ಉಡುಪಿ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆಗೆ ಪೂರ್ವಭಾವಿ ಸಭೆ

ಉಡುಪಿ: ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆಯನ್ನು ಅಜ್ಜರಕಾಡಿನ ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಹಬ್ಬದ ರೀತಿಯಲ್ಲಿ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲು ಅಗತ್ಯರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಸ್ವಾತ್ರಂತ್ರ್ಯೋತ್ಸವ ಆಚರಣೆ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ನಂತರ ಸ್ವಾತಂತ್ರ್ಯೋತ್ಸವ ಸಂದೇಶ ನೀಡಲಿದ್ದಾರೆ ಎಂದರು.
ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಂದ ವೈವಿಧ್ಯ ಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ ಎಂದ ಅವರು, ಪೊಲೀಸ್, ನಕ್ಸಲ್ ನಿಗ್ರಹಪಡೆ, ಕರಾವಳಿ ಕಾವಲು ಪೊಲೀಸ್, ಅಗ್ನಿಶಾಮಕ, ಅರಣ್ಯ, ಗೃಹ ರಕ್ಷಕದಳ, ಎನ್ಸಿಸಿ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಕವಾಯತು ನಡೆಯಲಿದ್ದು, ತರಬೇತಿಗೆ ತಯಾರಿ ಮಾಡಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಸಹ ಅಂದು ಸಚಿವರು ವಿತರಿಸಲಿದ್ದಾರೆ ಎಂದ ಡಿಸಿ, ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳಿಗೆ, ಗಣ್ಯವ್ಯಕ್ತಿಗಳಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಕುಟಂಬದವರಿಗೆ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದರು.
ಕಾರ್ಯಕ್ರಮದ ಪ್ರದೇಶದಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದ ಅವರು, ಕ್ರೀಡಾಂಗಣದಲ್ಲಿ ತುರ್ತು ಆರೋಗ್ಯ ಸೇವೆಗೆ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕಳೆದ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದವರು, ಅಂಗಾಂಗ ದಾನಿಗಳು ಸೇರಿದಂತೆ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಸಾಧಕರನ್ನು ಗುರುತಿಸಿ, ಜಿಲ್ಲಾಡಳಿತದ ವತಿಯಿಂದ ಅವರನ್ನು ಸನ್ಮಾನಿಸಲಾಗುವುದು ಎಂದರು.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದ ಅವರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ಕುಮಾರ್ ಶೆಟ್ಟಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







