ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ತನಿಖೆ ನಡೆಯುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಕುಂದಾಪುರ: ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪದ ಕುರಿತಂತೆ ನ್ಯಾ| ಮೈಕಲ್ ಡಿಕುನ್ಹಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ವರದಿ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಶನಿವಾರ ಕುಂದಾಪುರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಉಡುಪಿ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಬೇಡಿಕೆ ಬಗ್ಗೆ ಪೂರ್ಣ ಮಾಹಿತಿಯಿಲ್ಲ. ಎಲ್ಲ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಮಾಡಬೇಕಂತ ಇದ್ದರೂ ಸಹ ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಕಾಲೇಜುಗಳಿವೆ. ಈಗ ಇರುವಂತಹ ಕಡೆಗಳಲ್ಲಿನ ಮೆಡಿಕಲ್ ಕಾಲೇಜುಗಳ ಸಮರ್ಪಕ ಬಳ ಕೆಗೆ ಒತ್ತು ನೀಡಲಾಗುವುದು ಎಂದ ಅವರು, ಆದ್ಯತೆ ಮೇರೆಗೆ ಜಿಲ್ಲಾಸ್ಪತ್ರೆಯಲ್ಲಿ ಎಪಿಎಲ್ನವರಿಗೆ ಶೇ. 30 ರಷ್ಟು ಮಾತ್ರ ಉಚಿತವಾಗಿದ್ದು, ಬಾಕಿ ಪಾವತಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಽಕಾರಿ ಸಹಿತ ಸಿಬಂದಿ ಭರ್ತಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಎಂಬಿಬಿಎಸ್ ಆದ ವೈದ್ಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಗುತ್ತಿಗೆ ಆಧಾರದಲ್ಲಿಯೂ ಭರ್ತಿಗೆ ಸೂಚನೆ ನೀಡಲಾಗಿದೆ. 800 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಕೊಲ್ಲೂರಿನಂತಹ ಆಸ್ಪತ್ರೆ ಸಹಿತ ಕೆಲ ಪಿಎಚ್ಸಿಗಳಲ್ಲಿ 24 ಗಂಟೆ ಸೇವೆಗೆ ಎಲ್ಲ ಅಗತ್ಯ ಸೌಕರ್ಯ ಒದಗಿಸಲು ಮುಂದಿನ ದಿನಗಳಲ್ಲಿ ಪ್ರಯತ್ನಿಸಲಾಗುವುದು ಎಂದರು.
ಕರಾವಳಿ, ಮಲೆನಾಡು ಭಾಗಗಳಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು, ಶೀಘ್ರ ಚಿಕಿತ್ಸೆ ಹೇಗೆ ಅನ್ನುವುದನ್ನು ಈಗಗಾಲೇ ಇಲಾಖೆಯ ಸಭೆಯಲ್ಲಿ ಚರ್ಚಿಸಿ, ಕ್ರಮವಹಿಸಲು ಸೂಚಿಸಲಾಗಿದೆ. ಹಿಂದೆ ಇದ್ದ ಔಷಧಿ ನಿಷ್ಪ್ರಯೋಜಕವಾಗಿದ್ದು, ಐಸಿಎಂಆರ್ ಹಾಗೂ ಹೈದರಾಬಾದಿನ ಸಂಸ್ಥೆಯೊಂದಿಗೆ ಒಡಂಬಡಿಕೆ ಮಾಡಿ, ಹೊಸ ಔಷಧಿ ತಯಾರಿಗೆ ಸೂಚಿಸಲಾಗಿದ್ದು, ಅದಕ್ಕೆ 7-8 ತಿಂಗಳು ಬೇಕಿದೆ ಎಂದರು.







