅನಧಿಕೃತ ಬ್ಯಾನರ್, ಬಂಟಿಂಗ್ಸ್ಗಳನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದ ಅವರು, ಕಾರ್ಯಕ್ರಮಕ್ಕೆ ಕೇಂದ್ರ ಹಾಗೂ ರಾಜ್ಯ ಸಚಿವರು ಆಗಮಿಸುವ ನಿರೀಕ್ಷೆಯಿದ್ದು, ಅವರ ಸುರಕ್ಷತೆಗೂ ಸಹ ಒತ್ತು ನೀಡಬೇಕು ಎಂದರು.
ಪ್ರಧಾನಮಂತ್ರಿಗಳು ಹೆಲಿಪ್ಯಾಡ್ನಿಂದ ಕೃಷ್ಣ ಮಠಕ್ಕೆ ಚಲಿಸುವ ರಸ್ತೆಯ ಎರಡೂ ಬದಿಯಲ್ಲಿ ಬ್ಯಾರಿಕೇಡ್ ಅಳವಡಿಸಿ, ಪೊಲೀಸರನ್ನು ನಿಯೋಜನೆ ಗೊಳಿಸಬೇಕು. ಕೋಲುಗಳನ್ನೊಳಗೊಂಡಂತೆ ಬಾವುಟಗಳನ್ನು ಪ್ರದರ್ಶಿಸುವುದನ್ನು ನಿಷೇಧಿಸಲಾಗಿದೆ ಎಂದರು.
ಕಾರ್ಯಕ್ರಮ ನಡೆಯುವ ಸುತ್ತಮುತ್ತಲಿನ ಸ್ಥಳಗಳಲ್ಲಿ ಹಾಗೂ ರಸ್ತೆಗಳಲ್ಲಿ ಅಪಾಯಕಾರಿ ಮರಗಳನ್ನು, ರೆಂಬೆ-ಕೊಂಬೆಗಳನ್ನು ತೆರವುಗೊಳಿಸಬೇಕು. ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಯಾವುದೇ ಬ್ಯಾಗ್, ನೀರಿನ ಬಾಟೆಲ್, ಧ್ವಜ ಸೇರಿದಂತೆ ಯಾವುದೇ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದ್ದು, ಈ ಕುರಿತು ಜನರಿಗೆ ಮೊದಲೇ ಮಾಹಿತಿ ನೀಡಿರಬೇಕು ಎಂದರು.
ಪ್ರಧಾನಿ ಭೇಟಿ ಸಂದರ್ಭದಲ್ಲಿ ನಿರಂತರ ವಿದ್ಯುಚ್ಛಕ್ತಿ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ರಸ್ತೆ ಕಾಮಗಾರಿ ಸೇರಿದಂತೆ ಕಾಮಗಾರಿಗಳನ್ನು ಕೈಗೊಳ್ಳಲು ಶೇಖರಿಸಿರುವ ಜಲ್ಲಿ ಸೇರಿದಂತೆ ಎಲ್ಲಾ ವಸ್ತುಗಳನ್ನು ತೆರವುಗೊಳಿಸಿ ನಗರವನ್ನು ಸ್ವಚ್ಛವಾಗಿರುವಂತೆ ಕ್ರಮವಹಿಸಬೇಕು ಎಂದು ಪೌರಾಯುಕ್ತರು ಹಾಗೂ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸುವ ಜನರ ವಾಹನಗಳ ಸಂಚಾರ ಮಾರ್ಗ, ಅವುಗಳ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗ್ನಿಶಾಮಕ ವಾಹನವನ್ನು ನಿಯೋಜಿಸಬೇಕು ಎಂದರು.
ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ರಸ್ತೆ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಬೇಕು. ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ ಜೊತೆಗೆ ಪ್ರಯಾಣಿಕರಿಗೆ ಬದಲಿ ಮಾರ್ಗ ಅನುಸರಿಸುವ ಬಗ್ಗೆ ಹಾಗೂ ಜನ ದಟ್ಟಣೆ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಪ್ರಧಾನಿ ಭೇಟಿ ಸಂದರ್ಭದಲ್ಲಿ ಜಿಲ್ಲಾಡಳಿತದೊಂದಿಗೆ ಇತರೆ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದಲ್ಲಿ ಸಹಕಾರ ನೀಡಬೇಕು ಎಂದ ಅವರು, ತುಳುನಾಡು ಜಾನಪದ ಕಲೆ, ಹುಲಿ ವೇಷ ಕುಣಿತ, ಯಕ್ಷಗಾನ, ಡೊಳ್ಳು ಕುಣಿತ ಸೇರಿದಂತೆ ಸಂಪ್ರದಾಯ ವಾದ್ಯಗಳ ಪ್ರದರ್ಶನ ನಡೆಯಲಿದೆ ಎಂದರು.
ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಜಿಲ್ಲೆಗೆ ಪ್ರಧಾನಿ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಪುಷ್ಟಿ ದೊರಕಲಿದೆ. ನಗರದ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಆ ದಿನದಂದು ಮಣಿಪಾಲ, ಮಲ್ಪೆ ಹಾಗೂ ಉಡುಪಿ ನಗರ ವ್ಯಾಪ್ತಿಯ ಮಕ್ಕಳಿಗೆ ರಜೆ ಘೋಷಿಸಬೇಕು. ಗಣ್ಯವ್ಯಕ್ತಿಗಳಿಗೆ, ಲಕ್ಷ ಕಂಠ ಗೀತಾ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಪಾಸ್ ವಿತರಣೆ ಮಾಡಬೇಕು ಎಂದರು.
ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







