ಸಂವಿಧಾನ ಆಶಯ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ
ಮಲ್ಪೆ ಕಡಲ ತೀರದಲ್ಲಿ ಸಂವಿಧಾನ ಜಾಗೃತಿ ಜಾಥಾಕ್ಕೆ ವಿಶಿಷ್ಟ ಚಾಲನೆ

ಮಲ್ಪೆ: ಭಾರತದ ಪ್ರತಿಯೊಬ್ಬ ಪ್ರಜೆಯೂ ಘನತೆ ಗೌರವದಿಂದ ಬದುಕಲು ನಮ್ಮ ಸಂವಿಧಾನ ಅವಕಾಶ ಕಲ್ಪಿಸಿದ್ದು, ಇದರ ಆಶಯಗಳನ್ನು ಎತ್ತಿಹಿಡಿಯುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಸಂವಿಧಾನದ ಮೌಲ್ಯ ಮತ್ತು ಆದರ್ಶಗಳ ಬಗ್ಗೆ ಅರಿವನ್ನು ಹೊಂದಿದಾಗ ಮಾತ್ರ ಈ ಕಾರ್ಯವನ್ನು ಮಾಡಲು ಸಾಧ್ಯ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಕೆ. ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಪಂ ಮತ್ತು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಶನಿವಾರ ಸಂಜೆ ಮಲ್ಪೆ ಕಡಲ ತೀರದಲ್ಲಿ ಹಮ್ಮಿಕೊಳ್ಳಲಾದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಕೇಸರಿ ಬಿಳಿ ಹಸಿರು ಬಣ್ಣದ ಬೆಲೂನ್ಗಳನ್ನು ಹಾರಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿ ಈ ಎಲ್ಲರಿಗೂ ಸಂವಿಧಾನ ಪೀಠಿಕೆಯನ್ನು ಭೋದಿಸಿ ಅವರು ಮಾತನಾಡುತಿದ್ದರು.
ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೂ ಸಮಾನತೆ, ಭ್ರಾತೃತ್ವ ಸೇರಿದಂತೆ ಮತ್ತಿತರ ಹಕ್ಕು ಒದಗಿಸಿದೆ. ಸಂವಿಧಾ ನದ ತತ್ವಾದರ್ಶಗಳನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಸಂವಿಧಾನ ಕುರಿತ ಅರಿವು ಹೊಂದಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ಸಂವಿಧಾನ ನಮ್ಮ ಜನರ ಉಸಿರಾಗಿದೆ. ಇದನ್ನು ಕಾಪಾಡು ವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜಿಲ್ಲಾಡಳಿತ ಸಂವಿಧಾನದ ಜಾಗೃತಿ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಕ್ಯವಾಗಿ ಆಯೋಜಿಸಿದರೊಂದಿಗೆ ಗ್ರಾಮೀಣ ಭಾಗದ ಜನರ ನಾಡಿ ಮಿಡಿತದಲ್ಲಿ ಸಂವಿಧಾನ ಜಾಗೃತಿ ಜಾಥ ಸಾಗಿ ಬಂದಿದೆ ಎಂದರು.
ಮರಳಿನ ಮೇಲೆ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನ ಪೀಠಿಕೆಯ ಚಿತ್ರವನ್ನು ಬರೆದು ಕ್ರಿಯಾಶೀಲ ಹಾಗೂ ವಿಶಿಷ್ಠ ರೀತಿಯಲ್ಲಿ ಸಾರ್ವಜನಿಕರಿಗೆ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಯಕ್ಷಗಾನ ವೇಷಭೂಷಣದ ಸೆಲ್ಫಿ ಪಾಯಿಂಟ್ನಲ್ಲಿ ಜನರು ಸೆಲ್ಫಿ ತೆಗೆದುಕೊಳ್ಳುತ್ತಿರುವುದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಮೇಲ್ವಿಚಾರಕಿ ಸುಚಿತ್ರ ನೇತೃತ್ವದಲ್ಲಿ ಅಂಬೇಡ್ಕರ್ ಅವರ ತತ್ವ ಮತ್ತು ಸಿದ್ಧಾಂತಗಳ ಕುರಿತ ಸುಂದರ ನೃತ್ಯವನ್ನು ಮನಮೋಹಕವಾಗಿ ಪ್ರಸ್ತುತ ಪಡಿಸಿದರು. ಮಂಗಳೂರಿನ ಬಾಲ ಪ್ರತಿಭೆ ಆಶ್ಮಿತ್ ಎ.ಜೇ ಅವರ ಬಳಗ ಸುಮುಧುರ ಕಂಠ ದಲ್ಲಿ ಸಂವಿಧಾನ ಪೀಠಿಕೆ ಗೀತೆಯನ್ನು ಹಾಡಿದರು.
ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ., ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅನಿತಾ ಮಲ್ದುರ್, ಕ್ರೀಡಾ ಮತ್ತು ಯುವಜನ ಸಬಲೀಕಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್, ರಮೇಶ್ ನಾಯಕ್, ದಲಿತ ಮುಖಂಡ ರಮೇಶ್ ಕೋಟ್ಯಾನ್, ಮಂಗಳೂರು ಆರನೇ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಜನಾರ್ದನ್ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ʼಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ ಎಲ್ಲಾ ಗ್ರಾಪಂ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಂದು ತಿಂಗಳ ಕಾಲ ಸಂಚರಿಸಲಿದೆ. ಈ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರು ಕೈಜೋಡಿಸಬೇಕು. ಜಾಥದಲ್ಲಿ ಸಂವಿಧಾನದ ಮೂಲ ಅಂಶಗಳಾದ ಧರ್ಮ ನಿರಪೇಕ್ಷತೆ, ಜಾತ್ಯತೀತೆ, ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು ಕರ್ತವ್ಯಗಳು ಹಾಗೂ ರಾಜ್ಯ ನಿರ್ದೇಶಕ ತತ್ವಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ’
-ಡಾ.ವಿದ್ಯಾ ಕುಮಾರಿ, ಜಿಲ್ಲಾಧಿಕಾರಿಗಳು ಉಡುಪಿ







