ಕಸಾಪ ಜನ ಸಾಮಾನ್ಯರ ಪರಿಷತ್: ಕೊಂಡಳ್ಳಿ ಪ್ರಭಾಕರ ಶೆಟ್ಟಿ
ಬಂಟಕಲ್ಲು: 111ನೇ ಕಸಾಪ ಸಂಸ್ಥಾಪನಾ ದಿನಾಚರಣೆ

ಶಿರ್ವ: ಕನ್ನಡ ಸಾಹಿತ್ಯ ಪರಿಷತ್ ಕೇವಲ ಸಾಹಿತಿಗಳಿಗೆ ಮಾತ್ರ ಸೇರಿದ್ದಲ್ಲ. ಪ್ರತಿಯೊಬ್ಬ ಕನ್ನಡಿಗನಿಗೂ ಸೇರಿದ ಸ್ವಾಯತ್ತ ಸಂಸ್ಥೆಯಾಗಿದೆ. 111ನೇ ವರ್ಷ ಪೂರೈಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುತ್ತಿದ್ದು ಇದೇ ಅದರ ದೀರ್ಘ ಅಸ್ತಿತ್ವಕ್ಕೆ ಕಾರಣವಾಗಿದೆ. ಕಸಾಪ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ, ಜಾನಪದ, ಕನ್ನಡ, ಕನ್ನಡಿಗ, ಕರ್ನಾಟಕ ಇದೇ ಧ್ಯೇಯೋದ್ಧೇಶಗಳನ್ನು ಅನುಷ್ಠಾನ ಮಾಡಲು ಬದ್ದವಾಗಿದೆ. ಪ್ರೀತಿಯ ಬಾಂಧವ್ಯ ಬೆಳೆಸುವುದೇ ಇದರ ಆಶಯವಾಗಿದೆ ಎಂದು ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ಹೇಳಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಬಂಟಕಲ್ಲು ಬಸ್ಸು ನಿಲ್ದಾಣದ ಸಾರ್ವಜನಿಕ ತರೆದ ವಾಚನಾಲಯದಲ್ಲಿ ಸೋಮವಾರ ಜರಗಿದ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ಈ ಸಂಸ್ಥೆಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮೈಸೂರಿನ ಮಹಾ ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು, ಅವರಿಗೆ ಬೆಂಬಲವಾಗಿ ನಿಂತ ಮಹಾನ್ ದಿವಾನರಾಗಿದ್ದ ಸರ್.ಎಂ.ವಿಶ್ವಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ರವರು. ಇದು ಸಾಹಿತಿಗಳ ಪರಿಷತ್ತು ಅಲ್ಲ. ಜನಸಾಮಾನ್ಯರ ಪರಿಷತ್. ನಾವು ಆಡುವ ಭಾಷೆ ನೆಲದ ಭಾಷೆ, ಹೃದಯದ ಭಾಷೆ ಆಗಿದೆ ಮತ್ತು ಆಗಬೇಕು. ಇದು ಭಾವದ ಪ್ರತೀಕ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಸಾಹಿತಿ, ಕವಯತ್ರಿ ಪ್ರೊ.ಡಾ.ಫ್ಲಾವಿಯಾ ಕೆಸ್ತಲಿನೊ ಮಣಿಪಾಲ ಮಾತನಾಡಿ ಕರಾವಳಿ ಭಾಗದಲ್ಲಿ ಹೆಚ್ಚಿನವರ ಮಾತೃಭಾಷೆ, ತುಳು, ಕೊಂಕಣಿ, ಕುಂದಾಪ್ರ ಕನ್ನಡ ಇದ್ದರೂ ಶಾಲೆಯಲ್ಲಿ ಕನ್ನಡವನ್ನು ಕಲಿಯುತ್ತೇವೆ. ಕನ್ನಡದ ನೆಲದಲ್ಲಿ ನಾವೆಲ್ಲ ಕನ್ನಡಿಗರೇ ಆಗಿದ್ದೇವೆ. ಕನ್ನಡದ ಶ್ರೀಮಂತ ಸಂಸ್ಕೃತಿ, ಪರಂಪರೆಯನ್ನು ನೂರಾರು ಕವಿಗಳು, ಸಾಹಿತಿಗಳು ಸಾಹಿತ್ಯ ಗ್ರಂಥಗಳ ಮೂಲಕ ಅನಾವರಣಗೊಳಿಸಿದ್ದಾರೆ ಎಂದು ತಿಳಿಸಿದರು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯನುಡುಗಳ ನ್ನಾಡಿದರು. ಹಿರಿಯ ಸಾಹಿತಿ ಕುರಾಡಿ ಸೀತಾರಾಮ ಅಡಿಗ ಮತ್ತು ಟಿ.