ನಾರಾಯಣ ಗುರುಗಳ ಆದರ್ಶ ಯುವಜನಾಂಗಕ್ಕೆ ತಲುಪಿಸಬೇಕು : ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ

ಕುಂದಾಪುರ, ಆ.28: ನಾರಾಯಣ ಗುರುಗಳ ತತ್ವ, ಆದರ್ಶ ಮತ್ತು ತ್ಯಾಗಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಕುಂದಾಪುರ ತಾಲೂಕು ಆಡಳಿತ ಕುಂದಾಪುರ ವತಿಯಿಂದ ಶುಕ್ರವಾರ ಕುಂದಾಪುರ ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ 172ನೇ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ನಾರಾಯಣ ಗುರು ಜಯಂತಿಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸಬಾರದು. ಗುರುಗಳು ಪ್ರತಿಪಾದಿಸಿದ ಸರಳ ವಿವಾಹ, ಮದ್ಯಪಾನ ವಿರೋಧ, ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಯಂತಹ ಆದರ್ಶಗಳನ್ನು ನಮ್ಮ ಜೀವನದಲ್ಲಿಯೇ ಅಳವಡಿಸಿಕೊಳ್ಳಬೇಕು. ಗುರುಗಳ ತತ್ವ, ಸಿದ್ದಾಂತಗಳನ್ನು ಭಾಷಣಕ್ಕೆ ಮಾತ್ರ ಸೀಮಿತಗೊಳಿಸದೆ ಸಮಾಜದ ಪ್ರಮುಖರು ಸರಳ ವಿವಾಹಕ್ಕೆ ಮಾದರಿಯಾಗುವ ಮೂಲಕ ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಬೇಕು ಎಂದರು.
ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್.ಮಾತನಾಡಿ, ನಾರಾಯಣ ಗುರುಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಶಾಂತಿ, ಸಮಚಿತ್ತತೆ ಹಾಗೂ ಸಮಾಜಮುಖಿ ಚಿಂತನೆಯೊಂದಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ನಮ್ಮ ಜೀವನದಲ್ಲಿಯೂ ಆದರ್ಶಗಳ ಹಾದಿಯಲ್ಲಿ ವಿರೋಧಗಳು ಎದುರಾದಾಗ ಧೈರ್ಯದಿಂದ ಹಾಗೂ ಸಮಚಿತ್ತದಿಂದ ಪ್ರತಿಕ್ರಿಯಿಸಬೇಕು ಎಂದರು.
ನಾರಾಯಣಗುರುಗಳ ಬಗ್ಗೆ ಉಪನ್ಯಾಸ ನೀಡಿದ ಶಿಕ್ಷಕ ಸತೀಶ್ ವಡ್ಡರ್ಸೆ, ನಾರಾಯಣ ಗುರುಗಳು ಕೇವಲ ಒಂದು ಸಮುದಾಯದ ಗುರುಗಳಲ್ಲ. ಅವರು ಸಮಾನತೆ, ಸ್ವಾಭಿಮಾನ, ಶಿಕ್ಷಣ ಹಾಗೂ ಮಾನವೀಯತೆಯ ಪ್ರತಿಪಾದಕರಾಗಿದ್ದು, ಅವರ ಮೂರ್ತಿಯನ್ನು ಪೂಜಿಸುವುದಕ್ಕಿಂತ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ. ಶಿಕ್ಷಣಕ್ಕೆ ವಿಶೇಷ ಮಹತ್ವ ನೀಡಿದ್ದ ಅವರು, ಹಿಂದುಳಿದ ವರ್ಗಗಳು ವಿದ್ಯಾವಂತರಾಗಿ ಸ್ವಾವಲಂಬಿಗಳಾಗಬೇಕು ಎಂಬ ಸಂದೇಶ ನೀಡಿದ್ದರು ಎಂದು ತಿಳಿಸಿದರು.
ತಾಲೂಕು ಬಿಲ್ಲವ ಸಮಾಜಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ನಾರಾಯಣ ಗುರುಗಳು ಹಿಂದುಳಿದ ವರ್ಗದವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಮೂಢನಂಬಿಕೆ ಹಾಗೂ ಅನಿಷ್ಟ ಪದ್ಧತಿಗಳನ್ನು ತೊಡೆದುಹಾಕಲು ಶಿಕ್ಷಣವೇ ಪ್ರಮುಖ ಸಾಧನವೆಂದು ನಂಬಿದ್ದ ನಾರಾಯಣ ಗುರುಗಳು, ಬಡ ಹಾಗೂ ಹಿಂದುಳಿದ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧವಿದ್ದ ಕಾಲದಲ್ಲಿ ದೇವಾಲಯಗಳನ್ನು ನಿರ್ಮಿಸಿ ಎಲ್ಲ ವರ್ಗದವರಿಗೂ ಪೂಜೆಯ ಹಕ್ಕಿದೆ ಎಂಬ ಸಂದೇಶ ಸಾರಿದ್ದರು ಎಂದರು.
ತಹಶೀಲ್ದಾರ್ ಪ್ರದೀಪ್ ಕುರುಡೇಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕೆ.ಜಿ., ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತಾ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಆಶಾದೇವಿ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ವಂದಿಸಿದರು.






