ಕಾಂಗ್ರೆಸ್ ಕಚೇರಿಯಲ್ಲಿ ಪೋಸ್ಟರ್ ಅಂಟಿಸಲು ಯತ್ನ: ಬಿಜೆಪಿ ಮುಖಂಡರನ್ನು ತಡೆದ ಪೊಲೀಸರು

ಉಡುಪಿ, ಜೂ.24: ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತದೆ ಎಂಬ ಕಾಂಗ್ರೆಸ್ ಆರೋಪವನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪೋಸ್ಟರ್ ಅಂಟಿಸುವ ಪ್ರತಿಭಟನೆಗೆ ಮುಂದಾದ ಮುಖಂಡರು ಹಾಗೂ ಕಾರ್ಯ ಕರ್ತರು ಪೊಲೀಸರು ತಡೆದ ಘಟನೆ ಇಂದು ನಡೆದಿದೆ.
‘ತುರ್ತುಪರಿಸ್ಥಿತಿ ಹೇರಿದ ಇಂದಿರಾ ಸ್ವಾರ್ಥಕ್ಕಾಗಿ ಸಂವಿಧಾನ ದುರ್ಬಳಕೆ.! ಖರ್ಗೆ ಕ್ಷಮೆ ಕೇಳಲಿ’, ’ಅವತ್ತು ತುರ್ತು ಪರಿಸ್ಥಿತಿ ವಿರೋಧಿಸಿದ್ದ ಸಿದ್ದರಾಮಯ್ಯ ಇವತ್ತು ಮೌನ’, ’ಸಂವಿಧಾನದ ಬಗ್ಗೆ ಮಾತನಾಡಲು ಕಾಂಗ್ರೆಸ್ ನವರಿಗೆ ನೈತಿಕತೆ ಎಲ್ಲಿದೆ’ ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸಂವಿಧಾನಕ್ಕೆ ಮಾಡಿದ ದ್ರೋಹಕ್ಕೆ ರಾಹುಲ್ ಗಾಂಧಿ ಕ್ಷಮೆ ಕೇಳಲಿ’ ಈ ಮೊದಲಾದ ಬರಹವುಳ್ಳ ಪೋಸ್ಟರ್ಗಳನ್ನು ಬಿಜೆಪಿ ಮುಖಂಡರು ಹಿಡಿದುಕೊಂಡು ಕಾಂಗ್ರೆಸ್ ಕಚೇರಿಗೆ ತೆರಳಲು ಮುಂದಾದರು. ಬಿಜೆಪಿ ಕಚೇರಿಯಿಂದ ತೆರಳಿದ ಬಿಜೆಪಿ ಮುಖಂಡರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದರು. ಪೊಲೀಸರ ಮನವಿಗೆ ಸ್ಪಂದಿಸಿದ ಮುಖಂಡರು ಬಳಿಕ ಪ್ರತಿಭಟನೆಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಶ್ಮಾ ಉದಯ್ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಮಾಧ್ಯಮ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ಮುಖಂಡರಾದ ಶಾಮಲ ಕುಂದರ್, ಗಿರೀಶ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.





