ಕರ್ನಾಟಕ ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅವಕಾಶ
ಉಡುಪಿ, ಅ.3: ಭಾರತ ಚುನಾವಣಾ ಆಯೋಗ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯನ್ನಾಗಿ ಹಾಗೂ ಈ ಚುನಾವಣಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಡುಪಿ,ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ (ಹೊನ್ನಾಳಿ, ನ್ಯಾಮತಿ ಮತ್ತು ಚನ್ನಗಿರಿ ತಾಲೂಕು ಗಳು), ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು, ಆಯಾ ಉಪವಿಭಾಗಕ್ಕೆ ಸಂಬಂಧಪಟ್ಟ ಎಲ್ಲಾ ಸಹಾಯಕ ಆಯುಕ್ತರು, ವಿಭಾಗದ ಎಲ್ಲಾ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರನ್ನು ಸಹಾಯಕ ಮತದಾರರ ನೋಂದಣಾಧಿಕಾರಿಯನ್ನಾಗಿ ನೇಮಿಸಿದೆ.
ಅರ್ಹತಾ ದಿನಾಂಕವಾಗಿ 2023ರ ನವೆಂಬರ್ 1ಕ್ಕೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.
ಭಾರತ ಚುನಾವಣಾ ಆಯೋಗ, ಕರ್ನಾಟಕ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಮತಕ್ಷೇತ್ರದ ಮತದಾರರ ಪಟ್ಟಿ ಯನ್ನು ನೂತನವಾಗಿ ಸಿದ್ದಪಡಿಸುತ್ತಿದ್ದು, ಈ ಹಿಂದಿನ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರು ಸಹ ನಮೂನೆ 18ರಲ್ಲಿ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರು ನಮೂನೆ 19ರಲ್ಲಿ ಹೊಸದಾಗಿ ಅರ್ಜಿ ಸಲ್ಲಿಸಬೇಕು.
ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲು ಈ ಕೆಳಗಿನಂತೆ ವೇಳಾಪಟ್ಟಿ ಯನ್ನು ನಿಗದಿಪಡಿಸಲಾಗಿದೆ. ಪದವೀಧರರ ಕ್ಷೇತ್ರದ ಮತದಾರರ ಅರ್ಜಿ ನಮೂನೆ 18 ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ಅರ್ಜಿ ನಮೂನೆ 19ರಲ್ಲಿ ಅರ್ಜಿಯನ್ನು ಸ್ವೀಕರಿಸಲು ನವೆಂಬರ್ 6 ಕೊನೆಯ ದಿನ, ಕರಡು ಮತದಾರರ ಪಟ್ಟಿಯನ್ನು ನವೆಂಬರ್ 23ರಂದು ಪ್ರಕಟಿಸಲಿದ್ದು, ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್ 23 ರಿಂದ ಡಿಸೆಂಬರ್ 9ರೊಳಗೆ ಸಲ್ಲಿಸಬಹುದು. ಅಂತಿಮ ಮತದಾರರ ಪಟ್ಟಿಯನ್ನು ಡಿಸೆಂಬರ್ 30ರಂದು ಪ್ರಕಟಿಸಲಾಗುವುದು.
ಪದವೀಧರರ ಕ್ಷೇತ್ರದ ಮತದಾರರ ಮಾರ್ಗಸೂಚಿಗಳು: ಅರ್ಹ ಪದವೀಧರರು ಮೂಲ ಪ್ರಮಾಣ ಪತ್ರ ಮತ್ತು ಅದರ ಪ್ರತಿಯನ್ನು ಸ್ವಯಂ ದೃಢೀಕರಿಸಿಕೊಂಡು, ಗೊತ್ತುಪಡಿಸಿದ ಅಧಿಕಾರಿಯ ಮುಂದೆ ಖುದ್ದು ಹಾಜರಾಗಿ ಅವರಿಂದ ದೃಢೀಕ ರಿಸಿಕೊಂಡು ಅವರಲ್ಲಿಯೇ ಅರ್ಜಿಯನ್ನು ಕಡ್ಡಾಯವಾಗಿ ನೀಡಬೇಕು. ಯಾವುದೇ ವ್ಯಕ್ತಿ ಅಂಚೆ ಮೂಲಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಿದ್ದಲ್ಲಿ ಅಂತಹ ಅರ್ಜಿದಾರರಿಗೆ ಗೊತ್ತು ಪಡಿಸಿದ ಅಧಿಕಾರಿಯು ವಿಚಾರಣೆಗೆ ಹಾಜರಾ ಗಲು ನೋಟೀಸ್ ನೀಡಲಿದ್ದು, ವಿಚಾರಣೆಗೆ ಹಾಜರಾಗದೇ ಅಥವಾ ದಾಖಲೆಗಳನ್ನು ಹಾಜರುಪಡಿಸದಿದ್ದಲ್ಲಿ ಅರ್ಜಿಗಳು ತಿರಸ್ಕೃತಗೊಳ್ಳುತ್ತವೆ.
ಕರ್ನಾಟಕ ನೈರುತ್ಯ ಪದವೀಧರರ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮತ್ತು ಸಂಬಂಧಪಟ್ಟ ವಿಧಾನಸಭಾ ಮತಕ್ಷೇತ್ರದ ಸಹಾಯಕ ಮತದಾರರ ಉಪನೋಂದಣಾಧಿಕಾರಿಗಳ ಕಾರ್ಯಾಲಯದಲ್ಲಿ (ತಹಶೀಲ್ದಾರ್ ಕಚೇರಿ) ನಿಗದಿಪಡಿಸಿದ ಕಾಲಮಿತಿಯೊಳಗೆ ಸಲ್ಲಿಸಬೇಕು.
