ಕಡಲ ಕೊರೆತ, ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳಿಂದ ಶೀಘ್ರ ಸಭೆ: ಉಡುಪಿ ಡಿಸಿ ವಿದ್ಯಾಕುಮಾರಿ
ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಉಡುಪಿ: ಕರಾವಳಿಯಲ್ಲಿ ಈ ಬಾರಿಯ ಕಡಲ ಕೊರೆತ ಹಾಗೂ ಮಳೆ ಹಾನಿಯ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂದಿನ ಎರಡು-ಮೂರು ದಿನಗಳಲ್ಲಿ ಪ್ರತ್ಯೇಕ ಸಭೆಯನ್ನು ನಡೆಸಲಿದ್ದಾರೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಸಭೆಯಲ್ಲಿ ಸಮಗ್ರ ಮಾಹಿತಿ ನೀಡಲು ಹಾಗೂ ಅನುದಾನ ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಈ ಬಾರಿ ಪ್ರಾಕೃತಿಕ ವಿಕೋಪದಿಂದ ಆಗಿರುವ ನಷ್ಟಗಳ ವಿವರವನ್ನು ಛಾಯಾಚಿತ್ರದೊಂದಿಗೆ ಇಲಾಖಾವಾರು ಅತೀ ಶೀಘ್ರದಲ್ಲಿ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿಯೂ ಸಹ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಮಾನವ ಜೀವಹಾನಿ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗ ದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಆಗಸ್ಟ್ ಕೊನೆವರೆಗೂ ಮಳೆಗಾಲ: ಮುಂಗಾರು ಮಳೆ ಆಗಸ್ಟ್ ತಿಂಗಳ ಕೊನೆಯವರೆಗೂ ಬರಲಿದೆ. ನೆರೆ- ಪ್ರವಾಹವು ಯಾವಾಗ ಬೇಕಾದರೂ ಉಂಟಾಗುವ ಸಾಧ್ಯತೆಗಳಿರುತ್ತವೆ. ಇವುಗಳ ನಿರ್ವಹಣೆಗೆ ಅಧಿಕಾರಿಗಳು ಸನ್ನದ್ಧರಾಗಿರಬೇಕು. ನಗರ ಹಾಗೂ ಗ್ರಾಮೀಣ ಭಾಗದ ತಗ್ಗುಪ್ರದೇಶಗಳಲ್ಲಿ ಮಳೆಯ ನೀರು ನುಗ್ಗಿ ನೆರೆ ಉಂಟಾಗುವ ಸಾಧ್ಯತೆಗಳಿರುವ ವ್ಯಾಪ್ತಿ ಯಲ್ಲಿ ಜನರು ಹಾಗೂ ಕುಟುಂಬ ಗಳನ್ನು ತಕ್ಷಣದಲ್ಲಿಯೇ ಬೇರೆಡೆಗೆ ವರ್ಗಾಯಿಸುವುದು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಯೋಜನೆಗಳನ್ನು ರೂಪಿಸಿ, ಸಮಸ್ಯೆ ಕಂಡುಬಂದಲ್ಲಿ ತಕ್ಷಣವೇ ನೆರವಿಗೆ ಧಾವಿಸಬೇಕು ಎಂದರು.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಪಿ.ಡಿ.ಓಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಆಗಿಂದಾಗ್ಗೆ ಸಭೆ ನಡೆಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಸಹ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಅವರು ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯತ್ ಇ.ಓಗಳೊಂದಿಗೆ ಸಮನ್ವಯತೆ ಹೊಂದಿ ತುರ್ತು ಸಂದರ್ಭದಲ್ಲಿ ಸ್ಪಂದಿಸಬೇಕು ಎಂದರು.
ತಕ್ಷಣವೇ ತಾತ್ಕಾಲಿಕ ಕಾಮಗಾರಿ: ಕಾಲು ಸಂಕ, ಸಣ್ಣ-ಪುಟ್ಟ ಕಟ್ಟಡಗಳ ದುರಸ್ಥಿ ಕಾರ್ಯ, ರಸ್ತೆ ಗುಂಡಿಗಳನ್ನು ಮುಚ್ಚು ವುದು ಸೇರಿದಂತೆ ವಿವಿಧ ತಾತ್ಕಾಲಿಕ ಕಾಮಗಾರಿಗಳನ್ನು ಕೈಗೊಳ್ಳಲು ಎನ್ಡಿಆರ್ಎಫ್ನ ಅನುದಾನ ವನ್ನು ಬಳಕೆ ಮಾಡಿಕೊಳ್ಳಬಹುದು. ಹಾನಿ ವರದಿ ನೀಡುವ ಮುನ್ನ ಅಭಿಯಂತರರು ಸ್ಥಳ ಪರಿಶೀಲನೆ ಮಾಡಿ ನಿಖರ ನಷ್ಟದ ವರದಿ ನೀಡಬೇಕು ಎಂದು ಡಾ.ಕೆ.ವಿದ್ಯಾಕುಮಾರಿ ತಿಳಿಸಿದರು.
ಕೆಲವು ಮೀನುಗಾರಿಕಾ ಚಟುವಟಿಕೆಗೆ ಇರುವ ರಸ್ತೆಗಳು ಹಾನಿಗಳಾಗಿವೆ ಎಂಬ ದೂರುಗಳೂ ಕೇಳಿ ಬರುತ್ತಿವೆ. ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ, ಅವುಗಳ ನಿರ್ವಹಣೆಗೆ ಅಗತ್ಯವಿರುವ ಪ್ರಸ್ತಾವನೆಯನ್ನು ಕೂಡಲೇ ನೀಡಬೇಕೆಂದು ಸೂಚನೆ ನೀಡಿದರು.
