ಬೀಚ್, ಮೀನುಗಾರಿಕಾ ಜೆಟ್ಟಿಗಳಲ್ಲಿ ಮಾದಕ ವಸ್ತುಗಳ ಸರಬರಾಜಿನ ಮೇಲೆ ನಿಗಾ: ಉಡುಪಿ ಡಿಸಿ ವಿದ್ಯಾಕುಮಾರಿ ಸೂಚನೆ

ಉಡುಪಿ, ಮೇ 14: ಜಿಲ್ಲೆಯ ಬಂದರುಗಳ ಮೀನುಗಾರಿಕಾ ಜೆಟ್ಟಿಗಳಲ್ಲಿ ಹಾಗೂ ಬೀಚ್ಗಳಲ್ಲಿ ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣಿಕೆಯ ಕುರಿತಂತೆ ಕರಾವಳಿ ಪೊಲೀಸರು ವಿಶೇಷ ನಿಗಾ ವಹಿಸು ವಂತೆ ಹಾಗೂ ಆಗಾಗ ಈ ಬಗ್ಗೆ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್ಸಿಓಆರ್ಡಿನ (ನಾರ್ಕೋ ಕೋ-ಆರ್ಡಿನೇಷನ್ ಸೆಂಟರ್) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ಹಾಗೂ ಅವುಗಳ ಬಳಕೆಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವಂತೆ ಅವರು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಇತ್ತೀಚಿನ ದಿನಗಳಲ್ಲಿ ಮಾದಕ ವಸ್ತುಗಳತ್ತ ಯುವ ಸಮುದಾಯ ಹೆಚ್ಚೆಚ್ಚು ಆರ್ಕಷಿತಗೊಳ್ಳುತ್ತಿದೆ. ಇವುಗಳ ಬಳಕೆಯಿಂದ ದೇಹ ಹಾಗೂ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಿ, ಇವುಗಳಿಂದ ದೂರ ಉಳಿಯುವಂತೆ ನೋಡಿಕೊಳ್ಳಲು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದವರು ತಿಳಿಸಿದರು.
ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ವಿದ್ಯಾಸಂಸ್ಥೆಗಳಲ್ಲಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು ಎಂದ ಜಿಲ್ಲಾಧಿಕಾರಿ, ಈಗಾಗಲೇ ಕೆಲವು ವಿದ್ಯಾಸಂಸ್ಥೆಗಳಲ್ಲಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಂಥ ಕಾರ್ಯಕ್ರಮಗಳ ಉಪಯುಕ್ತತೆಯ ಕುರಿತಂತೆ ಸಮಗ್ರ ಮಾಹಿತಿಗಳನ್ನು ಕಲೆ ಹಾಕಬೇಕು ಎಂದೂ ಅವರು ಹೇಳಿದರು.
ತಂಬಾಕು ಉತ್ಪನ್ನಗಳು ಸೇರಿದಂತೆ ಕೆಲ ಮಾದಕ ವಸ್ತುಗಳ ದುಶ್ಚಟಗಳಿಗೆ ಕಾರ್ಮಿಕರು ವ್ಯಸನಿಗಳಾ ಗುತ್ತಿದ್ದಾರೆ.ಇವರಿಗೂ ಸಹ ಅರಿವು ಮೂಡಿಸುವುದು ಸೇರಿದಂತೆ ಮನಪರಿವರ್ತನೆಯ ಕಾರ್ಯಕ್ರಮ ಗಳನ್ನು ಕಾರ್ಮಿಕ ಇಲಾಖೆಯ ಮೂಲಕ ಅವರು ಕಾರ್ಯನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಹಮ್ಮಿಕೊಂಡು ಅವರು ಇಂಥ ದುಶ್ಚಟಗಳಿಂದ ದೂರ ಉಳಿಯುವ ಹಾಗೆ ನೋಡಿಕೊಳ್ಳಬೇಕು ಎಂದು ಡಾ.