ವಿಕಲಚೇತನರ, ಹಿರಿಯ ನಾಗರಿಕರ ಮೌಲ್ಯಮಾಪನ ಶಿಬಿರ

ಉಡುಪಿ: ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣೆಗಾಗಿ 7 ತಾಲೂಕುಗಳಲ್ಲಿ ನಡೆದ ಮೌಲ್ಯಮಾಪನ ಶಿಬಿರವು ಯಶಸ್ವಿಯಾಗಿ ಮುಕ್ತಾಯಗೊಂಡಿದೆ.
ಶಿಬಿರಗಳಲ್ಲಿ ಒಟ್ಟು ೯೬೦ ಫಲಾನುಭವಿಗಳು ಭಾಗವಹಿಸಿದ್ದರು. ವಿಕಲಚೇತನ ಮತ್ತು ಹಿರಿಯ ನಾಗರಿಕರಿಗೆ ಶಿಬಿರಗಳಲ್ಲಿ ವಿಕಲಚೇತನರ ಸಮಸ್ಯೆಗಳ ಬಗ್ಗೆ ತಪಾಸಣೆ ಮತ್ತು ಅರಿವು ಮೂಡಿಸಲಾಯಿತು. ಉಡುಪಿ ನಗರಸಭೆ, ಸ್ಥಳೀಯ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಪುರಸಭೆ ಮತ್ತು ಪಟ್ಟಣ ಪಂಚಾಯತ್ಗಳು ಶಿಬಿರದ ಯೋಜನೆಗೆ ಸಹಕರಿಸಿದವು.
ಶಿಬಿರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ. ಗಡಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲ ಸಿ.ಕೆ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ನೋಡಲ್ ಅಧಿಕಾರಿ ಜಯಶ್ರೀ, ತಾಲೂಕು, ನಗರ ಮತ್ತು ಗ್ರಾಮೀಣ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಅಲಿಂಕೋ ಸಂಸ್ಥೆಯ ಅಧಿಕಾರಿಗಳು ಮಾರ್ಗದರ್ಶನ ನೀಡಿದ್ದರು.
ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಜಿಲ್ಲಾಸ್ವತ್ರೆಯ ವೈದ್ಯರು ಶಿಬಿರಗಳಲ್ಲಿ ಭಾಗವಹಿಸಿ, ಸಲಹೆ ಸೂಚನೆ ನೀಡಿದ್ದರು ಎಂದು ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಕಟನೆ ತಿಳಿಸಿದೆ.





