ಉಡುಪಿ ಜಿಲ್ಲೆಯ ಮೂವರು ರೌಡಿ ಶೀಟರ್ಗಳ ಗಡಿಪಾರು

ಉಡುಪಿ, ಜೂ.26: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ಮೂವರು ರೌಡಿ ಶೀಟರ್ಗಳನ್ನು ಗಡಿಪಾರು ಮಾಡಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಹರಿರಾಂ ಶಂಕರ್ ಆದೇಶ ಹೊರಡಿಸಿದ್ದಾರೆ.
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಾನೀಶ್ ಮದನಿ (23) ಮತ್ತು ಕಾವ್ರಾಡಿ ಗ್ರಾಮ ಕಂಡ್ಲೂರು ನಿವಾಸಿ ಕರಾಣಿ ಮುಸೀನ್(44) ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಾದೂರು ಗ್ರಾಮದ ಚಂದ್ರನಗರದ ಜನತಾ ಕಾಲೋನಿಯ ಇಲಿಯಾಸ್(36) ಎಂಬವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿ ಜೂ.24ರಂದು ಈ ಆದೇಶ ಹೊರಡಿಸಿದ್ದಾರೆ.
ದಾನೀಶ್ ಮದನಿ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿದ್ದು, ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಕರಾಣಿ ಮುಸೀನ್ ವಿರುದ್ಧ 7 ಪ್ರಕರಣಗಳು ದಾಖಲಾಗಿದ್ದು ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ. ಇಲಿಯಾಸ್ ವಿರುದ್ಧ 15 ಪ್ರಕರಣಗಳು ದಾಖಲಾಗಿದ್ದು ಶಿರ್ವ ಠಾಣೆಯಲ್ಲಿ ರೌಡಿ ಶೀಟರ್ ತೆರೆಯಲಾಗಿದೆ.
ಗಡಿಪಾರು ಕ್ರಮಕ್ಕೆ ಒಳಗಾದ ಈ ಮೂವರು ಆರೋಪಿಗಳು, ಕೊಲೆ, ಕೊಲೆಯತ್ನ, ಪೊಲೀಸ್ ಠಾಣೆಗೆ ಕಲ್ಲೆಸೆತ, ಕಳವು, ಜಾನುವಾರು ಕಳವು, ಜಾನುವಾರು ಹತ್ಯೆ, ರೌಡಿಸಂ ಪ್ರವೃತ್ತಿಯ ಹಲ್ಲೆ ಮುಂತಾದ ಪ್ರಕರಣಗಳ ಸಹಿತ ಒಟ್ಟು 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದಾನೀಶ್ ಮದನಿನನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ, ಕರಾಣಿ ಮುಸೀನ್ ನನ್ನು ಬೀದರ್ ಜಿಲ್ಲೆಯ ಗಾಂಧಿ ಗಂಜ ಪೊಲೀಸ್ ಠಾಣಾ ವ್ಯಾಪ್ತಿಗೆ ಮತ್ತು ಇಲಿಯಾಸ್ನನ್ನು ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
‘ಕಳೆದ ಒಂದು ವರ್ಷದ ಅವಧಿಯಲ್ಲಿ ಅಕ್ರಮ ಚಟುವಟಿಕೆ ಹಾಗೂ ರೌಡಿಸಂನ್ನು ಮಟ್ಟಹಾಕುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3 ಆರೋಪಿಗಳ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆ ಹಾಗೂ 4 ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಕಾರಾಗೃಹದಲ್ಲಿ ಇರಿಸಲಾಗಿದೆ. ಅಲ್ಲದೇ 14 ಜನರ ವಿರುದ್ಧ ಗಡಿಪಾರು ಕ್ರಮ ಕೈಗೊಳ್ಳಲಾಗಿದೆ’
-ಹರಿರಾಂ ಶಂಕರ್, ಉಡುಪಿ ಎಸ್ಪಿ






