ಟೋಲ್ ಸಂಗ್ರಹವೊಂದೇ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರ ಗುರಿಯಲ್ಲ; ವ್ಯವಸ್ಥೆ ಕಲ್ಪಿಸಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರಿಗೆ ಟೋಲ್ ಸಂಗ್ರಹ ಮಾಡುವುದೊಂದೆ ಗುರಿಯಲ್ಲ. ರಸ್ತೆ ಬಳಕೆದಾರರಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚು ಅಪಘಾತವಾಗುತ್ತಿರುವ ಕಪ್ಪು ಚುಕ್ಕೆ ಸ್ಥಳಗಳಲ್ಲಿ ವೈಜ್ಞಾ ನಿಕವಾಗಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ದಾರಿದೀಪ ಗಳನ್ನು, ಅಲ್ಲಲ್ಲಿ ಸೂಚನಾ ಫಲಕಗಳನ್ನು ಅಳವಡಿಸ ಬೇಕು. ಇವುಗಳನ್ನು ಒಂದು ತಿಂಗಳ ಒಳಗೆ ಕೈಗೊಳ್ಳುವ ಮೂಲಕ ಅವುಗಳನ್ನು ಅಪಘಾತ ಮುಕ್ತ ವಲಯವನ್ನಾ ಗಿಸಲು ಪ್ರಯತ್ನಿಸಬೇಕು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ರಾಷ್ಟ್ರೀಯ ಹೆದ್ದಾರಿ ಅಭಿಯಂತರರಿಗೆ ಹಾಗೂ ಗುತ್ತಿಗೆದಾರರಿಗೆ ಸ್ಪಷ್ಟ ಸೂಚನೆಗಳನ್ನು ನೀಡಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕಾಮಗಾರಿಗಳ ಪ್ರಗತಿ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜನಸಾಮಾನ್ಯರು ಹೆದ್ದಾರಿ ಟೋಲ್ ಪಾವತಿಸುವುದರೊಂದಿಗೆ ಸಂಚಾರ ಕೈಗೊಳ್ಳುತ್ತಾರೆ. ಟೋಲ್ ಶುಲ್ಕ ಪಡೆದ ಗುತ್ತಿಗೆದಾರರು ಹೆದ್ದಾರಿ ನಿರ್ವಹಣೆ ಯನ್ನು ಉತ್ತಮವಾಗಿ ಮಾಡುವ ಜೊತೆಗೆ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತದಿಂದ ಪ್ರಾಣ ಕಳೆದುಕೊಳ್ಳು ತ್ತಿರುವ ಸಂಖ್ಯೆ ಹೆಚ್ಚುತ್ತಿದೆ ಎಂದು ಸಂಸದ ಕೋಟ ಕಳವಳ ವ್ಯಕ್ತಪಡಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಎರಡು ವರ್ಷಗಳಿಂದ 250ಕ್ಕೂ ಅಧಿಕ ರಸ್ತೆ ಅಪಘಾತಗಳು ಉಂಟಾಗಿ ಸಾಕಷ್ಟು ಸಾವು-ನೋವುಗಳಾಗಿವೆ. ಕಳೆದ ಎರಡು ತಿಂಗಳಿಂದೀಚೆಗೆ ರಾ.ಹೆದ್ದಾರಿ 66ರಲ್ಲಿ ನಡೆದ ರಸ್ತೆ ಅಪಘಾತದಲ್ಲಿ 8ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೆಜಮಾಡಿಯಿಂದ ಕುಂದಾಪುರವರೆಗೆ 66 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆ. ಪ್ರಸ್ತುತ ಕೋಟೇಶ್ವರದಿಂದ ಹೆಜಮಾಡಿವರೆಗೆ 26 ಕಿ.ಮೀ. ಸರ್ವಿಸ್ ರಸ್ತೆ ಹಾಗೂ 3 ಫುಟ್ ಓವರ್ ಬ್ರಿಡ್ಜ್ ಕಾಮಗಾರಿಗೆ ಈಗಾಗಲೇ ಅನುಮೋದನೆ ದೊರಕಿದೆ. ಶೇ.70ರಷ್ಟು ಕಾಮಗಾರಿಗೆ ಅಗತ್ಯವಿರುವ ಸಾಮಗ್ರಿಗಳನ್ನು ಸಂಗ್ರಹಿಸಿ, ಶೇಖರಿಸಿಕೊಂಡು ಸರ್ವಿಸ್ ರಸ್ತೆ ಕಾಮಗಾರಿಯನ್ನು ಪ್ರಾರಂಭಿಸುವಂತೆ ಅವರು ಗುತ್ತಿಗೆದಾರರಿಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಯ ಪಡುಬಿದ್ರೆ, ಬ್ರಹ್ಮಾವರ ಹಾಗೂ ಕೋಟದಲ್ಲಿ ಮೇಲ್ಸೇತುವೆ ನಿರ್ಮಾಣ ಮಾಡಲು ಡಿಪಿಆರ್ನ್ನು ಕೂಡಲೇ ತಯಾರಿಸಿ ನೀಡಿದಲ್ಲಿ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಅನುಮತಿ ದೊರಕಿಸಿಕೊಡಲಾಗುವುದು. ಈ ಕಾರ್ಯಕ್ಕೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದರು.
