ಮಲ್ಪೆ ಮೀನುಗಾರಿಕೆ ಬಂದರು ಆಧುನೀಕರಣ: ಸಚಿವ ಮಂಕಾಳ ವೈದ್ಯ
22 ಕೋಟಿ ರೂ. ವೆಚ್ಚದ ಕಾಮಗಾರಿಗೆ ಜೂನ್ ತಿಂಗಳಲ್ಲಿ ಶಿಲಾನ್ಯಾಸ

ಮಲ್ಪೆ, ಮೇ 10: ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣಕ್ಕೆ ಈಗಾಗಲೇ 22 ಕೋಟಿ ರೂ. ಟೆಂಡರ್ ಆಗಿದ್ದು, ಕಾರ್ಯಾದೇಶ ಇನ್ನಷ್ಟೇ ಬರಬೇಕಾಗಿದೆ. ಜೂನ್ ತಿಂಗಳಲ್ಲಿ ಶಿಲಾನ್ಯಾಸ ನಡೆಯಲಿದ್ದು ರಾಜ್ಯದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಯನ್ನು ಮಲ್ಪೆಗೆ ಕರೆಸಿಕೊಳ್ಳುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ಮೀನುಗಾರಿಕಾ ಸಚಿವ ಮಂಕಾಳ ಎಸ್. ವೈದ್ಯ ತಿಳಿಸಿದ್ದಾರೆ.
ಮಲ್ಪೆ ಯಾಂತ್ರಿಕ(ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಿರ್ಮಾಣಗೊಂಡ ಸಾರ್ವಜನಿಕ ಮಹಿಳಾ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಭಾಗವಹಿಸಿ ಅವರು ಮಾತನಾಡುತಿದ್ದರು.
ಬೋಟುಗಳು ಮೀನು ಖಾಲಿ ಮಾಡಿದ ಮೇಲೆ ಹೊರಗಡೆ ಹೋಗಿ ನಿಲ್ಲುವ ವ್ಯವಸ್ಥೆಗೆ 1800 ಕೋಟಿ ರೂ. ಬೇಕಾಗುತ್ತದೆ. ಕೇಂದ್ರ ಸರಕಾರದ ಸಹಕಾರದಿಂದ ಇದಕ್ಕೆ ಬೇಕಾದ ಎಲ್ಲ ಯೋಜನೆಗಳನ್ನು ಸಿದ್ದ ಪಡಿಸಲಾಗುತ್ತಿದೆ. ಬಂದರಿನ ಸ್ವಚ್ಚತೆಯನ್ನು ಎಲ್ಲ ರೀತಿಯಲ್ಲೂ ಸರಿಪಡಿಸಲಾಗುವುದು. ಸಮುದ್ರದಲ್ಲಿ ಮೀನುಗಾರಿಕೆಯನ್ನು ನಡೆಸುವ ಮೀನುಗಾರರು ದೇಶ ಕಾಯುವ ಸೈನಿಕರಂತೆ ದಿನದ 24 ಗಂಟೆಯೂ ಮೀನುಗಾರಿಕೆಯ ಜತೆಗೆ ಕಾವಲುಗಾರ ಕೆಲಸವನ್ನು ಮಾಡುತ್ತಾರೆ ಎಂದರು.
ಮಹಿಳಾ ಶೌಚಾಲಯವನ್ನು ಉದ್ಘಾಟಿಸಿದ ಜಿಲ್ಲಾಧಿಕಾರಿ ಕೆ.ವಿದ್ಯಾ ಕುಮಾರಿ ಮಾತನಾಡಿ, ಮಲ್ಪೆ ಬಂದರಿನಲ್ಲಿ ಮೀನುಗಾರಿಕೆಯಲ್ಲಿ ತೊಡಗಿಸಿಕೊಂಡ ಮಹಿಳೆಯರಿಗೆ ಬಹಳ ಅವಶ್ಯಕತೆಯಾದ ಮಹಿಳಾ ಶೌಚಾಲಯನ್ನು ನಿರ್ಮಿಸಿರುವುದು ಎಲ್ಲರಿಗೂ ಮಾದರಿಯಾಗಿದೆ. ಯಾವುದೇ ಒಂದು ಸಾರ್ವಜನಿಕ ಘಟಕಗಳ ನಿರ್ವಹಣೆ, ಅದರ ಸ್ವಚ್ಚತೆಯೊಂದಿಗೆ ಪರಿಸರವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟನಲ್ಲಿ ನಮ್ಮಲ್ಲಿ ನಾಗರಿಕ ಪ್ರಜ್ಞೆ ಬೆಳೆಯ ಬೇಕಾಗಿದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರಕಾರಗಳು ಮೀನುಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಬೇಕು. ಮಳೆಗಾಲಕ್ಕೆ ಮೊದಲು ಮೀನುಗಾರಿಕೆ ಸಚಿವರು ಮಲ್ಪೆ ಬಂದರಿಗೆ ಬಂದು ಬಂದರು ಅಧಿಕಾರಿಗಳು, ಮೀನುಗಾರ ಮುಖಂಡರುಗಳ ಜತೆ ಸಭೆ ನಡೆಸಿ ಸೂಕ್ತ ವ್ಯವಸ್ಥೆಯ ಯೋಜನೆಯನ್ನು ರೂಪಿಸಬೇಕು ಎಂದು ಆಗ್ರಹಿಸಿದರು.
ಶುದ್ಧ ಕುಡಿಯುವ ನೀರಿನ ಘಟಕವನ್ನು ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಸಿನಿಯರ್ ಮೆನೆಜರ್ ಸಿಎಫ್ಆರ್ ನಾಗರಾಜ್ ರಾವ್ ಕೆ. ಉದ್ಘಾಟಿಸಿದರು. ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ವತಿಯಿಂದ ಭಾರತೀಯ ಸೇನೆಗೆ 10 ಲಕ್ಷ ರೂ. ಪರಿಹಾರ ಧನವನ್ನು ಶಾಸಕರ ಮೂಲಕ ಉಡುಪಿ ಜಿಲ್ಲಾಧಿಕಾರಿಗೆ ನೀಡಲಾಯಿತು.
ಪೆಹಲ್ಗಮ್ನಲ್ಲಿ ಉಗ್ರರ ದಾಳಿಗೆ ಮಡಿದವರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಮುಖ್ಯ ಅತಿಥಿಗಳಾಗಿ ಮೀನುಗಾರಿಕೆ ಇಲಾಖೆಯ ನಿರ್ದೇಶಕ ದಿನೇಶ್ ಕುಮಾರ್ ಕಳ್ಳೇರ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ದಯಾನಂದ ಕೆ.ಸುವರ್ಣ, ಕರ್ನಾಟಕ ಕರಾವಳಿ ಮೀನುಗಾರ ಕ್ರಿಯಾ ಸಮಿತಿಯ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ರಾಮಚಂದ್ರ ಕುಂದರ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಪ್ರಕಾಶ್ ಬಂಗೇರ ವಂದಿಸಿದರು. ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.