ಕರ್ನಾಟಕ ನೈರುತ್ಯ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಲು ಮಾರ್ಗಸೂಚಿಗಳು: ಭಾರತದ ಪ್ರಜೆಯಾಗಿರುವ ಮತ್ತು ಈ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಸಾಮಾನ್ಯ ನಿವಾಸಿಯಾಗಿರುವ ಮತ್ತು 2023ರ ನವೆಂಬರ್ 1ಕ್ಕೆ ಮೊದಲು ಅರು ವರ್ಷಗಳ ಅವಧಿಯಲ್ಲಿ ಕನಿಷ್ಠ ಮೂರು ವಷರ್ ಪ್ರೌಢಶಾಲೆಗಿಂತ ಕಡಿಮೆಯಲ್ಲದ ನಿರ್ದಿಷ್ಟಪಡಿಸಿದಂತಹ ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಬೋಧನಾ ವೃತ್ತಿಯಲ್ಲಿ ನಿರತವಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.
ಯಾವುದೇ ವ್ಯಕ್ತಿಯು ನಮೂನೆ-19 ರಲ್ಲಿ ಅರ್ಜಿಯನ್ನು ಸಲ್ಲಿಸಿ, ಶಿಕ್ಷಕರ ಕ್ಷೇತ್ರದಲ್ಲಿ ಮತದಾರನಾಗಿ ನೋಂದಾಯಿಸಿ ಕೊಳ್ಳಲು ತನ್ನ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರಿಂದ ತಾನು ಹಿಂದಿನ ಆರು ವಷರ್ಗಳಲ್ಲಿ ಒಟ್ಟು ಮೂರು ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿರುವ ಕುರಿತು ಅರ್ಜಿಯೊಂದಿಗೆ ಪ್ರಮಾಣ ಪತ್ರವನ್ನು ಲಗತ್ತಿಸಿ ಸಲ್ಲಿಸಬೇಕು.
ಅರ್ಜಿಯನ್ನು ಸಲ್ಲಿಸುವ ದಿನಾಂಕದಂದು ಯಾವುದೇ ವ್ಯಕ್ತಿಯು ಭೋದನಾ ವೃತ್ತಿಯಲ್ಲಿ ನಿರತನಾಗಿರದಿದ್ದಲ್ಲಿ, ಪ್ರಮಾಣ ಪತ್ರವನ್ನು ಅಂತಹ ವ್ಯಕ್ತಿಯು ಕೊನೆಯದಾಗಿ ಸೇವೆ ಸಲ್ಲಿಸಿದ ಸಂಸ್ಥೆಯ ಮುಖ್ಯಸ್ಥರಿಂದ ಸಹಿ ಮಾಡಿಸಿರಬೇಕು. ಖುದ್ದಾಗಿ ಅಥವಾ ಅಂಚೆ ಮುಖಾಂತರ ಒಟ್ಟಾಗಿ ಸಲ್ಲಿಸಿದ ಅರ್ಜಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗಾಗಿ ಪರಿಗಣಿಸುವುದಿಲ್ಲ. ಆದರೆ, ಸಂಸ್ಥೆಯ ಮುಖ್ಯಸ್ಥರು ಅವರ ಸಿಬ್ಬಂದಿಯ ಎಲ್ಲಾ ಅರ್ಜಿಗಳನ್ನು ಒಟ್ಟಾಗಿ ಕಳುಹಿಸಬಹುದು. ಒಂದೇ ಕುಟುಂಬದ ಇತರೆ ಸದಸ್ಯರ ನಮೂನೆ-19 ರ ಅರ್ಜಿಗಳನ್ನು ಕುಟುಂಬದ ಒಬ್ಬ ಸದಸ್ಯರು ಸಲ್ಲಿಸಬಹುದು ಹಾಗೂ ಪ್ರತಿ ಸದಸ್ಯನಿಗೆ ಸಂಬಂಧಿಸಿದಂತೆ ಮೂಲ ಪ್ರಮಾಣ ಪತ್ರಗಳನ್ನು ಒದಗಿಸಬೇಕು.
ನಮೂನೆ-19ರಲ್ಲಿ ಅರ್ಜಿಗಳನ್ನು ಸಹಾಯಕ ಮತದಾರರ ನೋಂದಣಾಧಿಕಾರಿ/ ನಿಯೋಜಿತ ಅಧಿಕಾರಿಗಳ ಕಛೇರಿಯಿಂದ ಪಡೆಯಬಹುದಾಗಿದ್ದು, ಕೈಬರಹದ, ಬೆರಳಚ್ಚು ಮಾಡಿದ ಅಥವಾ ಖಾಸಗಿ ಯಾಗಿ ಮುದ್ರಿಸಿದ ನಮೂನೆಗಳನ್ನು ಕೂಡ ಅಂಗೀಕರಿಸಲಾಗುವುದು. ನಮೂನೆ -19ರ ಅರ್ಜಿಗಳನ್ನು ಒಟ್ಟಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಹಾಗೂ ಶಿಕ್ಷಕರ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