ಡೆಂಗಿ ಪ್ರಕರಣ ಹೆಚ್ಚಳ ಸಾಧ್ಯತೆ: ಜಿಲ್ಲೆಯಲ್ಲಿ ಡೆಂಗಿ ಪ್ರಕರಣಗಳು ಮಳೆಗಾಲದಲ್ಲಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಎಚ್ಚರದಿಂದ ಇದ್ದು, ಮಳೆಯ ನೀರು ಎಲ್ಲೆಂದರಲ್ಲಿ ನಿಂತುಕೊಳ್ಳದಂತೆ ನೋಡಿ ಕೊಳ್ಳಬೇಕು. ಕಲ್ಲುಕೋರೆಗಳಲ್ಲಿ ಸಹ ನೀರು ನಿಲ್ಲದಂತೆ ಎಚ್ಚರ ವಹಿಸಲು ಮಾಲಕರಿಗೆ ಸೂಚನೆ ನೀಡಬೇಕು. ಫಾಗಿಂಗ್ ಹಾಗೂ ರಾಸಾಯನಿಕಗಳ ಸ್ಪ್ರೇ ಮಾಡುವಂತೆ ತಿಳಿಸಬೇಕು ಎಂದ ಅವರು, ಈವರೆಗೆ 5 ಮಲೇರಿಯಾ ಪ್ರಕರಣಗಳು ಕಂಡುಬಂದಿವೆ. ಇವುಗಳೂ ಸಹ ಹೆಚ್ಚಾಗದಂತೆ ಜಾಗೃತಿ ವಹಿಸಬೇಕು ಎಂದರು.
ಮಳೆಯಿಂದಾಗಿ ಹಳೆಯ ವಿದ್ಯುತ್ಚ್ಛಕ್ತಿ ತಂತಿಗಳು ಬಿದ್ದು, ಜೀವ ಹಾನಿ ಉಂಟಾಗುವ ಸಂಭವವಿರುವುದರಿಂದ ಹಳೆಯ ತಂತಿಗಳನ್ನು ಬದಲಾಯಿಸಲು ಮೆಸ್ಕಾಂ ಇಲಾಖೆಯವರು ಕ್ರಮ ಕೈಗೊಳ್ಳಬೇಕು. ಈಗಾಗಲೇ ಅಪಾಯಕಾರಿ ರಸ್ತೆ ಬದಿಗಳ ಅನೇಕ ಮರಗಳನ್ನು ತೆರವುಗೊಳಿಸಲಾಗಿದೆ. ಕೆಲವು ಖಾಸಗಿ ಯವರ ಜಾಗದಲ್ಲಿಯೂ ಸಹ ಅಪಾಯಕಾರಿ ಯಾದ ಮರಗಳು ಇವೆ ಎಂದು ದೂರುಗಳು ಕಂಟ್ರೋಲ್ ರೂಂಗೆ ಬರುತ್ತಿವೆ. ಇವುಗಳ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಅದರ ಖರ್ಚನ್ನು ಖಾಸಗಿ ಮಾಲಕರಿಂದಲೇ ತೆರಿಗೆ ರೀತಿಯಲ್ಲಿ ವಸೂಲಿ ಮಾಡಬೇಕೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕರಾವಳಿ ಕಾವಲು ಪಡೆಯ ಎಸ್ಪಿ ಮಿಥುನ್ ಎಚ್.ಎನ್, ಡಿಎಫ್ಓ ಗಣಪತಿ, ಪೌರಾಯುಕ್ತ ರಾಯಪ್ಪ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರ್ಗಳು ಹಾಗೂ ಇತರರು ಉಪಸ್ಥಿತರಿದ್ದರು.
ಜುಲೈ ತಿಂಗಳಲ್ಲಿ ಶೇ.50 ಅಧಿಕ ಮಳೆ
ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇ.50ರಷ್ಟು ಹೆಚ್ಚು ಮಳೆ ಸುರಿದಿದೆ. ಪ್ರಸ್ತುತ ಮಳೆಗಾಲದಲ್ಲಿ (ಜೂ.1ರಿಂದ) ಈವರೆಗೆ ಒಟ್ಟಾರೆ ಶೇ.17ರಷ್ಟು ಹೆಚ್ಚು ಮಳೆಯಾಗಿದೆ. ಕೆಲವು ನದಿಗಳು ಅಪಾಯದ ಮಟ್ಟ ಮೀರಿ ಹರಿ ದಿವೆ. ಎನ್ಡಿಆರ್ಎಫ್ ನಿಯಮಾವಳಿ ಅನ್ವಯ ನಷ್ಟ ಪರಿಹಾರ ನೀಡಲು ಮಾಹಿತಿಗಳನ್ನು ಕ್ರೋಢೀಕರಿಸಿ ನೀಡಬೇಕು.
ಈವರೆಗೆ ಜಿಲ್ಲೆಯಲ್ಲಿ 645 ಮನೆಗಳುಭಾಗಶಃ, 21 ಮನೆಗಳು ಸಂಪೂರ್ಣ ಪ್ರಮಾಣದಲ್ಲಿ ಹಾನಿಯಾಗಿವೆ. 90.882 ಹೆಕ್ಟೇರ್ ಪ್ರದೇಶದ ತೋಟಗಾರಿಕಾ ಬೆಳೆಗಳಿಗೆ ಹಾನಿ, 59.95 ಹೆ. ಕೃಷಿ ಬೆಳೆ ಹಾನಿ ಸೇರಿದಂತೆ ಮೂಲಸೌಕರ್ಯಗಳ ಅಂದಾಜು ನಷ್ಟ 100.37 ಲಕ್ಷ ರೂ. ಎಂದು ಅಂದಾಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.







