ಕರ್ನಾಟಕ ಕ್ರೀಡಾಕೂಟ| ಆಟ ವೀಕ್ಷಿಸಿ, ಕ್ರೀಡಾಪಟುಗಳನ್ನು ಉತ್ತೇಜಿಸಿ: ಉಡುಪಿ ಡಿಸಿ ವಿದ್ಯಾಕುಮಾರಿ ಕರೆ

ಉಡುಪಿ, ಜ.18: ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಹಾಗೂ ಮಣಿಪಾಲ ಮಾಹೆಯ ವಿವಿಧ ಕ್ರೀಡಾಂಗಣಗಳಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ರಾಜ್ಯದ ಮೂಲೆ ಮೂಲೆ ಗಳಿಂದ ಆಗಮಿಸಿದ ಕ್ರೀಡಾ ಪಟುಗಳು ಕ್ರೀಡಾ ಪ್ರದರ್ಶನವನ್ನು ನೀಡುತಿದ್ದಾರೆ. ಸಾರ್ವಜನಿಕರು ಹಾಗೂ ಕ್ರೀಡಾಸಕ್ತರು ಸ್ಪರ್ಧೆ ನಡೆಯುವ ಸ್ಥಳದಲ್ಲಿ ಖುದ್ದಾಗಿ ಹಾಜರಿದ್ದು, ವಿವಿ ಕ್ರೀಡಾಸ್ಪರ್ಧೆಗಳನ್ನು ವೀಕ್ಷಿಸುವುದಲ್ಲದೇ ಕ್ರೀಡಾಪಟುಗಳನ್ನು ಉತ್ತೇಜಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಉಡುಪಿಯ ಯುವಜನತೆಗೆ ಕರೆ ನೀಡಿದ್ದಾರೆ.
ಶನಿವಾರ ಮಣಿಪಾಲದ ಜಿಪಂನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿ, ಉನ್ನತ ಸ್ಥಾನ ಪಡೆದ ರಾಜ್ಯದ 8 ಕ್ರೀಡಾ ಸ್ಪರ್ಧಿಗಳು ಅಥವಾ ತಂಡಗಳು ಭಾಗವಸುತಿವೆ. ಕ್ರೀಡಾ ಸ್ಪರ್ಧೆ ಗಳನ್ನು ವೀಕ್ಷಿಸಲು ಉಚಿತ ಪ್ರವೇಶವನ್ನು ಕಲ್ಪಿಸಲಾಗಿದೆ. ಜಿಲ್ಲೆಯ ಕ್ರೀಡಾಭಿಮಾನಿಗಳು, ಕ್ರೀಡಾಪಟುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಈ ವೇಳೆ ಉಪಸ್ಥಿತರಿದ್ದು ಕ್ರೀಡೆಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಕರ್ನಾಟಕ ಕ್ರೀಡಾ ಕೂಟದ ಸಮಾರೋಪ ಸಮಾರಂಭವು ಇದೇ ಜನವರಿ 23ರಂದು ಸಂಜೆ 5 ಗಂಟೆಗೆ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ವಿವಿಧ ಸಚಿವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸ ಬೇಕು ಎಂದವರು ತಿಳಿಸಿದರು.
ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಕ್ರೀಡಾ ಚಟವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಶಾಲಾ ಶಿಕ್ಷಕರು, ಪೋಷಕರು ಪ್ರೋತ್ಸಾಹಿಸಬೇಕು. ಕ್ರೀಡೆ ಮಾನವನ ಸದೃಢ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದ ಅವರು, ರಾಜ್ಯ ಸರಕಾರದ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಶೇ.3ರಷ್ಟು ಹಾಗೂ ಇತರೆ ಇಲಾಖೆಗಳಲ್ಲಿ ನೇಮಕಾತಿಯ ಸಂದರ್ಭದಲ್ಲಿ ಶೇ. 2ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಾಗಿರುತ್ತವೆ. ಆದ್ದರಿಂದ ಕ್ರೀಡೆ ಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದರು.
ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್. ಮಾತನಾಡಿ, ಕರ್ನಾಟಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಅದ್ಧೂರಿಯಾಗಿ ನಡೆಯಲಿದ್ದು, ಆಳ್ವಾಸ್ ವಿರಾಸತ್ನ ವಿದ್ಯಾರ್ಥಿಗಳ ತಂಡದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸೌಂಡ್ ಆಂಡ್ ಲೈಟ್ಸ್ ಕಾರ್ಯಕ್ರಮ ಸಹ ಅಂದು ಸಂಜೆ ನಡೆಯಲಿದೆ ಎಂದರು.
ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಕ್ರೀಡೆಯ ಬಗ್ಗೆ ಮಕ್ಕಳಿಗೆ ಹಾಗೂ ಯುವ ಜನರಿಗೆ ದೇಹಕ್ಕೆ ಹಾಗೂ ಮನಸ್ಸಿಗೆ ಆಗುವ ಲಾಭಗಳ ಬಗ್ಗೆ ಅವರುಗಳಲ್ಲಿ ಅರಿವು ಮೂಡಿಸಿ, ಕ್ರೀಡಾ ಚಟವಟಿಕೆಗಳಲ್ಲಿ ಭಾಗವಸುವುದು, ವೀಕ್ಷಿಸುವುದಕ್ಕೆ ಪ್ರೋತ್ಸಾಹಿಸಬೇಕು ಎಂದರು.
ಸಭೆಯಲ್ಲಿ ಎಎಸ್ಪಿ ಸಿದ್ಧಲಿಂಗಪ್ಪ, ಪೌರಾಯುಕ್ತ ಡಾ. ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.







