ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ತರಬೇತಿ ಶಿಬಿರ ಉದ್ಘಾಟನೆ
ಉಡುಪಿ, ಜೂ.13: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಪೆರಂಪಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಪೆರಂಪಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ನಲ್ಲಿ ಸ್ತ್ರೀಶಕ್ತಿ ಗುಂಪಿನ ಮಹಿಳೆಯರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಶಿಬಿರವನ್ನು ಉದ್ಘಾಟಿಸಿದ ಭಾರತೀಯ ವಿಕಾಸ ಟ್ರಸ್ಟ್ನ ಹಿರಿಯ ಸಲಹೆಗಾರ ಸಿ. ಜಗದೀಶ ಪೈ ಮಾತನಾಡಿ, ಸ್ತ್ರೀ ಶಕ್ತಿ ದೇಶದ ಶಕ್ತಿ. ದೇಶದ ಸುಭದ್ರತೆಗೆ ಮಹಿಳಾ ಸಬಲೀಕರಣ ಮಹತ್ತರ ಪಾತ್ರ ವಹಿಸುತ್ತದೆ. ಸದಸ್ಯರಿಗೆ ಕಾಲಕಾಲಕ್ಕೆ ಕೌಶಲ್ಯಾಭಿವೃಧಿ ತರಬೇತಿ ಹಮ್ಮಿಕೊಳ್ಳುವುದರಿಂದ ಕ್ರಿಯಾಶೀಲರಾಗಿ ಗುಂಪು ಚಟುವಟಿಕೆಯಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ವೀಣಾ ವಿವೇಕಾನಂದ ಮಾತನಾಡಿ, ತರಬೇತಿ ಜ್ಞಾನ ಮತ್ತು ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳುವಲ್ಲಿ ಸಹಕಾರಿಯಾಗುತ್ತದೆ. ಮಹಿಳೆಯರು ಮನೆ, ಮಕ್ಕಳ ಜವಾಬ್ದಾರಿಯ ಜೊತೆ ಸಮಾಜದ ಅಭಿವೃದ್ಧಿಯಲ್ಲಿಯೂ ಮಹತ್ವದ ಪಾತ್ರ ವಹಿಸಬೇಕು. ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಗುಂಪಿನ ಇತರೆ ಸದಸ್ಯ ರೊಂದಿಗೆ ಹಂಚಿಕೊಂಡು ಅಭಿವೃದ್ಧಿಯ ಪಥದಲ್ಲಿ ಮಹತ್ತರ ಜವಾಬ್ದಾರಿ ವಹಿಸಲು ಮಹಿಳೆಯರು ಕಾರಣೀಭೂತ ರಾಗುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾಕ್ಷರತಾ ಸಂಸ್ಥೆಯ ಮೀರಾ ಜೆ ಅಮೂಲ್ಯ, ಶಿಶು ಅಭಿವೃದ್ಧಿ ಯೋಜನೆಗಳ ಮೇಲ್ವಿಚಾರಕಿಯರು, ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ ಹಾದಿಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಟರ್ ಸ್ಪೆಷಲಿಸ್ಟ್ ದೀಪಾ ನಿರೂಪಿಸಿದರೆ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ ವಂದಿಸಿದರು.