ವಿದ್ಯಾ ಕುಮಾರಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಂಜಾ ಬೆಳೆ ಬಗ್ಗೆ ನಿಗಾ: ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಗಿಂದಾಗ್ಗೆ ಕೃಷಿ ಜಮೀನುಗಳು ಹಾಗೂ ತೋಟಗಳಿಗೆ ಭೇಟಿ ನೀಡಿ ಅಲ್ಲಿ ರಹಸ್ಯವಾಗಿ ಗಾಂಜಾ ಬೆಳೆಗಳನ್ನು ಬೆಳೆಯು ತ್ತಿದ್ದಾರಾ ಎಂಬ ಬಗ್ಗೆ ಪರಿಶೀಲಿಸಬೇಕು. ಅಂಚೆ ಇಲಾಖೆಯ ಪಾರ್ಸೆಲ್ಗಳಲ್ಲಿ ಮಾದಕ ವಸ್ತುಗಳು ಸರಬರಾಜು ಮಾಡುತ್ತಿರುವ ಬಗ್ಗೆ ಯಾವುದೇ ದೂರು ಬಂದಿಲ್ಲ. ಅದೇ ರೀತಿ ಖಾಸಗಿ ಪಾರ್ಸೆಲ್ ಸರ್ವಿಸ್ ಕಚೇರಿಗಳನ್ನು ಹಾಗೂ ಆನ್ಲೈನ್ ಮಾರುಕಟ್ಟೆಯ ಗೋದಾಮುಗಳ ಪರಿಶೀಲನೆ ನಡೆಸಬೇಕು.ರೈಲ್ವೆ ಇಲಾಖೆಯ ಸಿಬ್ಬಂದಿಗಳು ಸಹ ನಿಲ್ದಾಣದಲ್ಲಿ ಮಾದಕ ವಸ್ತುಗಳ ಸರಬರಾಜು ಬಗ್ಗೆ ನಿಗಾ ಇಡಬೇಕು. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಅವರ ಬಗ್ಗೆ ತನಿಖೆ ಮಾಡಬೇಕು ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಅಸುರಕ್ಷಿತ ಆಹಾರ ಪದಾರ್ಥಗಳ ಕುರಿತಂತೆ 9 ಪ್ರಕರಣಗಳು ಅಪರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿವೆ. ಇವುಗಳಲ್ಲಿ 6 ಪ್ರಕರಣಗಳಲ್ಲಿ ಒಟ್ಟು 80,000 ರೂ. ದಂಡ ವಿಧಿಸ ಲಾಗಿದೆ. ಇನ್ನು 3 ಪ್ರಕರಣಗಳು ವಿಚಾರಣೆಯಲ್ಲಿವೆ. ಜೀವಕ್ಕೆ ಹಾನಿ ಉಂಟು ಮಾಡುವಂತಹ ಆಹಾರ ಪದಾರ್ಥಗಳ ಮಾರಾಟ ಮಾಡಿದ 6 ಪ್ರಕರಣಗಳು ಜೆಎಂಎಫ್ಸಿ ನ್ಯಾಯಾಲಯದಲ್ಲಿ ದಾಖಲಾಗಿದ್ದು, ವಿಚಾರಣೆ ಪ್ರಗತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಮಾರಾಟವಾಗುವ ಸಿದ್ಧ ಆಹಾರಗಳ ಗುಣಮಟ್ಟ ಗಳ ಕುರಿತಂತೆ ನಿರಂತರವಾಗಿ ಸ್ಯಾಂಪಲ್ಗಳನ್ನು ಪಡೆದು ಪ್ರಯೋಗ ಶಾಲೆ ಗಳಿಗೆ ವಿಶ್ಲೇಷಣೆಗೆ ಕಳುಹಿಸಬೇಕು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ ಮಾತನಾಡಿ, ನಿರ್ಬಂಧಿತ ಮತ್ತು ಬರಿಸುವ ಔಷಧಿಯನ್ನು ಜನಸಾಮಾನ್ಯರಿಗೆಲ್ಲ ಮಾರಾಟ ಮಾಡುವ ಹಾಗಿಲ್ಲ. ಈ ಬಗ್ಗೆ ಜಿಲ್ಲೆಯ ಔಷಧ ನಿಯಂತ್ರಣ ಅಧಿಕಾರಿ ಗಳು ಔಷಧಿ ಅಂಗಡಿಗಳ ಬಗ್ಗೆ ಎಚ್ಚರವಹಿಸಬೇಕು ಎಂದರು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಎಸ್ಪಿ ಮನವಿ ಮಾಡಿದರು.
ಸಭೆಯಲ್ಲಿ ಎಎಸ್ಪಿ ಪಿ.ಎ ಹೆಗಡೆ, ಡಿಎಫ್ಓ ಗಣಪತಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.