ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

ಕುಂದಾಪುರ: ಪತ್ರಿಕಾ ಮಾಧ್ಯಮಗಳು ಸಾಕಷ್ಟು ಬದಲಾವಣೆ ಮೂಲಕ ಪ್ರಗತಿ ಸಾಧಿಸಿದೆ. ಹಿಂದೆ ಪತ್ರಕರ್ತನ ಮುಂದೆ ಸಾಕಷ್ಟು ಸವಾಲುಗಳಿದ್ದವು. ಇವತ್ತು ಆಧುನಿಕ ಜಗತ್ತು ಅವಕಾಶ, ಸೌಲಭ್ಯಗಳನ್ನು ಒದಗಿಸಿದೆ. ಪತ್ರಿಕೋದ್ಯಮ ಇವತ್ತು ವಿಫುಲವಾಗಿ ಬೆಳೆದಿದೆ. ಪತ್ರಿಕೋದ್ಯಮ ವ್ಯಾಸಂಗ ಮಾಡಿದರೆ ಬೇರೆ ಬೇರೆ ಅವಕಾಶಗಳು ಸೃಷ್ಟಿಯಾಗುತ್ತಿದ್ದು ಪತ್ರಿಕೋದ್ಯಮವನ್ನು ಆರಿಸಿಕೊಂಡರೆ ಉತ್ತಮ ಭವಿಷ್ಯ ವಿದೆ ಎಂದು ಹಿರಿಯ ಪತ್ರಕರ್ತ ಹಾಗೂ ವೈದ್ಯ ಡಾ.ಸುಧಾಕರ ನಂಬಿಯಾರ್ ಹೇಳಿದ್ದಾರೆ.
ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು, ಕಾರ್ಯನಿರತ ಪತ್ರಕರ್ತರ ಸಂಘ, ಕುಂದಾಪುರ ಇವರ ಸಹಯೋಗದೊಂದಿಗೆ ಕಾಲೇಜಿನಲ್ಲಿ ಮಂಗಳವಾರ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಪರಿವರ್ತಿತ ಪತ್ರಿಕೋದ್ಯಮದ ಕುರಿತು ಅವರು ಉಪನ್ಯಾಸ ನೀಡಿದರು.
ಭಂಡಾಕಾರ್ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷ ಕೆ.ಶಾಂತರಾಮ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಸುಧಾಕರ ನಂಬಿಯಾರ್ ಅವರನ್ನು ಸನ್ಮಾನಿಸಲಾಯಿತು. ರೆಡಿಯೋ ಕುಂದಾಪ್ರದಲ್ಲಿ ನಿರ್ವಹಣೆ, ಪ್ರಸಾರ ಹಾಗೂ ತಾಂತ್ರಿಕವಾಗಿ ಸಹಕರಿಸುತ್ತಿರುವ ನಿರಂಜನ್ ಎಚ್.ಬಿ. ಅವರಿಗೆ ಪ್ರಮಾಣಪತ್ರ ನೀಡಲಾಯಿತು.
ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಪ್ರೊ.ಸತ್ಯನಾರಾಯಣ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ.ಶುಭಾಕರಾಚಾರಿ ಸ್ವಾಗತಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಸುಮಲತಾ ನಾಯ್ಕ್ ಸನ್ಮಾನಿತರನ್ನು ಪರಿಚಯಿಸಿದರು. ಕುಂದಾಪುರ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಗಣೇಶ ಬೀಜಾಡಿ ವಂದಿಸಿದರು. ರೇಡಿಯೋ ಕುಂದಾಪ್ರದ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರ್ವಹಿಸಿದರು.







