‘ಎಸೆಸೆಲ್ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ’
ವಿದ್ಯಾರ್ಥಿಗಳಿಗೆ ಉಡುಪಿ ಡಿಸಿ ಕಿವಿಮಾತು

ಉಡುಪಿ, ಮಾ.7: ವಿದ್ಯಾರ್ಥಿಗಳು ಮುಂಬರುವ ಎಸೆಸೆಲ್ಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ, ಉತ್ತಮವಾಗಿ ಉತ್ತರಗಳನ್ನು ಬರೆಯುವಂಥ ಮನಸ್ಥಿತಿಯನ್ನು ಹೊಂದುವಂತೆ ಪೂರಕ ಕಾರ್ಯಗಳನ್ನು ಶಾಲಾ ಶಿಕ್ಷಕರು ಮಾಡುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸಲಹೆ ನೀಡಿದ್ದಾರೆ.
ನಗರದ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಇಂದು ಜಿಲ್ಲೆಯ ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳಿಗೆ ಎಸೆಸೆಲ್ಸಿ ಪರೀಕ್ಷೆ ಪೂರ್ವ ತಯಾರಿ ಹಾಗೂ ಉತ್ತಮ ಫಲಿತಾಂಶ ಗಳಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಈಗಾಗಲೇ ಎಸೆಸೆಲ್ಸಿ ವಿದ್ಯಾರ್ಥಿಗಳ ಪಠ್ಯಕ್ರಮ ಗಳನ್ನು ಪೂರ್ಣಗೊಳಿಸಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಮರ್ಪಕವಾಗಿ ಎದುರಿಸುವ ಕೊನೆಯ ಹಂತದಲ್ಲಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಪರಿಣಾಮಕಾರಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಬೇಕು. ಕೆಲವು ವಿಷಯಗಳ ಓದಿನಲ್ಲಿ ಹಿಂದಿರುವ ಮಕ್ಕಳಿಗೆ ಕಷ್ಟಕರ ವಿಷಯಗಳಿಗೆ ಆದ್ಯತೆ ನೀಡಿ, ಉತ್ತಮ ಅಧ್ಯಯನ ಮಾಡಲು ಸಹಕರಿಸಬೇಕೆಂದರು.
ಕಳೆದ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಯಾವುದೇ ಗ್ರೇಸ್ ಮಾರ್ಕ್ಸ್ ಇಲ್ಲದೇ ಶೇ.97ರಷ್ಟು ಫಲಿತಾಂಶ ಪಡೆದು ಪ್ರಥಮ ಸ್ಥಾನದಲ್ಲಿತ್ತು. ಈ ಬಾರಿಯೂ ಪರೀಕ್ಷಾ ಫಲಿತಾಂಶ ದಲ್ಲಿ ಪ್ರಥಮ ಸ್ಥಾನ ಪಡೆಯಲು ಪರಿಣಾಮಕಾರಿ ತಯಾರಿ ನಡೆಸಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಸೂಚಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾತನಾಡಿ, ವಿದ್ಯಾರ್ಥಿ ಗಳು ವಿದ್ಯಾರ್ಜನೆಯ ಜೊತೆಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಆರಂಭದಿಂದಲೇ ನಿರಂತರವಾಗಿ ಅಧ್ಯಯನ ನಡೆಸಿದಲ್ಲಿ ಯಾವುದೇ ರೀತಿಯ ತೊಂದರೆಗಳು ಉಂಟಾಗುವುದಿಲ್ಲ. ಕೊನೆಯ ಪರೀಕ್ಷಾ ದಿನಗಳಲ್ಲಿ ಓದಲು ಹೋದಾಗ ಗೊಂದಲ ಉಂಟಾಗುತ್ತವೆ. ತಾಳ್ಮೆಯಿಂದ ಓದಬೇಕು. ಸಮಸ್ಯೆಗಳಿದ್ದಲ್ಲಿ ಶಾಲಾ ಶಿಕ್ಷಕರನ್ನು ಭೇಟಿ ಮಾಡಿ ಬಗೆಹರಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಹೊಂದಿರಬೇಕು. ವ್ಯಸನಗಳಿಂದ ದೂರವಿರಬೇಕು ಎಂದ ಅವರು, ಶಾಲೆಯ 100ಮೀ. ವ್ಯಾಪ್ತಿಯೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ನಿರ್ಬಂಧವಿದೆ. ಇದು ಉಲ್ಲಂಘನೆಯಾಗದಂತೆ ಮುಖ್ಯ ಶಿಕ್ಷಕರು ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಡಯಟ್ ಉಪಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಸೈಂಟ್ ಸಿಸಿಲೀಸ್ ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಪ್ರೀತಿ, ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಜಿಲ್ಲೆಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರುಗಳು ಉಪಸ್ಥಿತರಿದ್ದರು.