ಎಸ್.ಕಮಲಾಕ್ಷಿ ಅಡಿಗ ಸ್ಮಾರಕ ದತಿತಿ ಉಪನ್ಯಾಸದಲ್ಲಿ ಬೆನಗಲ್ ವಿಶ್ವಭಾರತ ಕರ್ನಾಟಕ ಪ್ರತಿಷ್ಠಾನದ ಸ್ಥಾಪಕ ಅಧ್ಯಕ್ಷ ಸೂರಾಲು ನಾರಾಯಣ ಮಡಿ ಮಾತನಾಡಿ ಕುರಾಡಿ ಸೀತಾರಾಮ ಅಡಿಗರು ಸಾಹಿತ್ಯ ಕ್ಷೇತ್ರಕ್ಕೆ ಕೊಟ್ಟ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ದಂಪತಿ ದೇವೇಂದ್ರ ನಾಯಕ್ ಶಿರ್ವ ಮತ್ತು ವನಿತಾ ಡಿ.ನಾಯಕ್ ರವರನ್ನು ದತ್ತಿ ಗೌರವದೊಂದಿಗೆ ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಕಸಾಪ ಕಾಪು ತಾಲೂಕು ಅಧ್ಯಕ್ಷ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ವೇದಿಕೆಯಲ್ಲಿ ಕಸಾಪ ಜಿಲ್ಲಾ ಸಭಾಭವನ ನಿರ್ಮಾಣ ಸಮಿತಿ ಅಧ್ಯಕ್ಷ ಕೆ.ದೇವದಾಸ್ ಹೆಬ್ಬಾರ್, ಬಂಟಕಲ್ಲು ನಾಗರಿಕ ಸೇವಾ ಸಮಿತಿ ಕೋಶಾಧಿಕಾರಿ ಜಗದೀಶ ಆಚಾರ್ಯ, ಬೆಳ್ಳೆ ಗ್ರಾಪಂ ಉಪಾಧ್ಯಕ್ಷ ಶಶಿಧರ ವಾಗ್ಲೆ ಮಾತನಾಡಿದರು.
ಬಂಟಕಲ್ಲು ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮಾ, ರಿಕ್ಷಾ ಯೂನಿಯನ್ ಅಧ್ಯಕ್ಷ ಮಂಜುನಾಥ ಪೂಜಾರಿ, ಡೇನಿಸ್ ಡಿಸೋಜ, ರವೀಂದ್ರ ಪಾಟ್ಕರ್, ಉಷಾ ಮರಾಠೆ, ಕಸಾಪ ಕಾಪು ಘಟಕದ ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ಸಮಿತಿಯ ಸದಸ್ಯರುಗಳಾದ ಮಧುಕರ್ ಎಸ್., ಪ್ರೊ.ವಿದ್ಯಾ ಅಮ್ಮಣ್ಣಾಯ, ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ಕಸಾಪ ಜಿಲ್ಲಾ ಸಮಿತಿಯ ನರಸಿಂಹಮೂರ್ತಿ, ನಾಗರಿಕ ಸೇವಾ ಸಮಿತಿಯ ಉಮೇಶ್ ರಾವ್ ಉಪಸ್ಥಿತರಿದ್ದರು.
ಕಸಾಪ ಸಹಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿದರು. ಬಂಟಕಲ್ಲು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಹಾಗೂ ಕಸಾಪ ಸಂಘಟನಾ ಕಾರ್ಯದರ್ಶಿ ಕೆ.ಆರ್.ಪಾಟ್ಕರ್ ಕಾರ್ಯಕ್ರಮ ನಿರೂಪಿಸಿ ದರು. ಗೌರವ ಕಾರ್ಯದರ್ಶಿ ನೀಲಾನಂದ ನಾಯ್ಕ್ ವಂದಿಸಿದರು.







