ಹೊರಗುತ್ತಿಗೆ ನೌಕರರ ನೇರ ಪಾವತಿಗೆ ಆಗ್ರಹಿಸಿ ಧರಣಿ
![ಹೊರಗುತ್ತಿಗೆ ನೌಕರರ ನೇರ ಪಾವತಿಗೆ ಆಗ್ರಹಿಸಿ ಧರಣಿ ಹೊರಗುತ್ತಿಗೆ ನೌಕರರ ನೇರ ಪಾವತಿಗೆ ಆಗ್ರಹಿಸಿ ಧರಣಿ](https://www.varthabharati.in/h-upload/2024/02/13/1243510-ud-f13-dharani.webp)
ಉಡುಪಿ: ಕರ್ನಾಟಕ ರಾಜ್ಯ ನಗರ ಪಾಲಿಕೆಯ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ನೇರ ಪಾವತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಇಂದು ಧರಣಿ ನಡೆಸಲಾಯಿತು.
ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ಪೌರ ಚಾಲಕರು, ನೀರುಗಂಟಿಗಳು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್ಸ್, ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲ ಬಗೆಯ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ಒಳಪಡಿಸುವಂತೆ ಹಾಗೂ ಪೌರಕಾರ್ಮಿಕರ ಬಾಕೀ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಇಂದಿನಿಂದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿ ಫೆ.15ರಂದು ಹೊರಗುತ್ತಿಗೆ ನೌಕರರು ಹಾಗೂ ಪೌರಕಾರ್ಮಿಕರ ನಡಿಗೆ ಮುಖ್ಯಮಂತ್ರಿಗಳ ಮನೆ ಕಡೆಗೆ ಹೋರಾಟ ನಡೆಸಲು ಉದ್ದೇಶಿಸಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್ನಲ್ಲಿ ಘೋಷಣೆ ಮಾಡಬೇಕು. ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತಂದು ಆಗತ್ಯಕ್ಕೆ ಅನುಗುಣವಾಗಿ ಪೌರಚಾಲಕ ಹುದ್ದೆಗಳನ್ನು ಸೃಷ್ಟಿಸಬೇಕು. ಸಂಕಷ್ಟ ಭತ್ಯೆಯನ್ನು ನೇರಪಾವತಿ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೂ ವಿಸ್ತರಿಸಬೇಕು. ಬಾಕಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿ ಸೇರಿದಂತೆ ನಾಲ್ಕು ಬೇಡಿಕೆಗಳನ್ನು ಬಜೆಟ್ಟಿನಲ್ಲಿ ಘೋಷಿಸ ಬೇಕು ಎಂದು ಧರಣಿನಿರತರು ಒತ್ತಾಯಿಸಿದರು.
ಸಂಘದ ಅಧ್ಯಕ್ಷರಾದ ವಿನಯ್ ಕುಮಾರ್ ಮಾರ್ಪಳ್ಳಿ, ಪ್ರಮುಖರಾದ ಪ್ರಭಾಕರ್ ಕುಂದಾಪುರ, ಗಿರೀಶ್ ಬೈಂದೂರ್, ನಿತೇಶ್ ಕಾಪು, ಉದಯ ಕುಮಾರ್ ಕಾರ್ಕಳ, ವಿಕ್ಟರ್ ಸಾಲಿಗ್ರಾಮ, ನಿರಂಜನ್, ಪ್ರಕಾಶ್, ಜಾನ್ ಪ್ರಕಾಶ್ ರವೀಂದ್ರ, ಸಂದೀಪ್, ಸುದೀಪ್ ಉಪಸ್ಥಿತರಿದ್ದರು.