ಉಡುಪಿ ಜಿಲ್ಲಾಮಟ್ಟದ ಕಂದಾಯ ಉತ್ಸವ ಉದ್ಘಾಟನೆ

ಬೈಂದೂರು, ಮಾ.9: ಬೈಂದೂರು ಕಂದಾಯ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಕಂದಾಯ ಇಲಾಖೆ ನೌಕರರ ಕಂದಾಯ ಉತ್ಸವ ’ರೆವಿನ್ಯೂ ಕಫ್ -2025’ ಬೈಂದೂರು ಗಾಂಧಿ ಮೈದಾನದಲ್ಲಿ ಇತ್ತೀಚೆಗೆ ನಡೆಯಿತು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಮಾತನಾಡಿ, ಕಂದಾಯ ಇಲಾಖೆ ಸಿಬ್ಬಂದಿ ತಮ್ಮ ಕರ್ತವ್ಯದ ಜೊತೆಗೆ ಸಾಮಾಜಿಕ ಜವಾಬ್ದಾರಿ ಅತ್ಯಗತ್ಯ. ಕ್ರೀಡೆಯ ಮೂಲಕ ಪರಸ್ಪರ ಭಾಂಧವ್ಯ ವೃದ್ದಿಯ ಜೊತೆಗೆ ಸಂಘಟನಾತ್ಮಕ ಚಿಂತನೆ ಮೂಡುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಅಬೀದ ಗದ್ಯಾಳ್, ಭೂ ದಾಖಲೆಗಳ ಉಪನಿರೀಕ್ಷಕ ರವೀಂದ್ರ, ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್., ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಎಸ್.ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಎಸ್.ಎ.ಪ್ರಸಾದ್, ಕುಂದಾಪುರ ತಹಶೀಲ್ದಾರ ಮಲ್ಲಿಕಾರ್ಜುನ, ಉಡುಪಿ ತಹಶೀಲ್ದಾರ ಗುರುರಾಜ್ ಪಿ.ಆರ್., ಕಂದಾಯ ನಿರೀಕ್ಷಕ ರವಿಶಂಕರ್ ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಬೈಂದೂರು ತಹಶೀಲ್ದಾರ ಭೀಮಸೇನ ಕುಲಕರ್ಣಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಗಣಪತಿ ಹೋಬಳಿದಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಬಳಿಕ ವಿವಿಧ ಕಂದಾಯ ಇಲಾಖೆಯ ಸಿಬ್ಬಂದಿಗಳಿಂದ ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆದವು.





