ಜನರ ದೈನಂದಿನ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹರಿಸಲು ತಾಲೂಕು ಮಟ್ಟದ ಜನತಾ ದರ್ಶನ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಫೆ.7: ಸಾರ್ವಜನಿಕರ ದೈನಂದಿನ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಬಗೆಹರಿಸಬೇಕೆಂಬ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಹಯೋಗದಲ್ಲಿ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾ ಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.
ಬ್ರಹ್ಮಾವರದ ನಾರಾಯಣಗುರು ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಬ್ರಹ್ಮಾವರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ಇವರ ಸಹಯೋಗದೊಂದಿಗೆ ಬುಧವಾರ ನಡೆದ ಬ್ರಹ್ಮಾವರ ತಾಲೂಕು ಮಟ್ಟದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಜನತಾ ದರ್ಶನದಲ್ಲಿ ಸಾರ್ವಜನಿಕರ ಅಹವಾಲು ಆಲಿಸಲು ಹೆಚ್ಚಿನ ಸಮಯವನ್ನು ಮೀಸಲಿಟ್ಟು ಆ ಮೂಲಕ ಅಧಿಕಾರಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಜಿಲ್ಲಾಧಿಕಾರಿಗಳು, ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಅರ್ಜಿಗಳು ಬಂದಲ್ಲಿ ಅವುಗಳನ್ನು ಸರಕಾರಕ್ಕೆ ಕಳುಸಿಕೊಡಲಾಗು ವುದು ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಎ.ಸುವರ್ಣ, ಸರಕಾರ ಜಾರಿಗೆ ತಂದಿರುವ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಮಸ್ಯೆಗಳನ್ನು ಹೊತ್ತುತರುವ ಜನಸಾಮಾನ್ಯರಿಗೆ ಶೀಘ್ರವೇ ಪರಿಹಾರ ದೊರಕಿಸಿ ಕೊಡುವ ಇಚ್ಛಾಶಕ್ತಿಯನ್ನು ಅಧಿಕಾರಿಗಳು ತೋರಿಸಬೇಕು ಎಂದು ತಿಳಿಸಿದರು.
ಜನ ಸಾಮಾನ್ಯರು ತಮ್ಮ ಸಮಸ್ಯೆಗಳು ಬಗೆಹರಿಯುತ್ತವೆ ಎಂಬ ನಿರೀಕ್ಷೆಯನ್ನು ಇಟ್ಟುಕೊಂಡು ಜನಸ್ಪಂದನ ಕಾರ್ಯ ಕ್ರಮಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಂತಹ ಸಂದರ್ಭದಲ್ಲಿ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಿ, ಸಮಸ್ಯೆಗಳನ್ನು ಬಗೆಹರಿಸಲು ಮುಂದಾದಲ್ಲಿ ಮಾತ್ರ ಈ ಕಾರ್ಯಕ್ರಮ ಅರ್ಥಪೂರ್ಣವಾಗುತ್ತದೆ ಎಂದರು.
ಕಂದಾಯ ಇಲಾಖೆಯಲ್ಲಿ ಹೆಚ್ಚಾಗಿ ಕಂಡುಬರುವ ಹಕ್ಕುಪತ್ರ ವಿತರಣೆಗೆ ಇರುವ ಗೊಂದಲಗಳನ್ನು ಬಗೆಹರಿಸಿ, ಶೀಘ್ರ ದಲ್ಲಿಯೇ ಅವುಗಳ ವಿತರಣೆಗೆ ಮುಂದಾಗಬೇಕು. ಮೆಸ್ಕಾಂ ಸೇರಿದಂತೆ ಇತರೆ ಇಲಾಖೆಯೊಂದಿಗೆ ಮುಂಬರುವ ಮಳೆ ಗಾಲಕ್ಕೂ ಮುಂಚೆಯೇ ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು ಎಂದ ಅವರು, ಮಹಿಳೆಯರಿಗೆ ಗ್ಯಾರಂಟಿ ಯೋಜನೆ ಯಡಿ ಉಚಿತ ಬಸ್ಪ್ರಯಾಣದ ಸೌಲಭ್ಯ ನೀಡಲಾಗಿದೆ. ಜಿಲ್ಲೆಯ ಎಲ್ಲಾ ಗ್ರಾಮೀಣ ಪ್ರದೇಶಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವುದರೊಂದಿಗೆ ಸರಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಎಲ್ಲರಿಗೂ ದೊರಕುವಂತಾಗಬೇಕು ಎಂದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಸಮಸ್ಯೆಗೆ ಪರಿಹಾರ ಕೋರಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಇದು ಕೇವಲ ಕಾರ್ಯಕ್ರಮ ಎನಿಸದೇ, ಪರಿಹಾರ ದೊರಕಿಸುವ ವೇದಿಕೆಯಾಗಿ ಮೂಡಿಬರಲಿ. ಪ್ರತೀ ಗ್ರಾಪಂ ವ್ಯಾಪ್ತಿಯಲ್ಲಿ ಈಕಾರ್ಯಕ್ರಮ ಆಯೋಜಿಸಿ ಎಂದವರು ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ಸಹಾಯಕ ಕಮಿಷನರ್ ರಶ್ಮಿ ಎಸ್, ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಪಂ ಉಪಕಾರ್ಯದರ್ಶಿ ರಾಜು ಮೊಗೇರ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ವಾರಂಬಳ್ಳಿ ಗ್ರಾಪಂ ಅಧ್ಯಕ್ಷ ನಿತ್ಯಾನಂದ ಬಿ.ಆರ್, ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ, ತಾಪಂ ಕಾರ್ಯ ನಿರ್ವಹಣಾ ಧಿಕಾರಿ ಹೆಚ್. ಇಬ್ರಾಂಪುರ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಸ್ವಾಗತಿಸಿದರೆ, ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಘವ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಪ್ರಕಾಶ್ ವಂದಿಸಿದರು.
ಜನತಾ ದರ್ಶನದಲ್ಲಿ 85 ಅರ್ಜಿ ಸ್ವೀಕಾರ
ಕಾರ್ಯಕ್ರಮದಲ್ಲಿ 85 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಕಂದಾಯ ಇಲಾಖೆಗೆ 49, ಗ್ರಾಮೀಣ ಅಭಿವೃದ್ದಿ ಇಲಾಖೆಗೆ 22, ಶಿಕ್ಷಣ ಇಲಾಖೆ 01, ಗಣಿ ಇಲಾಖೆ 01, ಸಬ್ ರಿಜಿಸ್ಟಾರ್ 02, ಭೂಮಾಪನ ಇಲಾಖೆಗೆ 01, ಸಿಡಿಪಿಯು 03, ಮೆಸ್ಕಾಂ 1, ಲೋಕೋಪಯೋಗಿ ಇಲಾಖೆ 02, ಸಾರಿಗೆ ಇಲಾಖೆ 01 ಹಾಗೂ ಪೋಲಿಸ್ ಇಲಾಖೆಗೆ 01 ಅರ್ಜಿ ಬಂದಿವೆ.