ಸೂಚನಾ ಫಲಕ ಅಳವಡಿಸಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕೈಗೊಳ್ಳುತ್ತಿರುವ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕಾಣಿಸುವ ಹಾಗೆ ಕಾಮಗಾರಿಗೆ ಸಂಬಂಧಿಸಿದ ಸೂಚನಾ ಫಲಕಗಳನ್ನು ಅಳವಡಿಸಬೇಕು. ಪಡುಬಿದ್ರೆಯಲ್ಲಿ ದಾರಿ ದೀಪಗಳು ಸರಿಯಾದ ನಿರ್ವಹಣೆ ಇಲ್ಲದೇ ಅಪಘಾತಗಳು ಆಗುತ್ತಿವೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಗುತ್ತಿಗೆದಾರರು ಈ ಕಾರ್ಯಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೆದ್ದಾರಿಯ ನಿರ್ವಹಣೆ ಸರಿಯಿಲ್ಲದೇ ಅಪಘಾತಗಳಾದಲ್ಲಿ ಸಂಬಂಧಪಟ್ಟ ಅಭಿಯಂತರರು ಹಾಗೂ ಗುತ್ತಿಗೆದಾರರ ಮೇಲೂ ನಿರ್ಲಕ್ಷ್ಯ ವಹಿಸಿರುವ ಪ್ರಕರಣದಲ್ಲಿ ಅಪರಾಧಿಯನ್ನಾಗಿಸಲಾಗುವುದು ಎಂದವರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಾತನಾಡಿ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹಲವು ಕಡೆಗಳಲ್ಲಿ ಅಳವಡಿಸಿದ ದಾರಿದೀಪ ಗಳು ಸಾಕಷ್ಟು ಪ್ರಕಾಶಮಾನ ಇಲ್ಲದಿರುವ ದೂರುಗಳ ಕೇಳಿಬರುತಿದ್ದು, ಕನಿಷ್ಠ 240 ವೋಲ್ಟ್ಗಿಂತಲೂ ಹೆಚ್ಚು ಪ್ರಕಾಶಮಾನವಿರುವ ಬಲ್ಬ್ಗಳನ್ನೇ ಅಳವಡಿಸಬೇಕೆಂದು ಸೂಚನೆ ನೀಡಿದರು.
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ, ಉದ್ಯಾವರದಿಂದ ಬಲಾಯಿಪಾದೆವರೆಗಿನ ಸರ್ವಿಸ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಗೊಂಡು ಕೂಡಲೇ ಸರ್ವಿಸ್ ರಸ್ತೆಯ ನಿರ್ಮಾಣ ಮಾಡಬೇಕು ಎಂದು ಸಲಹೆ ನೀಡಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಪಡುಬಿದ್ರೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳಾಗುತಿದ್ದು, ಇದರಿಂದ ಸಾಕಷ್ಟು ಸಾವು-ನೋವಿನ ಪ್ರಕರಣಗಳಾಗುತ್ತಿವೆ. ಮೇಲ್ಸೇತುವೆ ಕಾಮಗಾರಿಯನ್ನು ಆದ್ಯತೆಯ ಮೇಲೆ ಕೈಗೊಂಡಲ್ಲಿ ಅಪಘಾತ ಪ್ರಕರಣಗಳನ್ನು ತಡೆಯಬಹುದು ಎಂದರು.
ರಾಷ್ಟ್ರೀಯ ಹೆದ್ದಾರಿ ಉಳಿಸಿ ಸಮಿತಿಯ ಸದಸ್ಯರು ಬ್ರಹ್ಮಾವರ ನಗರ ವ್ಯಾಪ್ತಿಯಲ್ಲಿ ಸರ್ವಿಸ್ ರಸ್ತೆ, ಫ್ಲೈ ಓವರ್, ವಿದ್ಯುತ್ ದೀಪಗಳ ಅಳವಡಿಕೆ, ರಸ್ತೆಯ ಮೀಡಿಯನ್ ಓಪನಿಂಗ್, ಮೇಲ್ಸೇತುವೆ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಂಡು ಅಪಘಾತಗಳಾಗದಂತೆ ನೋಡಿಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಸಹಾಯಕ ಕಮಿಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಗುತ್ತಿಗೆದಾರರು, ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.







