ಪಶ್ಚಿಮ ವಲಯ ಮಟ್ಟದ ಗೃಹರಕ್ಷಕರ ಕ್ರೀಡಾಕೂಟ ಉದ್ಘಾಟನೆ

ಉಡುಪಿ, ನ.12: ಉಡುಪಿ ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ಮಂಗಳೂರು ಯೆನೆಪೋಯ ವಿಶ್ವ ವಿದ್ಯಾಲಯದ ಕುಲಪತಿ ಡಾ.ವಿಜಯ್ ಕುಮಾರ್ ಮಾತನಾಡಿ, ಶಿಸ್ತು, ತಾಳ್ಮೆ, ದಕ್ಷತೆ ಹಾಗೂ ಬದ್ಧತೆಗೆ ಹೆಸರಾಗಿರುವ ಗೃಹರಕ್ಷಕರಿಗೆ ಕ್ರೀಡಾಕೂಟವನ್ನು ಆಯೋಜಿಸುವುದರಿಂದ ಅವರು ದೈಹಿಕವಾಗಿ ಸದೃಢರಾಗಿ ಉತ್ತಮ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಹಾಗೂ ಸೇವೆಯ ವೇಳೆ ತಂಡವಾಗಿ ಕೆಲಸ ಮಾಡಲು ಪ್ರೇರಣೆ ನೀಡಲಿದೆ ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಪಡೆಯ ಮತ್ತೊಂದು ಪ್ರಮುಖ ಭಾಗವಾಗಿದೆ. ಗೃಹರಕ್ಷಕರು ಹಗಲು-ರಾತ್ರಿಯೆನ್ನದೇ ತುರ್ತು ಸಂದರ್ಭಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಒತ್ತಡದ ನಡುವೆ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಕ್ರೀಡಾಕೂಟಗಳ ಆಯೋಜನೆ ಮನಸ್ಸಿಗೆ ಮುದ ನೀಡುತ್ತದೆ. ಕ್ರೀಡೆಯಲ್ಲಿ ಸೋಲು-ಗೆಲುವು ಸರ್ವೇ ಸಾಮಾನ್ಯ. ಇಂದಿನ ಸೋಲು ಮುಂದಿನ ಗೆಲುಗೆ ದಾರಿಯಾಗಲಿದೆ ಎಂದರು.
ಪಶ್ಚಿಮ ವಲಯ ಮಟ್ಟದ ಈ ಕ್ರೀಡಾಕೂಟದಲ್ಲಿ ಉಡುಪಿ, ದಕ್ಷಿಣಕನ್ನಡ, ಚಿಕ್ಕಮಗಳೂರು ಹಾಗೂ ಕಾರವಾರ ಜಿಲ್ಲೆಗಳ ಗೃಹರಕ್ಷಕ ಕ್ರೀಡಾಪಟುಗಳಿಂದ ಆಕಷರ್ಕ ಪಥಸಂಚಲನ ನಡೆಯಿತು. ಕ್ರೀಡಾಂಗಣಕ್ಕೆ ಸಂದೀಪ್ ಚಿಕ್ಕಮಗಳೂರು ಕ್ರೀಡಾಜ್ಯೋತಿ ತಂದರು. ಬಳಿಕ ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಪ್ರಶಾಂತ್ ಕುಮಾರ್ ಶೆಟ್ಟಿ, ವೈದ್ಯೆ ಡಾ.ಶೃತಿ ಬಲ್ಲಾಳ, ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ.ರೋಶನ್ಕುಮಾರ್ ಶೆಟ್ಟಿ, ವಿವಿಧ ಘಟಕಗಳ ಘಟಕಾಧಿಕಾರಿಗಳು, ಗೃಹರಕ್ಷಕರು ಉಪಸ್ಥಿತರಿದ್ದರು.
ಗೃಹರಕ್ಷಕ ದಳ ಸೆಕೆಂಡ್ ಇನ್ ಕಮಾಂಡ್ ರಾಜೇಶ್ ಕೆ.ಸಿ ಸ್ವಾಗತಿಸಿ, ಬ್ರಹ್ಮಾವರ ಘಟಕಾಧಿಕಾರಿ ಸ್ಟೀವನ್ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು. ಸ್ನೇಹ ಜಿ ವಂದಿಸಿದರು.







