ಉಡುಪಿ ಜಿಪಂ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ನಿಧನ

ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ(66) ಸೋಮವಾರ ತಡರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತ್ರಾಸಿ ಮಂಡಲ ಪಂಚಾಯತ್ ಅಧ್ಯಕ್ಷರಾಗಿದ್ದ ರಾಜು ದೇವಾಡಿಗ, ಕುಂದಾಪುರ ತಾಲೂಕು ಪಂಚಾಯತ್ ಅಧ್ಯಕ್ಷ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ಹೆಮ್ಮಾಡಿ ಪಂಚಗಂಗಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಅವರು, ದೇವಾಡಿಗ ಸಮಾಜ ಸೇವಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಲ್ಲಿ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಅವರು ಬ್ಲಾಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.
ಮೃತರು ಪತ್ನಿ, ಮೂವರು ಪುತ್ರರು, ಓವಧ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ ತ್ರಾಸಿಯ ಅವರ ಸ್ವಗೃಹದಲ್ಲಿ ಸಾರ್ವಜನಿಕರಿಗೆ ಹಾಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿ, ನಂತರ ಮೃತ ದೇಹದ ಅಂತಿಮ ಸಂಸ್ಕಾರ ನೆರವೇರಿಸಲಾಯಿತು.
ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಶಾಸಕ ಗುರುರಾಜ್ ಗಂಟಿಹೊಳೆ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್.ರಾಜು ಪೂಜಾರಿ ಸೇರಿದಂತೆ ಅನೇಕರು ರಾಜು ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.







