ಬರ ನಿರ್ವಹಣೆಯನ್ನು ಸಮರ್ಪಕವಾಗಿ ನಿರ್ವಹಿಸಿ: ಅಧಿಕಾರಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯಲ್ಲಿ ಬರ ನಿರ್ವಹಣೆಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.
ಗುರುವಾರ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸರಕಾರ ಈಗಾಗಲೇ ಜಿಲ್ಲೆಯ ಕಾರ್ಕಳ, ಹೆಬ್ರಿ ಹಾಗೂ ಬ್ರಹ್ಮಾವರ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದೆ. ಪ್ರಸಕ್ತ ಸಾಲಿಗೆ ವಾಡಿಕೆ ಮಳೆಯು 4,535ಮಿ.ಮೀ. ಇದ್ದು, ಈ ಬಾರಿ 3525 ಮೀ.ಮೀ. ನಷ್ಟು ಮಾತ್ರ ಮಳೆಯಾಗಿ ಶೇ.22ರಷ್ಟು ಮಳೆ ಕೊರತೆ ಉಂಟಾಗಿದೆ. ಇದರಿಂದ ಅಂತರ್ಜಲ ಮಟ್ಟ ಹಾಗೂ ಜಲಾಶಯಗಳ ನೀರಿನ ಮಟ್ಟ ಕಡಿಮೆಯಾಗಿದ್ದು, ಮುಂಬರುವ ದಿನಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಈಗಿನಿಂದಲೇ ಎಚ್ಚರ ವಹಿಸಿ, ಕುಡಿಯುವ ನೀರಿಗೆ ವ್ಯತ್ಯಯ ಉಂಟಾಗದಂತೆ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲೆಯಾದ್ಯಂತ ಪ್ರಸಕ್ತ ತಿಂಗಳಲ್ಲಿ 44.1ಮಿ.ಮೀ. ಮಳೆಯಾಗಿರುವ ಹಿನ್ನೆಲೆಯಲ್ಲಿ ಸದ್ಯಕ್ಕೆ ನೀರಿನ ಕೊರತೆ ಆಗುವ ಸಾಧ್ಯತೆಗಳಿಲ್ಲದಿದ್ದರೂ ಸಹ ಅಂತರ್ಜಲ ಕುಸಿತಗೊಂಡು ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗಬಹುದು. ಈ ಬಗ್ಗೆ ತಕ್ಷಣಕ್ಕೆ ಗಮನ ಹರಿಸುವುದರೊಂದಿಗೆ ಅಂಥ ಗ್ರಾಮ-ವಾರ್ಡ್ಗಳನ್ನು ಗುರುತಿಸಿ, ಹತ್ತಿರದಲ್ಲಿ ಲಭ್ಯ ಇರುವ ನೀರಿನ ಮೂಲ ಅಥವಾ ಬೋರ್ವೆಲ್ಗಳಿಂದ ನೀರೊದಗಿಸಲು ಗುರುತಿಸಿಕೊಂಡು, ಸಮಸ್ಯೆಗಳು ಉಂಟಾದಾಗ ಅವುಗಳ ಬಳಕೆ ಮಾಡಿಕೊಳ್ಳಬೇಕು ಎಂದರು.
ಒಂದೊಮ್ಮೆ ಟ್ಯಾಂಕರ್ ಮೂಲಕ ನೀರು ಒದಗಿಸುವುದು ಅನಿವಾರ್ಯವೆನಿಸಿದರೆ, ಟೆಂಡರ್ ಕರೆದು ಅದಕ್ಕೂ ತಯಾರಿರ ಬೇಕು. ಪ್ರತೀ ಹದಿನೈದು ದಿನಗಳಿಗೊಮ್ಮೆ ವಿಧಾನಸಭಾ ಕ್ಷೇತ್ರಮಟ್ಟದಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಬರಪೀಡಿತ ತಾಲೂಕುಗಳ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಸಭೆ ಕರೆದು, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಳೆ-ಗಾಳಿಯಿಂದ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ತುಂಡಾದಲ್ಲಿ ಶೀಘ್ರದಲ್ಲಿಯೇ ಅವುಗಳನ್ನು ಬದಲಾಯಿಸಲು ಕ್ರಮ ಕೈಗೊಂಡು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಮೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿದುಹೋಗುವಂತೆ ತೋಡು ಹಾಗೂ ಚರಂಡಿಗಳಲ್ಲಿರುವ ಹೂಳು, ತರ ಗೆಲೆ, ಕಸ-ಕಡ್ಡಿಗಳನ್ನು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದುಹೋಗುವಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ಪೈಪ್ಲೈನ್ ದುರಸ್ಥಿ, ಶುದ್ಧ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ, ಸರಕಾರಿ ಕಟ್ಟಡಗಳ ಮೇಲ್ಛಾವಣಿ ಯಲ್ಲಿರುವ ಕಸ-ಕಡ್ಡಿಗಳನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ.ಎಸ್ ಸಿದ್ಧಲಿಂಗಪ್ಪ ಹಾಗೂ ಕೆ.ಎಸ್ ಹೆಗ್ಡೆ, ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ತಾಲೂಕಿನ ತಹಶೀಲ್ದಾರ್ಗಳು, ಸ್ಥಳೀಯಸಂಸ್ಥೆಗಳ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಜಾನುವಾರುಗಳಿಗೆ ಮೇವು ಲಭ್ಯತೆ
ಜಿಲ್ಲೆಯಲ್ಲಿ 2,25,000ಕ್ಕೂ ಹೆಚ್ಚು ಜಾನುವಾರುಗಳಿದ್ದು, 2,41,925 ಟನ್ನಷ್ಟು ಮೇವು ಲಭ್ಯವಿದೆ. ರೈತರಿಗೆ ಪಶು ಸಂಗೋಪನಾ ಇಲಾಖೆಯಿಂದ 1426 ಕಿಟ್ಗಳು ಹಾಗೂ ಕೆಎಂಎಫ್ ವತಿಯಿಂದ 3,000 ಕ್ಕೂ ಹೆಚ್ಚು ಮೇವಿನ ಕಿಟ್ ಅನ್ನು ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದರು.
ಕೃಷಿ, ತೋಟಗಾರಿಕೆ ಇಲಾಖೆಗೆ ಸೇರಿದ ಫಾರ್ಮ್ಗಳಲ್ಲಿ ಮೇವುಗಳನ್ನು ಬೆಳೆಯಲು ಕ್ರಮ ವಹಿಸಬೇಕು. ಹಡಿಲು ಭೂಮಿಗಳಲ್ಲೂ ಮೇವು ಬೆಳೆಯಲು ರೈತರಿಗೆ ಅಥವಾ ಸಂಜೀವಿನಿ ಸಂಘದ ಸದಸ್ಯರುಗಳಿಗೆ ಪ್ರೋತ್ಸಾಹಿಸಬೇಕು ಎಂದವರು ಸೂಚನೆಗಳನ್ನು ನೀಡಿದರು.







