ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ: ಪೌರಾಯುಕ್ತ

ಉಡುಪಿ, ಮೇ 17: ಮಳೆಗಾಲ ಆರಂಭವಾಗುತ್ತಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಸಾಮಾನ್ಯವಾಗಿ ಬಾಧಿಸುವ ಸಾಂಕ್ರಮಿಕ ರೋಗಗಳ ಬಗ್ಗೆ ಎಚ್ಚರವಹಿಸಿ, ರೋಗಗಳು ಹರಡದಂತೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಅವುಗಳನ್ನು ಆಗಿಂದಾಗ್ಗೆ ಶುದ್ಧಿ ಮಾಡಿ, ನಂತರ ನೀರನ್ನು ಸಂಗ್ರಹಿಸಬೇಕು.
ನೀರು ಸಂಗ್ರಹವಾಗುವ ಓವರ್ ಹೆಡ್ ಟ್ಯಾಂಕ್ಗಳನ್ನು ವಾರಕ್ಕೊಮ್ಮೆ ಪೂರ್ತಿ ನೀರು ಖಾಲಿ ಮಾಡಿ ಸ್ವಚ್ಛಗೊಳಿ ಸಬೇಕು. ಮನೆ ಸುತತಿಮುತತಿ, ಅಂಗಡಿ ಮುಂಗಟ್ಟು, ಮನೆ ಪರಿಸರದಲ್ಲಿ ಸುತ್ತಮುತ್ತ ಇರುವ ಅನುಪಯುಕ್ತ ಟಯರ್, ಎಳನೀರು ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಹಾಗೂ ಸ್ವಯಂ ರಕ್ಷಣಾ ವಿಧಾನಗಳಿಂದ ಸೊಳ್ಳೆ ನಿರೋಧಕಗಳನ್ನು ಹಾಗೂ ಸೊಳ್ಳೆ ಪರದೆಗಳನ್ನು ಉಪಯೋಗಿಸಬೇಕು.
ಸಾರ್ವಜನಿಕರು ಜ್ವರ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಕೂಡಲೇ ಸಮೀಪದ ವೈದ್ಯ ರನ್ನು ಭೇಟಿ ಮಾಡಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.







