ನರ್ಮ್ ಬಸ್ಗಳ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಡಿಸಿಗೆ ಮನವಿ

ಉಡುಪಿ, ಜೂ.23: ಉಡುಪಿ ನಗರದ ನರ್ಮ್ ಬಸ್ಗಳ ಸಮಸ್ಯೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಉಡುಪಿ ನಗರ ಯುವ ಮೋರ್ಚಾ ನಿಯೋಗ ಇಂದು ಜಿಲ್ಲಾಧಿಕಾರಿ ಸ್ವರೂಪ ಅವರಿಗೆ ಮನವಿ ಸಲ್ಲಿಸಿತು.
ಉಡುಪಿ ನಗರ ಭಾಗದ ಸಾರ್ವಜನಿಕರ ಓಡಾಟಕ್ಕೆ ಅನುಕೂಲವಾಗುವಂತೆ ಸುಮಾರು 9 ವರ್ಷಗಳ ಹಿಂದೆ ನರ್ಮ್ ಬಸ್ಸುಗಳು ಚಾಲನೆಗೊಂಡಿದ್ದು, ಈ ಬಸ್ಸುಗಳ ಓಡಾಟದಿಂದ ಸಾವರ್ಜನಿಕರ ಪ್ರಶಂಸೆಗೂ ಪಾತ್ರವಾಗಿತ್ತು. ಆದರೆ ಪ್ರಸ್ತುತ 13 ಬಸ್ಸುಗಳ ಓಡಾಟವನ್ನು ಖಾಯಂ ಆಗಿ ಸ್ಥಗಿತಗೊಳಿಸಲಾಗಿದೆ. ಸ್ಥಗಿತಗೊಳಿಸಲಾಗಿರುವ 13 ರೂಟ್ಗಳ ಬಸ್ಸುಗಳ ಓಡಾಟವನ್ನು ಪುನರಾರಂಭಿಸುವುದು ತೀರಾ ಅಗತ್ಯವಾಗಿದೆ.
10 ವರ್ಷಗಳ ಹಿಂದಿನ ಸಮೀಕ್ಷೆಯಂತೆ 45 ಬಸ್ಸುಗಳ ಮಂಜೂರಾತಿ ಆಗಿದ್ದು, ಹೊಸ ಸಂಪರ್ಕ ರಸ್ತೆಗಳ ಅಭಿವೃದ್ಧಿ ಮತ್ತು ಪ್ರಸ್ತುತ ಪ್ರಯಾಣಿಕರ ಓಡಾಟದ ಸಂಖ್ಯೆಗೆ ಅನುಗುಣವಾಗಿ ಈ ಬಸ್ಸುಗಳ ಸಂಖ್ಯೆ ಯನ್ನು ಕನಿಷ್ಠ 80ಕ್ಕೆ ಹೆಚ್ಚಿಸಬೇಕೆಂದು ನಿಯೋಗ ಮನವಿಯಲ್ಲಿ ಆಗ್ರಹಿಸಿದೆ.
ನಗರದಲ್ಲಿ ಕಾರ್ಯಾನಿರ್ವಹಿಸುತ್ತಿರುವ 32 ನರ್ಮ್ ಬಸ್ಸುಗಳು ತೀರಾ ಹಳೆಯದಾಗಿದ್ದು, ಮಾರ್ಗ ಮಧ್ಯೆ ಕೆಟ್ಟು ನಿಲ್ಲುವ ಘಟನಗಳೇ ಸಂಭವಿಸುತ್ತಿದೆ. ಬಸ್ಸುಗಳಿಗೆ ಚಾಲಕರು ಮತ್ತು ನಿರ್ವಾಹಕರ ಕೊರತೆ ಇದ್ದು ಹುದ್ದೆ ಭರ್ತಿ ಮಾಡಬೇಕಾದ ಅನಿವಾರ್ಯತೆ ಇದೆ. ಸಮರ್ಪಕವಾದ ಬಸ್ ಸಂಚಾರ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು, ಸಾರ್ವಜನಿಕರು ಮತ್ತು ಕಾರ್ಮಿಕರು ಕಾಲ್ನಡಿಗೆಯಲ್ಲಿ ಓಡಾಡುವ ಪರಿಸ್ಥಿತಿ ಎದುರಿಸುತ್ತಿ ದ್ದಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಎಲ್ಲಾ ಸಮಸ್ಯೆಗಳನ್ನು ಅತೀ ಶೀಘ್ರದಲ್ಲಿ ಪರಿಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷ ಶ್ರೀವತ್ಸ, ಉಪಾಧ್ಯಕ್ಷರಾದ ಸಂದರ್ಶ ಆಚಾರ್ಯ, ಪ್ರಜ್ವಲ್ ಪೂಜಾರಿ, ಧನುಷ್ ಬಿಕೆ, ಪ್ರಧಾನ ಕಾರ್ಯದರ್ಶಿಗಳಾದ ನಿತಿನ್ ಪೈ ಮಣಿಪಾಲ, ಶಿವಪ್ರಸಾದ್ ಕಾರ್ಯದರ್ಶಿಗಳಾದ ಧನುಷ್ ಕಡಿಯಾಳಿ, ಹರ್ಷರಾಜ್, ಆಕಾಂಶ್, ಭೂಷಣ್, ದೀಕ್ಷಿತ್ ಶೆಟ್ಟಿ, ರಮಿತ್ ಶೆಟ್ಟಿ, ತರುಣ್ ಉಪಸ್ಥಿತರಿದ್ದರು.







