ಕಲ್ಯಾಣ ಮಂಡಳಿ ನಿಧಿ ದುರ್ಬಳಕೆ ವಿರೋಧಿಸಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

ಕುಂದಾಪುರ, ಜು.7: ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ನಡೆದ ರಾಜ್ಯ ಸರಕಾರ ಸಚಿವ ಸಂಪುಟ ಸಭೆಯಲ್ಲಿ ಕಾರ್ಮಿಕರ ಮಕ್ಕಳಿಗೆ 1125 ಕೋಟಿ ರೂ. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ನಿಧಿ ಬಳಸಿ ವಸತಿ ಶಾಲೆಗಳನ್ನು ಆರಂಭಿಸಲು ನಿರ್ಧರಿಸಿರುವ ಕ್ರಮವನ್ನು ವಿರೋಧಿಸಿ ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಇಂದು ಕಟ್ಟಡ ಕಾರ್ಮಿಕರು ಕುಂದಾಪುರ ವಂಡ್ಸೆ ಪೇಟೆಯಲ್ಲಿ ಪ್ರತಿಭಟನೆ ನಡೆಸಿದರು.
ಕುಂದಾಪುರ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಕಲ್ಲಾಗರ ಮಾತನಾಡಿ, ಕರ್ನಾಟಕ ಸರಕಾರದ ವಿವಿಧ ಇಲಾಖೆಗಳು ನಡೆಸುತ್ತಿರುವ ಶಾಲೆಗಳು ಹಾಗೂ ವಸತಿ ನಿಲಯಗಳಲ್ಲಿ ಕಟ್ಟಡ ಮತ್ತು ಇತರೆ ಅಸಂಘಟಿತ ವಲಯದ ಮಕ್ಕಳು ಅತ್ಯಂತ ಕಡಿಮೆ ಶುಲ್ಕ ಪಾವತಿಸುತ್ತಿದ್ದಾರೆ. ಅವರುಗಳಿಗೆ ಮಧ್ಯಾಹ್ನದ ಬಿಸಿಯೂಟವೂ ದೊರೆಯುತ್ತಿದೆ. ಶೂ ಹಾಗೂ ಸಮವಸ್ತ್ರಗಳು, ಉಚಿತ ಪಠ್ಯಪುಸ್ತಕಗಳು ನೀಡುತ್ತಿರುವಾಗ ಕಾರ್ಮಿಕ ಮಂತ್ರಿಗಳು ಕಟ್ಟಡ ಕಾರ್ಮಿಕರ ಪಿಂಚಣಿ, ಮಕ್ಕಳ ಶೈಕ್ಷಣಿಕ ಧನಸಹಾಯ, ಅಪಘಾತ ಪರಿಹಾರ ಮುಂತಾದ ಸಾಮಾಜಿಕ ಭದ್ರತೆಗಾಗಿ ಇರುವ ಹಣವನ್ನು ವಸತಿ ನಿಲಯದ ಕಟ್ಟಡಗಳಿಗೆ ನೀಡಲು ಮುಂದಾಗಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಮಂಡಳಿಯಲ್ಲಿ ಹಣ ಇದ್ದರೂ ಕಳೆದ 2-3 ವರ್ಷಗಳಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಧನಸಹಾಯ ಮಂಜೂರು ಮಾಡಲು ಸಿದ್ಧರಿಲ್ಲದ ಇವರಿಗೆ ವಸತಿ ಶಾಲೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಲು ಆಸಕ್ತಿ ವಹಿಸುತ್ತಿರುವುದು ಸಂಶಯ ಮೂಡಿಸುತ್ತಿದೆ ಎಂದು ಅವರು ದೂರಿದರು.
ಜು.9ರಂದು ಕಟ್ಟಡ ಕಾರ್ಮಿಕರ ಶೈಕ್ಷಣಿಕ ಧನಸಹಾಯ, ಮದುವೆ ಧನಸಹಾಯ ಬಿಡುಗಡೆಗೆ ಹಾಗೂ ಆಧಾರ್ ಕಾರ್ಡ್ ನೆಪವೊಡ್ಡಿ ವಯೋವೃದ್ಧರ ಪಿಂಚಣಿ ನಿರಾಕರಿಸಿದರ ವಿರುದ್ಧ ಕಟ್ಟಡ ಕಾರ್ಮಿಕರು ಜಿಲ್ಲೆಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಪ್ರಮುಖರಾದ ಶಂಕರ ಆಚಾರ್ಯ, ಭಾಸ್ಕರ, ಪ್ರಭಾಕರ ಗಾಣಿಗ, ನೇತ್ರಾವತಿ, ಸುರೇಶ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.







