ಎನ್ಐಎ/ಯುಎಪಿಎ ಪ್ರಕರಣಗಳ ವಿಚಾರಣೆ| ಉಡುಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ

ಉಡುಪಿ, ಜೂ.20: ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆಯಡಿ (ಎನ್ಎಐ) ಹಾಗೂ ಅಕ್ರಮ ಚಟುವಟಿಕೆಗಳ ತಡೆ ಕಾಯ್ಡೆ (ಯುಎಪಿಎ) ಅಡಿ ದಾಖಲಾಗಿರುವ ಹಾಗೂ ದಾಖಲಾಗುವ ಪ್ರಕರಣಗಳ ವಿಚಾರಣೆಗಾಗಿ ಹೆಚ್ಚುವರಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ವೋಚ್ಛ ನ್ಯಾಯಾಲಯವು ಸುವೋ ಮೋಟೊ ಡಬ್ಲ್ಯುಪಿ(ಕ್ರಿಮಿನವಲ್) ನಂ.1/2026ರಲ್ಲಿ ಕಳೆದ ಮಾರ್ಚ್ 24ರಂದು ನೀಡಿದ ನಿರ್ದೇಶನದಂತೆ ಕರ್ನಾಟಕ ಉಚ್ಛ ನ್ಯಾಯಾಲಯದ ಶಿಫಾರಸ್ಸಿನಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಕಾರ್ಯವ್ಯಾಪ್ತಿ ಹೊಂದಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವನ್ನು ಉಡುಪಿಯಲ್ಲಿ ಸ್ಥಾಪಿಸಲು ಮಂಜೂರಾತಿ ನೀಡಿ ಕರ್ನಾಟಕ ಸರಕಾರ ಅಧಿಸೂಚನೆ ಹೊರಡಿಸಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಈಗಾಗಲೇ ದಾಖಲಾಗಿರುವ ಹಾಗೂ ಇನ್ನು ಮುಂದೆ ದಾಖಲಾಗುವ ಎನ್ಐಎ/ಯುಎಪಿಎ ಪ್ರಕರಣಗಳು ಇನ್ನು ಮುಂದೆ ಈ ಪ್ರಕರಣಗಳ ವಿಚಾರಣೆಗಾಗಿಯೇ ಉಡುಪಿಯಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರ್ವಹಿಸಲ್ಪಡಲಿವೆ.
ಈ ವಿಶೇಷ ನ್ಯಾಯಾಲಯಕ್ಕೆ ವಿಶೇಷ ನ್ಯಾಯಾಧೀಶರ ಸಹಿತ ಒಟ್ಟು 13 ವಿವಿಧ ಪೂರಕ ಹುದ್ದೆಗಳನ್ನು ಸೃಜಿಸಲು ಸಹ ರಾಜ್ಯ ಸರಕಾರ ಮಂಜೂರಾತಿ ನೀಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.






