ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಸಿಪಿಎಂ ನಿರ್ಧಾರ
![ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಸಿಪಿಎಂ ನಿರ್ಧಾರ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಸಿಪಿಎಂ ನಿರ್ಧಾರ](https://www.varthabharati.in/h-upload/2024/04/03/1258186-12345.webp)
ಉಡುಪಿ: ಸಿಪಿಐಎಂ ಪಕ್ಷದ ರಾಜ್ಯ ಸಮಿತಿಯ ನಿರ್ಧಾರದಂತೆ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳನ್ನು ಸೋಲಿಸು ವುದಕ್ಕಾಗಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಲು ಸಿಪಿಐಎಂ ಉಡುಪಿ ಜಿಲ್ಲಾ ಸಮಿತಿ ನಿರ್ಧರಿಸಿದೆ.
ಬಿಜೆಪಿ ದಿನದಿಂದ ದಿನಕ್ಕೆ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುತ್ತಾ ಸರ್ವಾಧಿಕಾರದತ್ತ ಸಾಗುತ್ತಿದೆ. 146 ಸಂಸತ್ ಸದಸ್ಯರನ್ನು ಅಮಾನತು ಮಾಡಿ, 19 ಕಾಯಿದೆಗಳನ್ನು ಪಾಸು ಮಾಡಿದೆ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವು ದಾಗಿ ಸುಳ್ಳು ಹೇಳಿ ಯುವಜನರಿಗೆ ವಂಚನೆ ಮಾಡಿದೆ. ಅಗತ್ಯ ವಸ್ತುಗಳ ಬೆಲೆ ವಿಪರೀತ ಹೆಚ್ಚಳವಾಗಿದೆ. ಚುನಾವಣೆ ಪ್ರಣಾಳಿಕೆಯಲ್ಲಿ, ರೈತರಿಗೆ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದರೂ, ಜಾರಿ ಮಾಡಿಲ್ಲ. ಇದಕ್ಕಾಗಿ ಹೋರಾಟ ನಡೆಸಿದ ರೈತರ ಮೇಲೆ ದಬ್ಬಾಳಿಕೆ ನಡೆಸಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಇನ್ನೊಮ್ಮೆ ಅಧಿಕಾರದ ಗದ್ದುಗೆ ಹಿಡಿದರೆ ನೂತನ ಕಾರ್ಮಿಕ ಸಂಹಿತೆಗಳು ಜಾರಿಯಾಗಿ ಕಾರ್ಮಿಕರು ಎಲ್ಲಾ ಸೌಲಭ್ಯಗಳನ್ನೂ ಕಳೆದು ಕೊಳ್ಳುತ್ತಾರೆ. ದೇಶದ ಜನರು ತಮ್ಮ ಬೆವರಿನ ತೆರಿಗೆಯಿಂದ ಕಟ್ಟಿ ಬೆಳೆಸಿದ ವಿದ್ಯುತ್, ರೈಲು, ಬ್ಯಾಂಕ್, ವಿಮೆ ಮೊದಲಾದ ಸಾರ್ವಜನಿಕ ಸಂಸ್ಥೆಗಳು ಬಂಡವಾಳಗಾರರ ಪಾಲಾಗಲಿದೆ.
ಒಟ್ಟಾರೆಯಾಗಿ ಕಾರ್ಮಿಕರು, ರೈತರು, ಜನಸಾಮಾನ್ಯರ ವಿರೋಧಿ ನೀತಿ ಯನ್ನು ಬಿಜೆಪಿ ಹರಿಬಿಟ್ಟಿದೆ. ಕಳೆದ ಹತ್ತು ವರ್ಷಗಳಲ್ಲಿ ಇಲ್ಲಿಂದ ಆಯ್ಕೆಯಾದ ಬಿಜೆಪಿ ಸಂಸತ್ ಸದಸ್ಯರು ಇಲ್ಲಿನ ಅಭಿವೃದ್ಧಿ ಬಗ್ಗೆ ಗಮನ ನೀಡಿಲ್ಲ. ಇಎಸ್ಐ ಆಸ್ಪತ್ರೆಯೂ ಸೇರಿದಂತೆ ಕೇಂದ್ರ ಸರಕಾರದ ಹೂಡಿಕೆಗಳನ್ನು ತರಲು ಪ್ರಯತ್ನಿಸಿಲ್ಲ ಎಂದು ಸಿಪಿಎಂಐ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯ ಪ್ರಕಾಶ ಹೆಗ್ಡೆಯವರು ನಾಮಪತ್ರ ಸಲ್ಲಿಸುವ ಸಮಾರಂಭದಲ್ಲಿ ಶುಭಕೋರಿ ಬೆಂಬಲ ವ್ಯಕ್ತಪಡಿಸಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷವು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ಗೆಲುವಿಗಾಗಿ ಶ್ರಮಿಸಲಾಗುವುದು. ಈ ನಿಟ್ಟಿನಲ್ಲಿ ಪಕ್ಷವು ಸ್ವತಂತ್ರವಾಗಿ ರಾಜಕೀಯ ಸಮಾವೇಶ ಹಾಗೂ ಮನೆ ಮನೆ ಪ್ರಚಾರ ನಡೆಸಲು ನಿರ್ಧರಿಸಿದೆ. ಸ್ವತಂತ್ರ ಪ್ರಚಾರ ನಡೆಸುವಾಗ ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳನ್ನು ಸೋಲಿಸುವ ಮಹತ್ವವನ್ನು ವಿವರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.