ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ರಕ್ಷಣಾ ಕಾಯ್ದೆಯ ಸ್ಪಷ್ಟ ಅರಿವು ಅಗತ್ಯ: ನ್ಯಾ.ಮನು ಪಟೇಲ್

ಉಡುಪಿ, ಫೆ.6: ಮಕ್ಕಳ ಹಕ್ಕುಗಳ ರಕ್ಷಣಾ ಕಾನೂನುಗಳಿಗೆ ಸಂಬಂಧ ಪಟ್ಟಂತೆ ಮೊದಲನೇ ಹಂತದಲ್ಲಿ ತಳಮಟ್ಟದ ಕಾರ್ಯಕರ್ತರು ಮಕ್ಕಳ ಜೊತೆ ವ್ಯವಹರಿಸಿದರೆ, ಎರಡನೇ ಹಂತದಲ್ಲಿ ಪೊಲೀಸರು ಮಕ್ಕಳ ಜೊತೆ ವ್ಯವಹರಿಸ ಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಪೊಲೀಸರಿಗೆ ಬಾಲನ್ಯಾಯ ಕಾಯ್ದೆಯ ಸ್ಪಷ್ಟ ಅರಿವು ಇರಬೇಕಾಗುತ್ತದೆ. ಮಕ್ಕಳ ಜೊತೆ ಸಂವೇದನೆಯಿಂದ ವ್ಯವಹರಿಸಬೇಕಾಗುವುದರಿಂದ ಪೊಲೀಸರಿಗೆ ಇಂಥ ತರಬೇತಿ ಕಾರ್ಯಾಗಾರ ಗಳನ್ನು ಆಯೋಜಿಸಲಾಗುತ್ತಿದೆ ಎಂದು ಉಡುಪಿಯ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಕಾಯ್ದೆಗಳ ಕುರಿತು ಠಾಣೆಯ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿ ಮತ್ತು ಸಹಾಯಕ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಅಪಾಯದಲ್ಲಿ ಸಿಲುಕಿದ ಮಕ್ಕಳನ್ನು ರಕ್ಷಣೆ ಮಾಡುವಾಗ ಅಥವಾ ಅಪರಾಧಿ ಚಟುವಟಿಕೆಗಳಲ್ಲಿ ನಿರತರಾದ ಮಕ್ಕಳನ್ನು ಕಾನೂನಿನ ಸುಪರ್ದಿಗೆ ತೆಗೆದುಕೊಳ್ಳುವ ಸಮಯದಲ್ಲಿ ಬಾಲನ್ಯಾಯ ಕಾಯ್ದೆಯ ನಿಯಮಗಳನ್ನು ಸರಿಯಾಗಿ ಪಾಲಿಸುವ ಮೂಲಕ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಾ ಗುತ್ತದೆ ಎಂದವರು ಹೇಳಿದರು.
ಸಮವಸ್ತ್ರದಲ್ಲಿರುವ ಪೊಲೀಸರನ್ನು ಕಂಡು ಮಕ್ಕಳು ಬೆದರುವ ಸಾಧ್ಯತೆಗಳು ಹೆಚ್ಚಿರುತ್ತವೆ. ಮಕ್ಕಳಿಗೆ ಸಂಬಂಧಪಟ್ಟ ಪ್ರಕರಣಗಳನ್ನು ದೊಡ್ಡವರ ಪ್ರಕರಣ ಗಳಂತೆ ನೋಡಲಾಗುವುದಿಲ್ಲ. ಮಕ್ಕಳ ಹಕ್ಕುಗಳ ರಕ್ಷಣೆಯ ಪ್ರಕ್ರಿಯೆಗಳನ್ನು ನಿಭಾಯಿಸಲು ತರಬೇತಿ ಹೊಂದಿದ ಸಿಬ್ಬಂದಿಗಳನ್ನು ತಯಾರಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿವೆ. ಕಾರ್ಯಾಗಾರದಲ್ಲಿ ಪಡೆದ ಜ್ಞಾನವನ್ನು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದವರು ನುಡಿದರು.
ಬಾಲನ್ಯಾಯ ಮಂಡಳಿಯ ಅಧ್ಯಕ್ಷ, ಎಸಿಜೆಎಂ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸಂತೋಷ್ ಶ್ರೀವತ್ಸ ಮಾತನಾಡಿ, ನ್ಯಾಯಾಲಯ ಮತ್ತು ಪೊಲೀಸ್ ಇಲಾಖೆಗಳು ಕಾನೂನಿನ ರಕ್ಷಕರು. ಇಲಾಖೆಯಲ್ಲಿ ಮಕ್ಕಳ ಜೊತೆ ನೇರವಾಗಿ ವ್ಯವಹರಿಸುವ ಸಿಬ್ಬಂದಿಗಳಿಗೆ ಬಾಲ ನ್ಯಾಯ ಕಾನೂನಿನ ಮಾಹಿತಿ ಇರುವುದು ಅತಿ ಮುಖ್ಯ. ಮಕ್ಕಳಿಗೆ ಸಂಬಂಧಿಸಿದ ದೂರುಗಳು ಬಂದಾಗ ಅದನ್ನು ನಿರ್ಲಕ್ಷ್ಯ ಮಾಡದೆ ತ್ವರಿತವಾಗಿ ಸ್ಪಂದಿಸಿದಾಗ ಹಲವಾರು ಮುಗ್ದ ಜೀವಗಳನ್ನು ಸಮಯೋಚಿತವಾಗಿ ರಕ್ಷಿಸಬಹುದು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್ ಮಾತನಾಡಿ. ಮಕ್ಕಳ ಹಕ್ಕುಗಳ ರಕ್ಷಣೆ ಸಂದರ್ಭದಲ್ಲಿ ಮಾಹಿತಿ ಕೊರತೆಯಿಂದ ಸಣ್ಣಪುಟ್ಟ ತಪ್ಪುಗಳಾಗುತ್ತವೆ. ಕಾರ್ಯಾಗಾರಗಳಿಂದ ಕಾನೂನಿನ ಬಗ್ಗೆ ತಿಳುವಳಿಕೆ ಹೆಚ್ಚಾಗುತ್ತದೆ ಹಾಗೂ ಮುಂದಿನ ದಿನಗಳಲ್ಲಿ ಸಮರ್ಪಕ ಸೇವೆ ನೀಡಲು ಅನುಕೂಲವಾಗುತ್ತದೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯುನಿಸೆಫ್ ಪ್ರಾದೇಶಿಕ ಸಂಯೋಜಕ ಡಾ. ಕೊಣಿಲ ರಾಘವೇಂದ್ರ ಭಟ್ ಮಕ್ಕಳ ಕಲ್ಯಾಣ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಜೂಹಿ ದಾಮೋದರ್ ಉಪಸ್ಥಿತರಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ, ಮಹೇಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.






