ಕಸಾಪ ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕೊಡವೂರು ಶಂಕರನಾರಾಯಣ ದೇವಳದಲ್ಲಿ ಮೇ17ರಂದು ನಡೆಯಲಿರುವ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ 15ನೆ ಕನ್ನಡ ಸಾಹಿತ್ಯ ಸಮ್ಮೇಳನ ಕಲಾಯತನ ಇದರ ಆಮಂತ್ರಣ ಪತ್ರಿಕೆಯನ್ನು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಇಂದು ಲೋಕಾರ್ಪಣೆಗೊಳಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ, ವಿವಿಧ ವಿಚಾರ ಗೋಷ್ಠಿಗಳು, ಚಿಂತನ -ಮಂಥನ, ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದವರಿಗೆ ಗೌರವ, ಪುಸ್ತಕ ಬಿಡುಗಡೆ ಮುಂತಾದ ವಿವಿಧ ಕಾರ್ಯಕ್ರಮಗಳು ಈ ಸಮ್ಮೇಳನದಲ್ಲಿ ಮೇಳೈಸಲಿರುವುದು ಅಭಿನಂದನಾರ್ಹ ಎಂದರು.
ಕನ್ನಡ ಸಂಸ್ಕೃತಿ ಇಲಾಖೆಯ ಉಡುಪಿ ಜಿಲ್ಲೆಯ ಸಹಾಯಕ ನಿರ್ದೇಶಕಿ ಪೂರ್ಣಿಮ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಸಾಧು ಸಾಲ್ಯಾನ್, ಕಸಾಪ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್. ಪಿ., ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜನಿ ವಸಂತ್, ಕೋಶಾಧಿಕಾರಿ ರಾಜೇಶ್ ಪಣಿಯಾಡಿ, ಉಡುಪಿ ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಸಾಂಸ್ಕೃತಿಕ ಕಾರ್ಯದರ್ಶಿ ಆರ್.ವಸಂತ್, ಸಾಮಾಜಿಕ ಜಾಲ ನಿರ್ವಹಣೆಯ ಸಂಚಾಲಕ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು.







