ವಾರಾಹಿ ಯೋಜನೆ; ಕೆಲವು ಕಡೆ ತಾತ್ಕಾಲಿಕ ಕಾಮಗಾರಿ ಕೈಗೊಂಡು ನಗರಕ್ಕೆ ಕುಡಿಯುವ ನೀರು ಕೊಡಿ: ಎಂ.ಟಿ.ರೇಜು ಸೂಚನೆ
‘ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಬಾರದು’

ಉಡುಪಿ: ನಗರಕ್ಕೆ ವಾರಾಹಿ ಯೋಜನೆಯ ಕುಡಿಯುವ ನೀರಿನ ಕಾಮಗಾರಿಯನ್ನು ಅರಣ್ಯ ಇಲಾಖೆಯ ಪೂರ್ವಾನುಮತಿ ಪಡೆದು ಹಾಗೂ ಕೆಲವೊಂದು ಭಾಗದಲ್ಲಿ ತಾತ್ಕಾಲಿಕ ಕಾಮಗಾರಿಯನ್ನು ಕೈಗೊಂಡು ನಗರದ ಜನತೆಗೆ ನೀರು ಒದಗಿಸು ವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ.ರೇಜು ಅಧಿಕಾರಿಗಳಿಗೆ ಸೂಚನೆಗಲನ್ನು ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಉಡುಪಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಜೆ.ಜೆ.ಎಂ ಯೋಜನೆಯಡಿ ಉಳಿದ ಕಾಮಗಾರಿ ಗಳನ್ನು ಆದ್ಯತೆಯ ಮೇಲೆ ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸುವುದರ ಜೊತೆಗೆ ಜಿಲ್ಲೆಯಲ್ಲಿ ಬೇಸಿಗೆಯ ಸಂದರ್ಭ ಕುಡಿಯುವ ನೀರಿನ ಅಭಾವ ಕಾಣಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದೂ ಅವರು ಸ್ಪಷ್ಟ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗ ಬಹುದಾದ ಗ್ರಾಮಗಳನ್ನು ಈಗಲೇ ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನುಈಗಲೇ ರೂಪಿಸಿಕೊಂಡು ಮುಂದೆ ಅಲ್ಲಿ ಯಾವುದೇ ರೀತಿಯಲ್ಲಿ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದರು.
ಸದ್ಯ ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ರೈತರಿಗೆ ಹೆಚ್ಚಿನ ಮೇವಿನ ಕಿಟ್ಗಳನ್ನು ವಿತರಿಸುವು ದರೊಂದಿಗೆ ಮೇವು ಬೆಳೆಯಲು ಸಹ ಪ್ರೋತ್ಸಾಹಿಸಬೇಕು ಎಂದ ಅವರು, ಸಾಧ್ಯವಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿಯೂ ಮೇವು ಬೆಳೆಯಲು ಮುಂದಾಗಬಹುದು ಎಂದು ಸಲಹೆ ನೀಡಿದರು.
ಅಡಿಕೆ ರೋಗ ನಿಯಂತ್ರಣ: ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ಜಿಲ್ಲೆಯಲ್ಲಿ ಅಡಿಕೆ ಹಳದಿ ರೋಗ ನಿಯಂತ್ರಣ, ಪ್ರಧಾನ ಮಂತ್ರಿ ಸಿಂಚಾಯಿ ಯೋಜನೆಯ ಅನುಷ್ಠಾನ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಗಳನ್ನು ಕೇಳಿ ಪಡೆದು ಮಾತನಾಡಿದ ಡಾ.ರೇಜು, ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಹೆಚ್ಚು ಒತ್ತು ನೀಡಬೇಕು. ಫುಡ್ ಪ್ರೊಸೆಸ್ಸಿಂಗ್ ಯೂನಿಟ್ ಗಳನ್ನು ತೆರೆಯಲು ಹಾಗೂ ಮಹಿಳಾ ಸ್ವಯಂ ಸೇವಾಸಂಘಗಳು ಸಿದ್ಧ ಆಹಾರ ಪದಾರ್ಥಗಳ ಉತ್ಪಾದನೆಗೆ ತೊಡಗಿಸಿಕೊಳ್ಳಲು ಉತ್ತೇಜಿಸಬೇಕು ಎಂದರು.
200 ಶಾಲಾ ಕೊಠಡಿಗಳ ನಿರ್ಮಾಣ: ಸರಕಾರ ವಿವೇಕ ಯೋಜನೆಯಡಿ ಹೊಸದಾಗಿ 200 ಶಾಲಾ ತರಗತಿಗಳ ನಿರ್ಮಾಣಕ್ಕೆ ಸಾಕಷ್ಟು ಅನುದಾನ ನೀಡಿದ್ದು, ಅವುಗಳಲ್ಲಿ 160 ಪೂರ್ಣಗೊಂಡಿವೆ. ಬಾಕಿ ಉಳಿದ 40 ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ಅವುಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದ ಉಸ್ತುವಾರಿ ಕಾರ್ಯದರ್ಶಿ, ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆ ಮತ್ತೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆಯಲು ಕ್ರಮಕೈಗೊಳ್ಳಬೇಕು ಎಂದರು.
