ಉಡುಪಿ: ಪೋಷಕ-ಶಿಕ್ಷಕರ ಮಹಾಸಭೆ, ಮಕ್ಕಳ ದಿನಾಚರಣೆ

ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ರಾಜೀವನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಕರ - ಶಿಕ್ಷಕರ ಮಹಾಸಭೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಮಣಿಪಾಲದ ರಾಜೀವನಗರ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಶಾಲಾ ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪೇಂದ್ರ ನಾಯಕ್ ಈ ಸಂದರ್ಭದಲ್ಲಿ ಮಾತನಾಡಿ, ಸರಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಮಹತ್ವದ್ದಾಗಿದೆ. ಎಲ್ಲಾ ಪೋಷಕರು ಶಾಲೆಯ ಸರ್ವಾಂಗೀಣ ಪ್ರಗತಿಗೆ ಕೈಜೋಡಿಸುವುದರೊಂದಿಗೆ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವಂತೆ ಕರೆ ನೀಡಿದರು.
ಸರಕಾರದ ನಿರ್ದೇಶನದಂತೆ ದಾಖಲಾತಿ ಆಂದೋಲನ, ವಿದ್ಯಾರ್ಥಿಗಳ ಕಲಿಕೆ ಪ್ರಗತಿ, ಮಕ್ಕಳ ಸುರಕ್ಷತೆ ಮತ್ತು ಸರಕಾರದ ಪ್ರೋತ್ಸಾಹದಾಯಕ ಯೋಜನೆಗಳ ಬಗ್ಗೆ ಶಾಲಾ ಮುಖ್ಯ ಶಿಕ್ಷಕರು ಪೋಷಕರಿಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆ ಬೋಧಿಸಲಾಯಿತು. ಮಕ್ಕಳ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಿದ ವಿವಿಧ ಸ್ಪರ್ಧಾ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಸಭೆಯಲ್ಲಿ 80 ಬಡಗಬೆಟ್ಟು ಗ್ರಾಪಂ ಸದಸ್ಯೆ ಪ್ಲೋಸಿ ಫೆನಾರ್ಂಡಿಸ್, ಪ್ರೌಢಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಸುಮಿತ್ರ, ಮಾಜಿ ಅಧ್ಯಕ್ಷ ರವಿ, ತಾಲೂಕು ಕಾರ್ಯದರ್ಶಿ ಮಮತಾ ಹಾಗೂ ಇತರರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರು ಸ್ವಾಗತಿಸಿ, ಕನ್ನಡ ಶಿಕ್ಷಕ ಸಂಜೀವ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕಿ ವಿನೋದ ವಂದಿಸಿದರು.







