ಬಸವಣ್ಣರ ಜೀವನ ಮಾರ್ಗ ಸರ್ವಕಾಲಕ್ಕೂ ಮಾದರಿ: ಉಡುಪಿ ಜಿಲ್ಲಾಧಿಕಾರಿ
ವಿಶ್ವಗುರು ಬಸವಣ್ಣರ ಭಾವಚಿತ್ರ ಅನಾವರಣ

ಉಡುಪಿ, ಫೆ.17: 12ನೇ ಶತಮಾನ ವಚನಕ್ರಾಂತಿ ನಡೆದ ಮಹತ್ವ ಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕ್ರಾಂತಿ ಯೋಗಿ ಶ್ರೀ ಜಗಜ್ಯೋತಿ ಬಸವಣ್ಣನವರು ಪ್ರತಿಪಾದಿಸಿದ ಸಾರ್ವತ್ರಿಕ ಮೌಲ್ಯಗಳಾದ ಜಾತಿ ರಹಿತ ಸಮಾಜ, ಕಾಯಕದ ಮಹತ್ವ ಮತ್ತು ವರ್ಗರಹಿತ ಸಮಾಜ ಹಾಗೂ ಜೀವನ ಮಾರ್ಗ ಸರ್ವಕಾಲಕ್ಕೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಗಳ ಸಹಯೋಗದೊಂದಿಗೆ ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂಬ ಭಾವಚಿತ್ರವನ್ನು ಅನಾವರಣಗೊಳಿಸಿ ಅವರು ಮಾತನಾಡುತಿದ್ದರು.
ಸಮಾಜದಲ್ಲಿ ಮಹಿಳಾ ಅಸಮಾನತೆ ಹಾಗೂ ಮೂಢನಂಬಿಕೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ ಬಸವಣ್ಣ, ಸಾರ್ವತ್ರಿಕ ಹಾಗೂ ಸಾರ್ವಕಾಲಿಕ ಸರ್ವಜನ ಸಮಭಾವದ ತಾತ್ವಿಕತೆಗಳ ಮೂಲಕ ಕಲ್ಯಾಣ ಸಮಾಜ ಕಟ್ಟಲು ಬೇಕಾದ ನೀತಿ ಯನ್ನು ಬೋಧಿಸಿರುವುದರಿಂದ ನಮ್ಮ ದೇಶದ ಸಂವಿಧಾನದ ಆಶಯಗಳಿಗೆ ಅವರ ಚಿಂತನೆಗಳು ಸಾಂಸ್ಕೃತಿಕ ರಾಯ ಭಾರಿತ್ವಕ್ಕೆ ಸಮರ್ಥನೀ ಯವಾದ ನೆಲೆ ಒದಗಿಸುವ ಮೇರೆಗೆ ಸರಕಾರದ ವತಿಯಿಂದ ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದಾದ್ಯಂತ ಪ್ರತಿ ಜಿಲ್ಲೆಯಲ್ಲಿಯೂ ಬಸವಣ್ಣವರ ಭಾವಚಿತ್ರವನ್ನು ಅನಾವರಣಗೊಳಿಸಲಾಗುತ್ತಿದೆ ಎಂದರು.
ಸಾಮಾಜಿಕ, ಸಾಂಸ್ಕೃತಿಕ ಹಾಗೂ ವೈಚಾರಿಕವಾಗಿ ಕ್ರಾಂತಿ ಜರುಗಿದ 12ನೇ ಶತಮಾನದ ಕಾಲಘಟ್ಟದ ಸಾಕಷ್ಟು ವಚನಕಾರರಲ್ಲಿ ಮುಖ್ಯವಾದವರು ಜಗಜ್ಯೋತಿ ಬಸವಣ್ಣನವರು. ಮೂಢನಂಬಿಕೆ, ಜಾತಿ ತಾರತಮ್ಯ ಹೋಗಲಾಡಿಸಲು ಕಲ್ಯಾಣದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಕ್ರಾಂತಿ ನಡೆಯಿತು. ಎಲ್ಲವನ್ನು ಮೆಟ್ಟಿನಿಂತು ಜಾತಿ ತಾರತಮ್ಯದ ಬೇಧ ಭಾವವಿಲ್ಲದೇ ಜಾತಿ ರಹಿತ ಸಮಾಜ ಕಟ್ಟಿದ್ದಾರೆ. ಇಂತಹ ವ್ಯಕ್ತಿಯನ್ನು ನಾವೆಲ್ಲರೂ ಗೌರವಿಸುವುದರೊಂದಿಗೆ ಅವರ ಜೀವನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದರು.
ಈ ಸಂದರ್ಭ ಕಚೇರಿಗಳಲ್ಲಿ ಅಳವಡಿಸಲು ಶ್ರೀಬಸವಣ್ಣನವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಬನ್ನಂಜೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರು ಸಂವಿಧಾನ ಜಾಗೃತಿ ಜಾಥಾ ನೃತ್ಯ ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಕುಂದಾಪುರ ಉಪ ವಿಭಾಗಾಧಿಕಾರಿ ರಶ್ಮಿ, ಜಿಪಂ ಉಪ ಕಾರ್ಯದರ್ಶಿ ರಾಜು ಮೊಗೇರ, ಬಸವ ಸಮಿತಿಯ ಜಿಲ್ಲಾ ಅಧ್ಯಕ್ಷ ಡಾ.ಚಂದ್ರಶೇಖರ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬಸವ ವೇದಿಕೆಯ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಮುಖ್ಯಸ್ಥರು, ಸಾರ್ವಜನಿಕರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.