ಮೀನುಗಾರಿಕೆ ಚಟುವಟಿಕೆ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮರಣ ಹೊಂದಿದ ಮೀನುಗಾರರ ಕುಟುಂಬಕ್ಕೆ ಪರಿಹಾರ ಪಡೆಯಲು ಅನುಕೂಲ ವಾಗುವಂತೆ ಮೀನುಗಾರರ ಸೊಸೈಟಿಯಲ್ಲಿ ಸದಸ್ಯತ್ವ ಹೊಂದಿದ ಮೀನುಗಾರರಿಗೆ ವಿಮಾ ಪ್ರೀಮಿಯಂ ಮೊತ್ತವನ್ನು ಸರಕಾರ ತುಂಬುತ್ತಿದೆ. ಒಂದೊಮ್ಮೆ ಅಪಘಾತ ಆಗಿ ಮರಣ ಹೊಂದಿದ ಮೀನುಗಾರರಿಗೆ 5 ಲಕ್ಷ ರೂ. ವರೆಗೆ ಪರಿಹಾರವನ್ನು ಒದಗಿಸಲಾಗುತ್ತಿದೆ. ಕೆಲ ಸಮಯದ ಹಿಂದೆ ಗಂಗೊಳ್ಳಿಯ ಬಂದರಿನಲ್ಲಿ ಉಂಟಾದ ಬೆಂಕಿ ಅಕಸ್ಮಿಕದಲ್ಲಿ ಸುಟ್ಟು ಹೋದ ಬೋಟ್ಗಳ ಮಾಲಕರಿಗೆ ಶೀಘ್ರದಲ್ಲಿಯೇ ಪರಿಹಾರ ಹಣವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಗೃಹಲಕ್ಷ್ಮೀ ಯೋಜನೆ: ಜಿಲ್ಲೆಯಲ್ಲಿ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪಡಿತರ ಚೀಟಿಯಲ್ಲಿ ಸಣ್ಣ ಪುಟ್ಟ ತಪ್ಪು ಗಳಿಂದಾಗಿ ಸರಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ವಂಚಿತರಾಗುತ್ತಿದ್ದಾರೆ. ಸರಕಾರ ತಿದ್ದುಪಡಿಗೆ ಕಾಲಾವಕಾಶ ನೀಡಿದ ಸಂದರ್ಭದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯಗಳನ್ನು ಆಹಾರ ಇಲಾಖೆಯವರು ಕೈಗೊಳ್ಳಬೇಕು ಎಂದು ಅವರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಯಿ-ಮಕ್ಕಳ ಆಸ್ಪತ್ರೆ ಮತ್ತೆ ಖಾಸಗಿಗೆ?: ಅಜ್ಜರಕಾಡಿನಲ್ಲಿ ಜಿಲ್ಲಾ ಹೈಟೆಕ್ ಆಸ್ಪತ್ರೆಯ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿದ ಅವರು, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸ್ತುತ ನಿರ್ವಹಣೆ, ಸಿಬ್ಬಂದಿಗಳ ವೇತನ ನೀಡುವ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಅದನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವ ಕುರಿತಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಗ್ಯಾರಂಟಿ ಯೋಜನೆಯ ಸರ್ವೇ ಕಾರ್ಯವನ್ನು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಅಂಗನವಾಡಿ ಕಾರ್ಯ ಕರ್ತೆಯರು ಕೈಗೊಳ್ಳುತ್ತಿದ್ದು, ಸರ್ವೇಕಾರ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ಸರಕಾರ ಆಯವ್ಯಯವನ್ನು ಮಂಡಿಸಿದ್ದ, ಅದರಲ್ಲಿ ಇಲಾಖೆಗಳಿಗೆ ನೀಡುವ ಅನುದಾನಗಳ ಕ್ರಿಯಾ ಯೋಜನೆಗಳನ್ನು ತಯಾರಿಸಿ, ಅಭಿವೃದ್ಧಿ ಕಾರ್ಯ ಗಳನ್ನು ಕೈಗೊಳ್ಳಲು ಮುಂದಾಗಬೇಕು. ಬಜೆಟ್ನಲ್ಲಿ ನೀಡಿರುವ ಅನುದಾನ ಗಳ ಸಮರ್ಪಕ ಬಳಕೆ ಆಗದಿದ್ದಲ್ಲಿ ಮುಂಬರುವ ದಿನಗಳ ಬಜೆಟ್ನಲ್ಲಿ ಅನುದಾನದ ಕಡಿತ ಮಾಡುವ ಸಾಧ್ಯತೆ ಇರುತ್ತದೆ. ಇದಕ್ಕೆ ಆಸ್ಪದ ನೀಡಬಾರದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.







